ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ: ನಿಖಿಲ್ ಕುಮಾರಸ್ವಾಮಿ
ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಅನುಸರಿಸಿ ರಾಜ್ಯ ಸರ್ಕಾರ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ರೈತರು ಮತ್ತು ಕನ್ನಡ ಸಿನಿರಂಗ ಕೂಡ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಖಂಡಿಸಿವೆ.
ನಟ ದರ್ಶನ್ ತೂಗುದೀಪ್, ಸುದೀಪ್, ಶಿವರಾಜ್ಕುಮಾರ್, ಅಭಿಷೇಕ್ ಅಂಬರೀಶ್, ರಾಘವೇಂದ್ರ ರಾಜ್ಕುಮಾರ್, ದೊಡ್ಡಣ್ಣ, ಸುಮಲತಾ ಅಂಬರೀಶ್, ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಹಲವರು ರೈತರ ಪರವಾಗಿ ದನಿ ಎತ್ತಿದ್ದಾರೆ. ಈಗ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಕೂಡ ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ
ರಾಜ್ಯದ ರೈತರ ದನಿಗೆ ಕಿವಿಗೊಟ್ಟಿರುವ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ" ಎಂದಿದ್ದಾರೆ.

"ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ. ಬ್ರಿಟೀಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ" ಎಂದು ನಿಖಿಲ್ ಟೀಕಿಸಿದ್ದಾರೆ.
"ಸ್ವಾತಂತ್ರ್ಯ ನಂತರವೂ ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ" ಎಂದು ಘೋಷಿಸಿದ್ದಾರೆ. ಇನ್ನು, ತಮ್ಮ ಪೋಸ್ಟ್ಗಳಿಗೆ ಕಾವೇರಿ ಕನ್ನಡಿಗರ ಹಕ್ಕು, ಕಾವೇರಿ ಕನ್ನಡಿಗರ ತಾಯಿ ಎಂಬ ಹ್ಯಾಶ್ಟ್ಯಾಗ್ಗಳನ್ನು ಬಳಸಿದ್ದಾರೆ.
ನಟ ದರ್ಶನ್ ತೂಗುದೀಪ್ ಕೂಡ "ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ." ಎಂದು ಟ್ವೀಟ್ ಮಾಡಿದ್ದಾರೆ.
ನಟ ಶಿವರಾಜ್ಕುಮಾರ್ ಮಾತನಾಡಿ "ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು, ರೈತ ಈಗಾಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ" ಎಂದು ಮನವಿ ಮಾಡಿದ್ದಾರೆ.
ಇನ್ನು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ನಿಯೋಗ ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದೆ.


Click it and Unblock the Notifications











