ಸೆ.19ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ
ನಟ ದರ್ಶನ್ ಅವರಿಗೆ ಒಂದನೇ ಎಸಿಎಂಎಂ ನ್ಯಾಯಾಲಯ ಜಾಮೀನು ನಿರಾಕರಿಸಿದ ಕಾರಣ ಅವರು ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇಂದು (ಸೆ.14) ದರ್ಶನ್ ಕೇಸನ್ನು ಕೈಗೆತ್ತಿಕೊಂಡ ಸೆಷನ್ಸ್ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.
ಈ ಮೂಲಕ ದರ್ಶನ್ ಬಂಧನ ಪ್ರಕರಣ ಮತ್ತಷ್ಟು ಕಗ್ಗಂಟಾಗಿ ಪರಿಣಮಿಸಿದೆ. ದರ್ಶನ್ ಅವರ ಮುಂದಿನ ದಾರಿ ಹೈಕೋರ್ಟ್ ಮೆಟ್ಟಿಲೇರುವುದು. ತಮ್ಮ ಪತ್ನಿ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಎದುರಿಸುತ್ತಿರುವ ದರ್ಶನ್ ನ್ಯಾಯಾಂಗ ಬಂಧನದಲ್ಲಿ ಮುಂದುವರಿಯಲಿದ್ದಾರೆ.
ದರ್ಶನ್ಗೆ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ಅವರ ಅಭಿಮಾನಿಗಳು ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರು ನಿರೀಕ್ಷಿಸಿದ್ದರು. ಆದರೆ ಅವರು ಎಣಿಸಿದಂತೆ ಆಗಲಿಲ್ಲ. ಆರೋಪಿ ಪರ ವಕೀಲ ಸಿ ಆರ್ ರಾಘವೇಂದ್ರರೆಡ್ಡಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಏತನ್ಮಧ್ಯೆ ಅನಾರೋಗ್ಯದಿಂದ ಬಳಲುತ್ತಿರುವ ದರ್ಶನ್ಗೆ ಅಸ್ತಮಾ ನಿಯಂತ್ರಣಕ್ಕೆ ಬರುತ್ತಿಲ್ಲ. ಆದ್ದರಿಂದ ಅವರಿಗೆ ಸ್ಟಿರಾಯ್ಡ್ ನೀಡಲಾಗುತ್ತಿದೆ. ಅಸ್ತಮಾ ನಿಯಂತ್ರಣಕ್ಕೆ ಬಂದರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ನಿರ್ದೇಶಕ ಡಾ.ಶಶಿಧರ್ ಬುಗ್ಗಿ. (ದಟ್ಸ್ಕನ್ನಡ ಸಿನಿವಾರ್ತೆ)


Click it and Unblock the Notifications











