Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾನು, ಸಂಚಾರಿ ವಿಜಯ್ ಹಾಗೂ ರಾಷ್ಟ್ರೀಯ ಹೆದ್ದಾರಿ 4: ಮಂಸೋರೆಯ ನೆನೆಪುಗಳಿಂದ
ರಾಷ್ಟ್ರೀಯ ಹೆದ್ದಾರಿ 4, ನನ್ನ ಜೀವನದಲ್ಲಿ ಬಹು ಮುಖ್ಯವಾದ ಅಧ್ಯಾಯ. ಬೆಂಗಳೂರು ಚೆನ್ನೈ ನಗರವನ್ನು ಸಂಪರ್ಕಿಸುವ ಇಂದಿನ ರಾಷ್ಟ್ರೀಯ ಹೆದ್ದಾರಿ 75 ಚತುಷ್ಪಥ ರಸ್ತೆ ಆಗುವ ಮೊದಲು ರಾಷ್ಟ್ರೀಯ ಹೆದ್ದಾರಿ 4 ಎಂದಿತ್ತು. ಅದು ನಮ್ಮೂರನ್ನು ಹಾದು ಹೋಗುವ ಹೆದ್ದಾರಿ ಆದ್ದರಿಂದ ಸಹಜವಾಗಿಯೇ ಅದರೊಂದಿಗೆ ಒಂದು ನಾಸ್ಟಾಲಜಿ ಬೆಸೆದುಕೊಂಡಿರುತ್ತದೆ. ಆದರೆ ನನಗೆ ರಾಷ್ಟ್ರೀಯ ಹೆದ್ದಾರಿ 4 ಹೆಚ್ಚು ಮುಖ್ಯವಾದದ್ದು, 'ಹರಿವು' ಸಿನೆಮಾದ ಕಾರಣಕ್ಕೆ.
'ಹರಿವು' ನನ್ನ ಮೊದಲ ನಿರ್ದೇಶನದ ಸಿನೆಮಾ, ಮೊದಲ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ತಂದುಕೊಟ್ಟ ಸಿನೆಮಾ, ನಾನಾ ಕೆಲಸಗಳನ್ನು ಮಾಡಿಕೊಂಡಿದ್ದ ನನಗೆ, ನಿರ್ದೇಶಕನಾಗಿ ಒಂದು ಗಟ್ಟಿಯಾದ ನೆಲೆ ಕೊಟ್ಟ ಸಿನೆಮಾ, ಅದೆಲ್ಲದಕ್ಕಿಂತ ಹೆಚ್ಚಾಗಿ 'ಸಂಚಾರಿ ವಿಜಯ್' ಎಂಬ ಆಪ್ತ ಗೆಳೆಯನನ್ನು ಕೊಟ್ಟ ಸಿನೆಮಾ. ಮುಖ್ಯ ಪಾತ್ರ ನಾಯಕನಾಗಿ ವಿಜಯ್ ಸರ್ ಮೊದಲ ಸಿನೆಮಾ 'ಹರಿವು'.
ನಟ ಸಂಚಾರಿ ವಿಜಯ್ ಇಲ್ಲದ ಒಂದು ವರ್ಷ: ನೆನಪು ಇನ್ನೂ ಹಸಿರು
ರಾಷ್ಟ್ರೀಯ ಹೆದ್ದಾರಿ 4ರಲ್ಲೇ ನಿರ್ದೇಶಕನಾಗಿದ್ದು!
'ಹರಿವು' ಸಿನಿಮಾದ ಮೊದಲ ಶಾಟ್ 2012ರಲ್ಲಿ ಚಿತ್ರೀಕರಣವಾದದ್ದು ಇದೇ ರಾಷ್ಟ್ರೀಯ ಹೆದ್ದಾರಿ 4, ನಾನು ನಿರ್ದೇಶಕನಾಗಿ ಮೊದಲ ಬಾರಿಗೆ Action-Cut ಹೇಳಿದ್ದು ಇದೇ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ. ಆ ಸಿನೆಮಾ ಚಿತ್ರೀಕರಣವಾದದ್ದು ಇದೇ ರಾಷ್ಟ್ರೀಯ ಹೆದ್ದಾರಿ 4ರಲ್ಲಿ. 'ಹರಿವು' ಸಿನೆಮಾದ ಮುಖ್ಯ ಕತೆ ಅನಾವರಣಗೊಳ್ಳುವುದು ಇದೇ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ. 2012ರಲ್ಲಿ ಮೊದಲ ಬಾರಿಗೆ ಚಿತ್ರೀಕರಣ ಆರಂಭಿಸಿದಾಗ ಮಾಡಿಕೊಂಡ ಅವಾಂತರಗಳು, ಕಲಿಸಿದ ಪಾಠಗಳು, ನಿರ್ದೇಶನದ ಕಡೆಗೆ ಇರಬೇಕಾದ ಬದ್ಧತೆಗಳನ್ನು ಕಲಿಸಿಕೊಟ್ಟದ್ದು ಇದೇ ರಾಷ್ಟ್ರೀಯ ಹೆದ್ದಾರಿ 4.
