ಮರೆಯಲಾಗದ ಮಾಣಿಕ್ಯ ಶಂಕರ್ ನಾಗ್ ಸವಿನೆನಪು

ಆಟೋರಾಜರ ಹೃದಯ ಸಿಂಹಾಸನದಲ್ಲಿ ಶಂಕರ್ ಇನ್ನೂ ಜೀವಂತವಾಗಿದ್ದಾರೆ. ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರ ನೆನಪು ಮಾತ್ರ ಚಿರವಾಗಿದೆ. ಚಿತ್ರರಂಗದ ಯಶಸ್ಸಿನ ಉತ್ತುಂಗದಲ್ಲಿದ್ದಾಗಲೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಅಪೂರ್ವ ಕ್ರಿಯಾಶೀಲ. ಕಲೆಯ ಉತ್ಕರ್ಷದ ಬಗ್ಗೆ ಚಿಂತಿಸುತ್ತಲೇ ಕಲಾವಿದರ ಬದುಕು ಬವಣೆಗಳಿಗೆ ಸ್ಪಂದಿಸಿದ ನಟ ಶಂಕರನಾಗ್. ಇಂದು ಜೀವಂತವಾಗಿದ್ದಿದ್ದರೆ 58ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು.
'ಆಕ್ಸಿಡೆಂಟ್', 'ಮಿಂಚಿನ ಓಟ', 'ಒಂದು ಮುತ್ತಿನ ಕತೆ' ಚಿತ್ರಗಳಿಂದ ಮಿಂಚಿನ ಸಂಚಾರ ಸೃಷ್ಟಿಸಿದ ನಟ. ಡಾ.ರಾಜ್ಕುಮಾರ್ ಜೊತೆಯಲ್ಲಿ ಇಷ್ಟಪಟ್ಟು 'ಅಪೂರ್ವ ಸಂಗಮ"ದಲ್ಲಿ ಕಾಣಿಸಿಕೊಂಡ ಶಂಕರನಾಗ್, 'ಆಟೋರಾಜ' ಚಿತ್ರದಲ್ಲಿ ನಾಯಕನ ವಿಶಿಷ್ಟ ಗುಣ ಮೆರೆದು, ಎಂದೆಂದಿಗೂ ಆಟೋ ಡ್ರೈವರುಗಳ ಆರಾಧ್ಯದೈವವಾದರು.
ಗಿರೀಶ್ ಕಾರ್ನಾಡರ 'ಒಂದಾನೊಂದು ಕಾಲ'ದಲ್ಲಿ ಚಿತ್ರದ ಮೂಲಕ ಚಲನಚಿತ್ರದ ರಂಗಪ್ರವೇಶ. ಆದರೆ ಅಭಿನಯವೇನೂ ಅವರಿಗೆ ಹೊಸತಾಗಿರಲಿಲ್ಲ. ಮುಂಬೈಯಲ್ಲಿರುವಾಗಲೇ ರಂಗಭೂಮಿ ಅವರನ್ನು ಕೈಬೀಸಿ ಕರೆದಿತ್ತು. ಆಗ ಅಣ್ಣ ಅನಂತ್ನಾಗ್ ಬ್ಯಾಂಕ್ ಅಧಿಕಾರಿಯಾಗಿದ್ದರು. ಆತನೂ ಸಹ ಹವ್ಯಾಸಿ ರಂಗ ಕಲಾವಿದ ಆಗಿದ್ದವ. ಕಾರವಾರ ಜಿಲ್ಲೆ, ಕುಮಟಾ ತಾಲ್ಲೂಕಿನ ನಾಗರಕಟ್ಟೆಯ ಶಂಕರ, ಅವಕಾಶ ಅರಸಿಕೊಂಡು ಮುಂಬಯಿ ನಗರಿಯತ್ತ ಪಯಣ ಬೆಳೆಸಿದ.
ಅಲ್ಲಿ ಶಂಕರ, ತನ್ನ ಹೆಸರಿನ ಮುಂದೆ ನಾಗರಕಟ್ಟೆ ಎಂದು ಸೇರಿಸಿಕೊಂಡಿದ್ದ. ಅಲ್ಲಿಯ ಜನರಿಗೆ ಶಂಕರ ನಾಗರಕಟ್ಟೆ ಅನ್ನಲು ತಡಕಾಡುತ್ತಿದ್ದರು. ನಾಗರಕಟ್ಟೆ ಅವರ ಬಾಯಲ್ಲಿ ನಗರಕತ್ತೆ ಆಗಿತ್ತಂತೆ! ಈ ಅವಾಂತರಗಳಿಂದ, ಆನಂತರ ತನ್ನ ಹೆಸರಮುಂದೆ ಕೇವಲ ನಾಗ್ ಎಂದಷ್ಟೇ ಸೇರಿಸಿಕೊಂಡು, ಶಂಕರನಾಗ್ ಆದ. ಕಲಾಪ್ರೇಮ ವಾಪಸು ತಾಯ್ನಾಡಿಗೆ ಬರುವಂತೆ ಶಂಕರನಾಗ್ಗೆ ಮಾಡಿತು. ಅಷ್ಟೇ ಅಲ್ಲದೇ ಚಿತ್ರರಸಿಕರ ನೆಚ್ಚಿನ ತಾರೆಯನ್ನಾಗಿ ಮಾಡಿದ್ದು ಇತಿಹಾಸ.
ಶಂಕರನಾಗ್ ಬರೀ ಹುಟ್ಟಿದ ಹಬ್ಬ, ತೀರಿಹೋದ ದಿನಗಳಂದು ಮಾತ್ರ ನೆನಪಾಗುವ ನಟನಲ್ಲ. ವರ್ಷಪೂರ್ತಿ ಆಗಾಗ ನೆನಪಾಗುತ್ತಲೇ ಇರುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ ಕೀರ್ತಿ ಶಂಕರನಾಗ್ ಅವರಿಗೆ ಸಲ್ಲುತ್ತದೆ. ಶಂಕರನಾಗ್ ಭೌತಿಕವಾಗಿ ಇಂದು ನಮ್ಮೊಡನಿಲ್ಲದಿದ್ದರೂ ಮಾನಸಿಕವಾಗಿ ಕನ್ನಡ ಚಿತ್ರರಸಿಕರ ಹೃದಯದಲ್ಲಿ ಇನ್ನೂ ಜೀವಂತವಾಗಿದ್ದಾರೆ. (ಏಜೆನ್ಸೀಸ್)


Click it and Unblock the Notifications











