ರಾಘವೇಂದ್ರ ರಾಜ್ ಕುಮಾರ್ ಕಾರು ಅಪಘಾತ
ನಟ ರಾಘವೇಂದ್ರ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ(ಆ.7) ಅಪಘಾತಕ್ಕೀಡಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಬಳಿಯ ಊನಗಲ್ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 10.30ರ ಸುಮಾರಿಗೆ ಅವರ ಕಾರು ಅಪಘಾತಕ್ಕೀಡಾಯಿತು. ಅವರು ಸಾಮೂಹಿಕ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದರು. ರಾಘವೇಂದ್ರ ರಾಜ್ ಕುಮಾರ್ ಅವರು ಅಪಾಯದಿಂದ ಪಾರಾಗಿದ್ದಾರೆ.
ಅಪಘಾತ ಹೇಗೆ ಸಂಭವಿಸಿತು?
ಸಾಮೂಹಿಕ ವಿವಾಹ ಸಮಾರಂಭಕ್ಕೆ ಹಾಜರಾಗಲು ರಾಘವೇಂದ್ರ ರಾಜಕುಮಾರ್ ಅವರು ಬಾಗೇಪಲ್ಲಿಗೆ ಪ್ರಯಾಣ ಬೆಳೆಸಿದ್ದರು. ಬಾಗೇಪಲ್ಲಿ ಬಳಿಯ ಊನಗಲ್ (ರಾಷ್ಟ್ರೀಯ ಹೆದ್ದಾರಿ 7) ಎಂಬ ಗ್ರಾಮದ ಬಳಿ ಹಾಕಲಾಗಿದ್ದ ರಸ್ತೆ ಉಬ್ಬನ್ನು ದಾಟಬೇಕಾದರೆ ಹಿಂದಿನಿಂದ ಬಂದ ಮಾರುತಿ ಕಾರು ಡಿಕ್ಕಿ ಹೊಡೆಯಿತು. ಇದರಿಂದ ರಾಘವೇಂದ್ರ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಯಿತು.
ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಆಗಮಿಸಿದ್ದರು. ಆನಂತರ ರಾಘವೇಂದ್ರ ರಾಜ್ ಕುಮಾರ್ ಅವರು ಮತ್ತೊಂದು ಕಾರಿನಲ್ಲಿ ಪ್ರಯಾಣ ಬೆಳೆಸಿದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)


Click it and Unblock the Notifications











