ಶಬರಿಮಲೆಯಲ್ಲಿ ಮಮ್ಮುಟ್ಟಿಗಾಗಿ ಮೋಹನ್ ಲಾಲ್ ವಿಶೇಷ ಪೂಜೆ ಮಾಡಿಸಿದ್ದು ತಪ್ಪಾ ? ಜಾವೇದ್ ಅಖ್ತರ್ ಹೇಳಿದ್ದೇನು ?
ಗೆಳೆತನ ಜೀವನದ ಅತ್ಯಮೂಲ್ಯ ಬಂಧ. ಬಾಲ್ಯದಿಂದ ಮುಪ್ಪಿನವರೆಗೆ ಬೆಸೆದುಕೊಳ್ಳುವಂತಹ ಬಾಂಧವ್ಯ. ಇಂತಹ ಗೆಳೆತನಕ್ಕೆ ಈಗ ಧರ್ಮ ಅಡ್ಡಿಯಾಗುತ್ತಿದೆ. ಇದಕ್ಕೆ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ ಅವರ ವಿಚಾರದಲ್ಲಿ ಕೇಳಿ ಬರುತ್ತಿರುವ ಅಪಸ್ವರದ ಕೂಗು ಸದ್ಯದ ಸಾಕ್ಷಿ.
ಹೌದು, 73ರ ಹರೆಯದ ಮಮ್ಮುಟ್ಟಿ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಕಳೆದ ಕೆಲ ದಿನಗಳಿಂದ ಚಾಲ್ತಿಯಲ್ಲಿದೆ. ಮಮ್ಮುಟ್ಟಿ ಅವರ ಅಭಿಮಾನಿಗಳಲ್ಲಿ ಆತಂಕ ಕೂಡ ಮನೆ ಮಾಡಿದೆ. ನಿಜಾ. ಮಮ್ಮುಟ್ಟಿ ಅವರ ತಂಡ ಈ ಸುದ್ದಿಯನ್ನು ಅಲ್ಲಗೆಳೆದಿದೆ. ಸತ್ಯಕ್ಕೆ ದೂರವಾದ್ದದು ಎಂದು ಹೇಳಿದೆ. ಮಮ್ಮುಟ್ಟಿ ಅವರು ರಂಜಾನ್ ಉಪವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗುತ್ತಿಲ್ಲ ಬದಲಿಗೆ ಚೆನ್ನೈನಲ್ಲಿ ತಮ್ಮ ಕುಟುಂಬದ ಜೊತೆ ಅವರು ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿದೆ. ಕೆಲ ದಿನಗಳ ನಂತರ ಅವರು ಚಿತ್ರೀಕರಣಕ್ಕೆ ಮರಳಲಿದ್ದಾರೆ, ಮೋಹನ್ ಲಾಲ್ ಜೊತೆ ನಟಿಸುತ್ತಿರುವ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಆದರೂ ಅಭಿಮಾನಿಗಳಲ್ಲಿ ಆತಂಕ ಇದ್ದೇ ಇದೆ.

ಇದರ ನಡುವೆ ಹತ್ತು ದಿನದ ಹಿಂದೆ ತಮ್ಮ ಸ್ನೇಹಿತನ ಆರೋಗ್ಯಕ್ಕೆ ಶಬರಿ ಮಲೆ ದೇವಸ್ಥಾನದಲ್ಲಿ ಮೋಹನ್ ಲಾಲ್ ಪ್ರಾರ್ಥನೆ ಮಾಡಿದ್ದು, ಮಮ್ಮುಟ್ಟಿ ಅವರ ನಿಜವಾದ ಹೆಸರು ಮುಹಮ್ಮದ್ ಕುಟ್ಟಿ ಎಂದು ಹೇಳಿ ಅವರ ನಕ್ಷತ್ರದ ಹೆಸರನ್ನು ಹೇಳಿ ಉಷಾ ಪೂಜೆ ನೆರವೇರಿಸಿದ್ದು ಅನೇಕರ ಕಣ್ಣನ್ನು ಕೆಂಪಾಗಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರದ ಕುರಿತು ಪರ ವಿರೋಧದ ಚರ್ಚೆ ಕೂಡ ನಡೆಯುತ್ತಿದೆ.
