ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ನಟ ಧನಂಜಯ ಸಂತಾಪ
ದೇಶಕಂಡ ಅಭಿನವ ವಿವೇಕಾನಂದ, ಶತಮಾನದ ಸಂತ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು(82) ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದಲೇ ಇಹಲೋಕ ತ್ಯಜಿಸಿದ್ದಾರೆ. ನಟ ಧನಂಜಯ ಸೇರಿದಂತೆ ಭಕ್ತರು, ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ಮುಖಂಡರು ಶ್ರೀಗಳ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಕೋರುತ್ತಿದ್ದಾರೆ. ಅವರ ಭಕ್ತ ಗಣಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ನಟ ಧನಂಜಯ ಟ್ವೀಟ್ ಮಾಡಿ "ಶತಮಾನದ ಸಂತ, ನಾಡು ಕಂಡ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾಗಿರವುದು ತುಂಬಾ ನೋವುಂಟು ಮಾಡಿದೆ.... ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಜ್ಞಾನದ ಬೆಳಕು ನಮ್ಮನ್ನು ಸದಾ ಕಾಯುತ್ತಿರಲಿ" ಎಂದು ಬರೆದುಕೊಂಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ಬಹಳ ಆಳವಾದ ಅಧ್ಯಯನ ನಡೆಸಿದ್ದರು. ಸೌಮ್ಯ ಸ್ವಭಾವದವರೂ ಆಗಿದ್ದ ಅವರು, ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನೈಪುಣ್ಯತೆ ಸಾಧಿಸಿದ್ದರು.ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24ರಂದು ಶ್ರೀಗಳು ಹುಟ್ಟಿದ್ದರು. ಅಲ್ಲಿಯೇ 4ನೇ ತರಗತಿವರೆಗೆ ಅಲ್ಲೇ ಓದಿದ ಶ್ರೀಗಳು ನಂತರ ಮಲ್ಲಿಕಾರ್ಜುನ ಸ್ವಾಮಿಗಳ ಮಾರ್ಗದರ್ಶನದಲ್ಲಿ ಬೆಳೆದರು.

ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬರುತ್ತಿದ್ದರು. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಲೀನ ಆಗಿಬಿಡುತ್ತಿದ್ದರು. ವಿಜಯಪುರದ ಜ್ಞಾನಯೋಗಾಶ್ರಮ ಜನರಿಗೆ ಜ್ಞಾನದಾಸೋಹ ನೀಡುವ ಕೇಂದ್ರವಾಗಿದ್ದು ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಸಿದ್ದೇಶ್ವರರ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಅಲ್ಲಿಂದ ಮುಂದೆ ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು.
ಸಿದ್ದೇಶ್ವರ ಶ್ರೀಗಳು ಕೇಂದ್ರ ಸರ್ಕಾರ ಘೋಷಿಸಿದ್ದ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ಅತ್ಯುನ್ನತ ಪ್ರಶಸ್ತಿಗಳನ್ನು ನಯವಾಗಿಯೇ ನಿರಾಕರಿಸಿ ಸಜ್ಜನಿಕೆ ಮರೆದಿದ್ದರು. ನಾಳೆ ಸಂಜೆ 5 ಗಂಟೆಗೆ ಶ್ರೀಗಳ ಇಚ್ಛೆಯಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ನಾಳೆ ವಿಜಯಪುರ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಿಗೆ ರಜೆ ಘೋಷಿಸಲಾಗಿದೆ.


Click it and Unblock the Notifications











