ಸಂಚಾರಿ ವಿಜಯ್
ಸಂಚಾರಿ ವಿಜಯ್ ಜೀವನಚರಿತ್ರೆ
ಸಂಚಾರಿ ವಿಜಯ್ ಹೆಸರಿನಿಂದ ಪರಿಚಿತರಾಗಿರುವ ಬಿ. ವಿಜಯ್ ಕುಮಾರ್ ಇವರು ಜನಿಸಿದ್ದು ಜುಲೈ 17, 1983 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದಲ್ಲಿ.
ಇವರದ್ದು ಕಲೆಯ ಹಿನ್ನೆಲೆಯ ಕುಟುಂಬವಾಗಿದ್ದು, ತಂದೆ ಬಸವರಾಜಯ್ಯನವರು ಚಿತ್ರಕಲಾವಿದರು, ಸಂಗೀತ ವಾದ್ಯಗಳನ್ನು ನುಡಿಸುತ್ತಿದ್ದರು. ತಾಯಿ ಗೌರಮ್ಮನವರು ಜಾನಪದ ಕಲಾವಿದರಾಗಿದ್ದು, ಭದ್ರಾವತಿಯ ರೇಡಿಯೋದಲ್ಲಿ ಅನೇಕ ಕಾರ್ಯಕ್ರಗಳನ್ನು ನೀಡಿದ್ದಾರೆ. ಇಂತಹ ಕುಟುಂಬದಲ್ಲಿ ಜನಿಸಿದ ಇವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪ್ರತಿಷ್ಠಿತ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದುಕೊಂಡಿದ್ದಾರೆ.
ನಟನಾ ವೃತ್ತಿ:
ಕೆಲಕಾಲ ಕೆಐಇಟಿ ಶಿಕ್ಷಣ ಸಂಸ್ಥೆಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಇವರು, ತಮ್ಮ ಕನಸನ್ನು ಈಡೇರಿಸಿಕೊಳ್ಳಲು ತಮ್ಮ ಕೆಲಸಕ್ಕೆ ವಿದಾಯ ಹೇಳಿ ಪೂರ್ಣಪ್ರಮಾಣವಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡರು. ಹತ್ತು ವರ್ಷಗಳಿಂದ ಸಂಚಾರಿ ಥಿಯೇಟರ್ ನಲ್ಲಿ ರಂಗ ತಂಡದ ಹಲಾವಾರು ನಾಟಕಗಳಲ್ಲಿ ಅಭಿನಯಿಸುವುದರ ಜೊತೆಗೆ ಕನ್ನಡದ ಹಲವಾರು ರಂಗತಂಡಗಳಲ್ಲಿ ನಟಿಸಿದ್ದಾರೆ. ರಂಗಭೂಮಿಯಲ್ಲಿ ನಟನೆ ಮಾತ್ರವಲ್ಲದೇ ಎರಡು ನಾಟಕಗಳನ್ನು ನಿರ್ದೇಶಿಸಿದ್ದಾರೆ.
ಇವರು ರಂಗಭೂಮಿ ಮತ್ತು ಸಿನೆಮಾ ಕಲಾವಿದರಾಗಿದ್ದು ಪ್ರಮುಖವಾಗಿ ಕನ್ನಡ ಚಿತ್ರರಂಗದ ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಸಿನೆಮದಲ್ಲಿಯೂ ಕೆಲಸ ಮಾಡಿದ್ದಾರೆ. 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಇವರಿಗೆ ಕನ್ನಡದ "ನಾನು ಅವನಲ್ಲ ಅವಳು" ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದ್ದು, ಈ ಚಿತ್ರದಲ್ಲಿ ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ. ಹಾಗೂ ಮತ್ತೊಂದು ಸಿನೆಮಾ "ಹರಿವು"ಅತ್ಯುತ್ತಮ ಕನ್ನಡ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ ಪಡೆಯಿತು.
ಜೂನ್ 12, ರಾತ್ರಿ 11.30 ರ ಸುಮಾರಿಗೆ ಸ್ನೇಹಿತ್ ನವೀನ್ ಜೊತೆ ಬೈಕ್ ನಲ್ಲಿ ಹೋಗುವಾಗ, ಬೈಕ್ ಜಾರಿ ಅಪಘಾತಕ್ಕೆ ಒಳಗಾದರು. ಮೆದುಳು ಮತ್ತು ಬಲ ತೊಡೆಗೆ ತೀವ್ರ ಗಾಯವಾಗಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಾದರು. ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾದರೂ, ವಿಜಯ್ ಮೆದಳು ನಿಷ್ಕ್ರಿಯವಾಯಿತು.. ಹಲವು ಸಮಾಜಿಕ ಕಾರ್ಯಗಳಲ್ಲಿ ತೊಡಗಿದ್ದ ವಿಜಯ್, ಕೊನೆಯುಸಿರೆಳೆಯುವಾಗಲೂ ತಮ್ಮ ಅಂಗಾಂಗಳ ದಾನದ ಮೂಲಕ ಸಮಾಜಕ್ಕೆ ಕೊಡುಗೆ ನೀಡಿದರು. ಜೀವನದಲ್ಲಿ ಹಲವು ಸಂಘರ್ಷಗಳಲ್ಲಿ ಗೆಲವು ಸಾಧಿಸಿದ್ದ ಸಂಚಾರಿ ವಿಜಯ್ ಸಾವು-ಬದುಕಿನ ಸಂಘರ್ಷದಲ್ಲಿ ಸೋತು ಜೂನ್ 14 ರಂದು ನಿಧನರಾದರು.