ಕೆಲವರು ಇದೇ ಸೌಹಾರ್ದತೆಯ ಸಂಕೇತ, ಭಾವೈಕ್ಯತೆಯ ಪ್ರತಿಬಿಂಬ ಎಂದರೆ ಇನ್ನು ಕೆಲವರು ಇಸ್ಲಾಂ ಧರ್ಮದ ನೀತಿಗೆ ವಿರುದ್ಧವಾದ ಕೆಲಸವನ್ನು ಮೋಹನ್ ಲಾಲ್ ಮಾಡಿದ್ದಾರೆ, ಮಮ್ಮುಟ್ಟಿ ಅಲ್ಲಾಹನನ್ನು ಮಾತ್ರ ಆರಾಧಿಸಬೇಕೆಂದು ವಾದವನ್ನು ಮಾಡುತ್ತಿದ್ದಾರೆ. ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶ ಇಲ್ಲ ಮುಮ್ಮುಟ್ಟಿ ತಮ್ಮ ಹೆಸರಿನಲ್ಲಿ ಪೂಜೆ ಮಾಡಿಸುವಂತೆ ಮೋಹನ್ ಲಾಲ್ಗೆ ಹೇಳಿದ್ದರೆ, ಇಸ್ಲಾಂ ಧರ್ಮದ ವಿರುದ್ಧದ ಈ ನಡುವಳಿಕೆಗೆ ಕೂಡಲೇ ಮಮ್ಮುಟ್ಟಿ ಅಲ್ಲಾಹನಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹವನ್ನು ಮಾಡುತ್ತಿದ್ದಾರೆ. ಒಂದು ವೇಳೆ ಮಮ್ಮುಟ್ಟಿಗೆ ಗೊತ್ತಿರದೇ ಮೋಹನ್ ಲಾಲ್ ಪೂಜೆ ಮಾಡಿಸಿದ್ದರೆ ಯಾವುದೇ ತಪ್ಪಿಲ್ಲ ಎಂದು ಹೇಳುತ್ತಿದ್ದಾರೆ. ಈ ವಾದ ಪ್ರತಿವಾದದ ನಡುವೆ ಭಾರತದ ಪ್ರಖ್ಯಾತ ಗೀತ ರಚನೆಕಾರ ಮತ್ತು ಚಿತ್ರಕಥೆಗಾರ ಜಾವೇದ್ ಅಖ್ತರ್ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ಧಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಜಾವೇದ್ ಅಖ್ತರ್ ಭಾರತದ ಪ್ರತಿಯೊಬ್ಬ ಮಮ್ಮುಟ್ಟಿಗೂ ಮೋಹನ್ ಲಾಲ್ ಅಂತಹ ಸ್ನೇಹಿತ ಇರಬೇಕು, ಪ್ರತಿಯೊಬ್ಬ ಮೋಹನ್ ಲಾಲ್ಗೂ ಮಮ್ಮುಟ್ಟಿಯಂತಹ ಗೆಳೆಯ ಇರಬೇಕೆಂದು ನಾನು ಬಯಸುತ್ತೇನೆ, ಇವರ ಈ ಸ್ನೇಹ ಸಂಕುಚಿತ ಮನಸ್ಸಿನ ವ್ಯಕ್ತಿಗಳಿಗಿಂತ, ನಕಾರಾತ್ಮಕ ಆಲೋಚನೆ ಮಾಡುವರಿಗಿಂತ ಮೀಗಿಲಾದದ್ದು ಎಂದು ಹೇಳಿದ್ದಾರೆ. ಸದ್ಯ ಜಾವೇದ್ ಅಖ್ತರ್ ಈ ಅಭಿಪ್ರಾಯ ಈ ವಿವಾದಕ್ಕೆ ಮತ್ತಷ್ಟು ಕಾವು ನೀಡಿದೆ.
ಅಂದ್ಹಾಗೇ ಈ ಪೂಜೆ ಸಲ್ಲಿಸಿದ ವಿಚಾರ ವಿವಾದದ ಸ್ವರೂಪ ಪಡೆದುಕೊಂಡ ನಂತರ ಈ ವಿಚಾರದ ಕುರಿತು ಮಾತನಾಡಿದ್ದ ಮೋಹನ್ ಲಾಲ್, ಪೂಜೆ ಸಲ್ಲಿಸುವುದು ಬಿಡುವುದು ನನ್ನ ವ್ಯೆಯಕ್ತಿಕ ವಿಚಾರ ಎಂದು ಹೇಳಿದ್ದರು. ಮಮ್ಮುಟ್ಟಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ ಹೀಗಾಗಿ ಪೂಜೆ ಸಲ್ಲಿಸಿದ್ದೇನೆ ಅದರಲ್ಲಿ ತಪ್ಪೇನು ಎನ್ನುವ ಪ್ರಶ್ನೆ ಮಾಡಿದ್ದರು. ಇನ್ನು ಇದೇ ವಿಚಾರಕ್ಕೆ ಮೋಹನ್ ಲಾಲ್ ಪಕ್ಕ ಕುಂತಿದ್ದ ಪೃಥ್ವಿರಾಜ್ ಸುಕುಮಾರನ್ ಕೂಡ ಪ್ರತಿಕ್ರಿಯೆ ನೀಡಿದ್ದರು. ಮೋಹನ್ ಲಾಲ್ ಈ ರೀತಿಯ ಪೂಜೆಗಳನ್ನು ಮಾಡುತ್ತಿರುವುದು ಇದು ಮೊದಲೇನಲ್ಲ ಈ ಬಾರಿ ಅದು ಸುದ್ದಿಯಾಗಿದೆ ಅಷ್ಟೇ ಎಂದು ಹೇಳಿದ್ದರು.


Click it and Unblock the Notifications











