67ನೇ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭದಲ್ಲಿ ಡಾ.ಪುನೀತ್ ರಾಜ್ಕುಮಾರ್ಗೆ ಜೀವಮಾನ ಸಾಧನೆ ಪ್ರಶಸ್ತಿ!
ಪ್ರತಿಷ್ಠಿತ ಫಿಲ್ಮ್ ಫೇರ್ ಸೌತ್ ಪ್ರಶಸ್ತಿ ಸಮಾರಂಭ ಈ ಬಾರಿ ಬೆಂಗಳೂರಿನಲ್ಲಿಯೇ ನಡೆಯುತ್ತಿರೋದು ಗೊತ್ತೇ ಇದೆ. ಇಂದು (ಅಕ್ಟೋಬರ್ 09) ಸಂಜೆಯಿಂದ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭ ಆರಂಭ ಆಗಿದೆ. ದಕ್ಷಿಣ ಭಾರತದ ಖ್ಯಾತ ತಾರೆಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
2020-2021ನೇ ಸಾಲಿನಲ್ಲಿ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಅದ್ಭುತ ಸಿನಿಮಾ ಬಿಡುಗಡೆಯಾಗಿತ್ತು. ಈ ಸಾಲಿನಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಸಿನಿಮಾಗಳಿಗೆ ಈ ವರ್ಷ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಈಗಾಗಲೇ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭಕ್ಕೆ ದಿಗ್ಗಜರೆಲ್ಲಾ ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿರುವುದರಿಂದ ಸ್ಯಾಂಡಲ್ವುಡ್ನ ದಿಗ್ಗಜರು ಈ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಸಾಧನೆಯನ್ನು ನೆನಪಿಸಿಕೊಳ್ಳಲಾಗಿದೆ.

ಅಪ್ಪುಗೆ ಜೀವಮಾನ ಸಾಧನೆ ಪ್ರಶಸ್ತಿ
ಈ ಬಾರಿಯ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಹೈಲೈಟ್. ಕಳೆದ ವರ್ಷ ಅಪಾರ ಅಭಿಮಾನಿಗಳನ್ನು ಅಗಲಿದ ಪವರ್ಸ್ಟಾರ್ಗೆಸ ವಿಶೇಷ ಪ್ರಶಸ್ತಿಯನ್ನು ನೀಡಲಾಗಿದೆ. ಸಿನಿಮಾ ಕ್ಷೇತ್ರದಲ್ಲಿ ಪುನೀತ್ ರಾಜ್ಕುಮಾರ್ ಮಾಡಿದ ಸಾಧನೆಯನ್ನು ಪರಿಗಣಿಸಿ, ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 2020 ಹಾಗೂ 2021ರ ಮರಣೋತ್ತರ ಜೀವನಮಾನ ಸಾಧನೆ ಪ್ರಶಸ್ತಿಯನ್ನು ಪುನೀತ್ ರಾಜ್ಕುಮಾರ್ ಅವರಿಗೆ ನೀಡಲಾಗಿದೆ. ಈ ಪ್ರಶಸ್ತಿಯನ್ನು ಪುನೀತ್ ಸಹೋದರಿ ಸ್ವೀಕರಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್ಕುಮಾರ್ ಉಪಸ್ಥಿತಿ
ದಕ್ಷಿಣ ಭಾರತದ ನಾಲ್ಕು ಚಿತ್ರರಂಗ ಒಂದೆಡೆ ಸೇರಿದೆ. ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್ ಹಾಗೂ ಮಾಲಿವುಡ್ ಚಿತ್ರರಂಗಗಳು ಒಂದೆಡೆ ಸೇರಿದ್ದು, ಬಹುತೇಕ ದಿಗ್ಗಜರು ಈ ಸಮಾರಂಭಕ್ಕೆ ಆಗಮಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೂ ಆಹ್ವಾನ ನೀಡಲಾಗಿತ್ತು. ಹೀಗಾಗಿ ಅಶ್ವಿನಿ ಪುನೀತ್ ರಾಜ್ಕುಮಾರ್ ಕೂಡ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸ್ಯಾಂಡಲ್ವುಡ್ ಗಣ್ಯರು ಉಪಸ್ಥಿತಿ
ಹಲವು ವರ್ಷಗಳ ಬಳಿಕ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭ ಬೆಂಗಳೂರಿನಲ್ಲಿ ನಡೆಯುತ್ತಿದೆ. ಹೀಗಾಗಿ ಸ್ಯಾಂಡಲ್ವುಡ್ನ ಸ್ಟಾರ್ ನಟರು ಹಾಗೂ ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ರಮೇಶ್ ಅರವಿಂದ್, ದಿಗಂತ್, ಐಂದ್ರಿತಾ ರೇ, ಡಾಲಿ ಧನಂಜಯ್, ಸುಮಲತಾ, ಪ್ರಿಯಾಮಣಿ, ರಘು ದೀಕ್ಷಿತ್, ನೀನಾಸಂ ಸತೀಶ್, ಹರ್ಷಿಕಾ ಪೂಣಚ್ಚ. ನಿಶ್ವಿಕಾ ನಾಯ್ಡು ಸೇರಿದಂತೆ ಹಲವು ಮಂದಿ ಗಣ್ಯರು ಭಾಗವಹಿಸಿದ್ದಾರೆ. ಈ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಮತ್ತಷ್ಟು ಕಳೆ ಬಂದಿದೆ.

ದಕ್ಷಿಣ ಭಾರತದ ಸ್ಟಾರ್ ನಟ-ನಟಿಯರು ಭಾಗಿ
ಫಿಲ್ಮ್ ಫೇರ್ ಸೌತ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪೂಜಾ ಹೆಗ್ಡೆ,ಮೃಣಾಲ್ ಠಾಕೂರ್, ಕೃತಿ ಶೆಟ್ಟಿ, ಸಾನಿಯಾ ಐಯ್ಯಪ್ಪನ್, ಸಾಯಿ ಪಲ್ಲವಿ, ಆರ್ ಮಾಧವನ್, ಅಲ್ಲು ಅರ್ಜುನ್, ಪುಷ್ಪ ಚಿತ್ರದ ನಿರ್ದೇಶಕ ಸುಕುಮಾರ್, ಟಬು, ಪ್ರಿಯಾ ಪ್ರಕಾಶ್ ವಾರಿಯರ್, ಶಾಲಿನಿ ಪಾಂಡೇ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇಂದು (ಅಕ್ಟೋಬರ್ 09) ದಕ್ಷಿಣ ಭಾರತದ ನಾಲ್ಕೂ ಭಾಷೆಯ ಸಿನಿಮಾಗಳಿಗೆ ಹಲವು ಪ್ರಶಸ್ತಿಗಳನ್ನು ನೀಡಲಾಗಿದೆ.


Click it and Unblock the Notifications











