ದ್ವಾರಕೀಶ್
Born on 19 Aug 1942 (Age 81) Mysore
ದ್ವಾರಕೀಶ್ ಜೀವನಚರಿತ್ರೆ
ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಇವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು.
ಸಿನಿಜೀವನ
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು.
1966ರಲ್ಲಿ ದ್ವಾರಕೀಶ್ ಅವರು ಮಮತೆಯ ಬಂಧನ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್ನಲ್ಲಿ ನಿರ್ಮಿಸಿದರು. 1969ರಲ್ಲಿ ಡಾ.ರಾಜ್ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗ ಪರಿಚಯಸಿದ್ದಾರೆ.
ನಿರ್ದೇಶನ
1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ನಿರ್ಮಾಣ ಸಂಸ್ಥೆ
ಡಾ.ರಾಜ್ಕುಮಾರ್, ವಿಷ್ಣುವರ್ಧನ್ರಂತಹ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಗಳಿಸಿರುವ ದ್ವಾರಕೀಶ್ 'ದ್ವಾರಕೀಶ್ ಚಿತ್ರ' ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಿಸಿದ್ದಾರೆ.
ನಿಧನ: ದ್ವಾರಕೀಶ್ 2024ರ ಏಪ್ರಿಲ್ 16ರಂದು ತಮ್ಮ 81 ವಯಸ್ಸಿನಲ್ಲಿ ನಿಧನರಾದರು. ಅವರು ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಸಂಬಂಧಿತ ಸುದ್ದಿ