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಲವು ಬಾರಿ ಒಟ್ಟಿಗೆ ಪಯಣ
ಈ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ ನಾನು 'ಸಂಚಾರಿ ವಿಜಯ್' ಸರ್ ಸಾಕಷ್ಟು ಬಾರಿ ಜೊತೆಯಾಗಿ ಪ್ರಯಾಣ ಮಾಡಿದ್ದೇವೆ. ಆದರೆ ಈ ರಾಷ್ಟ್ರೀಯ ಹೆದ್ದಾರಿ 4 ನನ್ನ ಪಾಲಿಗೆ ಶಾಶ್ವತವಾದ ದುಃಖದ ನೆನಪೊಂದನ್ನು ಉಳಿಸಿ ಬಿಡುತ್ತದೆ ಎಂದು ಯಾವತ್ತೂ ಯೋಚಿಸಿರಲಿಲ್ಲಾ.
ಪರಿಚಯ ಆಗಿದ್ದು, ಅಗಲಿ ಹೋಗಿದ್ದು ಒಂದೇ ದಿನ!
ಎಷ್ಟೊ ಕನಸುಗಳು, ನಗು, ಜಗಳ, ನೆನಪುಗಳ ಮೂಲಕ ಸಂಚರಿಸಿದ್ದ ಈ ರಾಷ್ಟ್ರೀಯ ಹೆದ್ದಾರಿ 4ರ ಮೇಲೆ, ನನ್ನ ಗೆಳೆಯನ ಜೊತೆ ಅಂತಿಮ ಪ್ರಯಾಣ ಮಾಡುವ ದಿನ ಬಂದಿದ್ದು ನನ್ನ ಪಾಲಿನ ಬಹು ದೊಡ್ಡ ದುರಂತ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ, ಈ ರಾಷ್ಟ್ರೀಯ ಹೆದ್ದಾರಿ 4ರ ಮೂಲಕ ಆಪ್ತ ಗೆಳೆಯನನ್ನು Ambulance ಅಲ್ಲಿ ಮಲಗಿಸಿಕೊಂಡು, ಅವರ ಆಪ್ತವಾದ ಸಾಕಷ್ಟು ಕನಸುಗಳನ್ನು ಕಂಡಿದ್ದ ಅವರ ದುಡಿಮೆಯ ಗಳಿಕೆಯಿಂದ ಕೊಂಡುಕೊಂಡಿದ್ದ ಅವರ ತೋಟಕ್ಕೆ ಕರೆದುಕೊಂಡು ಹೋಗಿ ಬಿಟ್ಟು ಬರುವಂತ ದಿನ ಬರುತ್ತದೆ ಎಂದು ಯಾವತ್ತೂ ಊಹಿಸಿರಲಿಲ್ಲಾ... ಅಂತ ದುರಂತದ ದಿನಕ್ಕೆ ಇಂದಿಗೆ ಒಂದು ವರ್ಷ. ವಿಜಯ್ ಸರ್ ನನಗೆ ಪರಿಚಯ ಆಗಿದ್ದು, ಮೊದಲ ಬಾರಿ ಮಾತನಾಡಿದ್ದು 13-06-2012 ಅವರು ನನ್ನೊಂದಿಗೆ ಮಾತು ನಿಲ್ಲಿಸಿ ಮೌನವಾಗಿದ್ದು 13-06-2021.
ಇಬ್ಬರು ಆಪ್ತರ ಕೊನೆ ಪಯಣ ಇದೇ ಎನ್ಎಸ್ 4 ಮೇಲೆ
ಅಪ್ಪನ ಜೊತೆಯ ನೆನಪಿನ ಕೊನೆಯ ಪಯಣವೂ ಇದೇ ರೀತಿ ಆಂಬ್ಯುಲೆನ್ಸ್ ನಲ್ಲೇ ಸಾಗಿತ್ತು, ಅಷ್ಟೇ ಆಪ್ತನಾದ ಗೆಳೆಯನ ಜೊತೆಯ ಕೊನೆಯ ಪಯಣವೂ ಆಂಬ್ಯುಲೆನ್ಸಲ್ಲೇ ಸಾಗುವಂತಾಯಿತು. ಅದು ನಮ್ಮಿಬ್ಬರ ಪಾಲಿನ, ಜೀವನದಲ್ಲಿ ಮುಖ್ಯವಾದ ಹೆದ್ದಾರಿಯಲ್ಲಿ. ಆ ಹೆದ್ದಾರಿಯಲ್ಲಿ ಒಂದೊಂದು ಹಂತದಲ್ಲೂ ಒಂದೊಂದು ನೆನಪುಗಳಿವೆ, ಪ್ರತೀ ಬಾರಿ ಹೋದಾಗಲೂ ಆ ನೆನಪುಗಳು ಕಾಡುತ್ತಲೇ ಇರುತ್ತವೆ, ಮಿಸ್ ಯೂ 'ಸಂಚಾರಿ ವಿಜಯ್' ಸರ್.
(ರಾಷ್ಟ್ರಪ್ರಶಸ್ತಿ ವಿಜೇತ ನಟ, ಮಾನವೀಯ ವ್ಯಕ್ತಿ ಸಂಚಾರಿ ವಿಜಯ್ ಅಗಲಿ ಇಂದಿಗೆ ಒಂದು ವರ್ಷ. ಸಂಚಾರಿ ವಿಜಯ್ ಹಾಗೂ ನಿರ್ದೇಶಕ ಮಂಸೋರೆ ಬಹು ಆತ್ಮೀಯ ಸ್ನೇಹಿತರಾಗಿದ್ದರು. ಅಗಲಿದ ಸ್ನೇಹಿತನ ನೆನದು ಮಂಸೋರೆ ಬರೆದಿರುವ ಲೇಖನ ಇದು)