"ಇದು ರಾಮ ರಾಜ್ಯವೊ ಹರಾಮ್ ರಾಜ್ಯವೊ?" ಮತ್ತೆ ಸಿಡಿದೆದ್ದ ನಟ ಕಿಶೋರ್
ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ರೈತರು ಸಿಡಿದೆದ್ದಿದ್ದಾರೆ. ಹೀಗಾಗಿ ರೈತ ಸಂಘಟನೆಗಳು ದೆಹಲಿ ಚಲೋ ಮರವಣಿಗೆ ಮಾಡುತ್ತಿದ್ದಾರೆ. ಈ ವೇಳೆ ರೈತರನ್ನು ತಡೆಯುವ ಸಲುವಾಗಿ ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಸೇರಿದಂತೆ ಬಂಧವನ್ನು ಖಂಡಿಸುತ್ತಿದ್ದಾರೆ.
ಸದ್ಯ ರೈತರ 'ದೆಹಲಿ ಚಲೋ' ಪ್ರತಿಭಟನೆ ಇಂದಿಗೆ (ಫೆಬ್ರವರಿ 14) 2ನೇ ದಿನಕ್ಕೆ ಕಾಲಿಟ್ಟಿದೆ. ರೈತರು ಈ ದಿನ ಶಂಭು ಗಡಿಯಿಂದ ಪ್ರತಿಭಟನೆ ಆರಂಭಿಸಿದ್ದರು. ಇಲ್ಲಿನ ಗಡಿಪ್ರದೇಶಗಳಲ್ಲಿ ರೈತರನ್ನು ತಡೆಯುವ ಪ್ರಯತ್ನ ನಡೆದಿತ್ತು. ಆದರೂ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ರೈತರ ಪ್ರತಿಭಟನೆ ದಿನದಿಂದ ದಿನಕ್ಕೆ ಉಗ್ರ ಸ್ವರೂಪ ತಾಳುವ ಲಕ್ಷಣಗಳಿವೆ. ಇದೇ ಸಂದರ್ಭದಲ್ಲಿ ನಟ ಕಿಶೋರ್ ಮಾಡಿರುವ ಇನ್ಸ್ಟಾಗ್ರಾಂ ಪೋಸ್ಟ್ ವೈರಲ್ ಆಗುತ್ತಿದೆ.

ಮೊದಲಿನಿಂದಲೂ ನಟ ಕಿಶೋರ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಲೇ ಬಂದಿದ್ದಾರೆ. ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಕೇಂದ್ರ ಸರ್ಕಾರ ವಿರುದ್ಧ, ಅವರ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈಗ ರೈತರ 'ದೆಹಲಿ ಚಲೋ' ಹೋರಾಟದ ಸಂದರ್ಭದಲ್ಲಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. "ಪ್ರೀತಿಯ ದಿನದಂದು ದ್ವೇಷದ ಪ್ರತಿನಿಧಿಗಳ ಅಟ್ಟಹಾಸ ..ಪ್ರಜೆಗಳ ಪ್ರತಿಭಟನೆಯ ದನಿಯಡಗಿಸುವುದು ಪ್ರಜಾಪ್ರಭುತ್ವವಲ್ಲವೇ ಅಲ್ಲ. ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದೇಶವಿಡೀ ಒಂದಾಗಿ ಬ್ರಿಟೀಷರ ವಿರುದ್ಧ ನಿಂತಾಗ ಬ್ರಿಟಿಷರ ಪರ ನಿಂತ ಜನರಿಂದ ಬೇರೇನು ನಿರೀಕ್ಷಿಸಲು ಸಾಧ್ಯ?" ಎಂದು ಹೇಳಿದ್ದಾರೆ.
ಈ ಹಿಂದೆ ಕಿಶೋರ್ ಹಲವು ಬಾರಿ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದರು. ರಾಮ ಮಂದಿರ ಉದ್ಘಾಟನೆ ವೇಳೆನೂ ಕಿಶೋರ್ ರಾಂಗ್ ಆಗಿದ್ದರು.
ಬಹುಭಾಷಾ ನಟ ಕಿಶೋರ್ ಇನ್ಸ್ಟಾಗ್ರಾಂನಲ್ಲಿ ಕೆಲವು ಪತ್ರಿಕೆಗಳ ತುಣುಕುಗಳನ್ನು ಹಂಚಿಕೊಂಡಿದ್ದು, ಜೊತೆಗೆ ರೈತರನ್ನು, ಯೋಧರನ್ನು ದೇಶದ್ರೋಹಿಗಳಂತೆ ನಡೆಸಿಕೊಳ್ಳುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ವರ್ಷದ ಹಿಂದೆ 700 ಜನ ರೈತರು ಪ್ರಾಣ ಬಿಟ್ಟಿದ್ದರ ಬಗ್ಗೆ ಕಿಡಿಕಾರಿದ್ದಾರೆ. ಕಿಶೋರ್ ಮಾಡಿದ ಪೋಸ್ಟ್ನಲ್ಲಿ ಹೀಗಿದೆ.

ನಟ ಕಿಶೋರ್ ಇನ್ಸ್ಟಾಗ್ರಾಂ ಪೋಸ್ಟ್
"ಪ್ರೀತಿಯ ದಿನದಂದು ದ್ವೇಷದ ಪ್ರತಿನಿಧಿಗಳ ಅಟ್ಟಹಾಸ ..
ಪ್ರಜೆಗಳ ಪ್ರತಿಭಟನೆಯ ದನಿಯಡಗಿಸುವುದು ಪ್ರಜಾಪ್ರಭುತ್ವವಲ್ಲವೇ ಅಲ್ಲ.
ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದೇಶವಿಡೀ ಒಂದಾಗಿ ಬ್ರಿಟೀಷರ ವಿರುದ್ಧ ನಿಂತಾಗ ಬ್ರಿಟಿಷರ ಪರ ನಿಂತ ಜನರಿಂದ ಬೇರೇನು ನಿರೀಕ್ಷಿಸಲು ಸಾಧ್ಯ?"
"ನಾಡಿನ ರೈತರನ್ನು ಯೋಧರನ್ನು, ದೇಶದ್ರೋಹಿಗಳಂತೆ ನಡೆಸಿಕೊಳ್ಳುವ ಅದೇ ಹೊಲಸು ಮನೋಭಾವ.. ವರ್ಷದ ಹಿಂದೆ ವರ್ಷಪೂರ್ತಿ ನಡೆದ ಹೋರಾಟದಲ್ಲಿ 700 ಜನ ರೈತರು ಪ್ರಾಣ ಬಿಟ್ಟಾಗ ನನಗಾಗಿ ಸತ್ತರೇ ಎಂದು ಕೇಳಿದವರಲ್ಲವೇ ಇವರು??. ಸೈನಿಕರ ಪಿಂಚಣಿ ಹಣ ಉಳಿಸಿ ತನ್ನ ಗೆಳೆಯರಿಗೆ ಹಂಚುವ ವ್ಯಾಪಾರಿಯಲ್ಲವೇ ಇವರು?"
"ರೈತರ ದಾರಿಯಲ್ಲಿ ಹಳ್ಳ ತೋಡುತ್ತಾರೆ, ಮುಳ್ಳು ಹಾಕುತ್ತಾರೆ, ಅಶ್ರುವಾಯು ಸಿಡಿಸುತ್ತಾರೆ, ಲಾಠಿಚಾರ್ಜ್ ಮಾಡುತ್ತಾರೆ, ರೈತ ಮುಖಂಡರ ಟ್ವಿಟರ್ ಬಂದ್ ಮಾಡುತ್ತಾರೆ .. ಸೈನಿಕರನ್ನು ಕೂಲಿಪಡೆಯಾಳಾಗಿಸುತ್ತಾರೆ, ದೇಶದ ಹೆಣ್ಣುಮಕ್ಕಳನ್ನು ಬೀದಿಯಲ್ಲಿ ಎಳೆದಾಡುತ್ತಾರೆ .. ಅತ್ಯಾಚಾರಿಗಳನ್ನು ಹೊರಗೆ ಸುತ್ತಲು ಬಿಟ್ಟು ಅಮಾಯಕರನ್ನು ಜೈಲಿಗೆ ತುಂಬುತ್ತಾರೆ.. ಪ್ರಶ್ನಿಸಬೇಕಾದ ಮಾಧ್ಯಮಗಳು ಅವರ ಚಪ್ಪಲಿ ನೆಕ್ಕುತ್ತಾ ಕೂರುತ್ತವೆ. ಇದು ರಾಮ ರಾಜ್ಯವೊ ಹರಾಮ್ ರಾಜ್ಯವೊ?? .." ಎಂದು ಹೇಳಿದ್ದಾರೆ.


Click it and Unblock the Notifications











