ಡಿಕೆ ಶಿವಕುಮಾರ್ ಭೇಟಿ ಮಾಡಿದ ಶಿವಣ್ಣ: ಕಾಂಗ್ರೆಸ್ ಪಕ್ಷಕ್ಕೆ ಗೀತಾ ಸೇರ್ಪಡೆ?
ಮಧು ಬಂಗಾರಪ್ಪ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಬೆನ್ನಲ್ಲೆ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರು ಸಹ ಕೈ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ.
ಇದರ ಬೆನ್ನಲ್ಲೆ ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕುತೂಹಲ ಹೆಚ್ಚಿಸಿದ್ದಾರೆ. ಸೋಮವಾರ ಬೆಳಗ್ಗೆ ಸದಾಶಿವ ನಗರದಲ್ಲಿರುವ ಡಿಕೆ ಶಿವಕುಮಾರ್ ಮನೆಗೆ ಶಿವಣ್ಣ ಭೇಟಿ ನೀಡಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ.
ಜೆಡಿಎಸ್ ಪಕ್ಷದ ಸದಸ್ಯೆಯಾಗಿರುವ ಗೀತಾ ಶಿವರಾಜ್ ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದರ ಬಗ್ಗೆ ಡಿಕೆಶಿ ಜೊತೆ ಹ್ಯಾಟ್ರಿಕ್ ಹೀರೋ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಣ್ಣ ''ನಾನು ಖಾಸಗಿ ವಿಚಾರಕ್ಕಾಗಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ. ರಾಜಕೀಯ ಉದ್ದೇಶ ಏನು ಇಲ್ಲ. ಗೀತಾ ಅವರು ಕಾಂಗ್ರೆಸ್ ಪಕ್ಷ ಸೇರುವುದಾದರೆ ಅದು ಅವರನ್ನೇ ಕೇಳಬೇಕು'' ಎಂದು ಹೇಳಿದರು.
ಇನ್ನು ಡಿಕೆ ಶಿವಕುಮಾರ್ ಮಾತನಾಡಿ ''ಆ ಕುಟುಂಬದ ಬಗ್ಗೆ ನಮಗೆ ಅಪಾರವಾದ ಗೌರವ. ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ದೊಡ್ಡ ಆಸ್ತಿ. ಅವರು ನಮ್ಮ ಸ್ನೇಹಿತರು. ನಾವು ಆತ್ಮೀಯರು. ನಾವು ಮತ್ತು ಅವರು ಏನು ಚರ್ಚೆ ಮಾಡಿದ್ವಿ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ'' ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರು 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಈ ಹಿನ್ನೆಲೆ ಗೀತಾ ಅವರ ಸಹ ಕಾಂಗ್ರೆಸ್ ಸೇರಲಿದ್ದಾರೆ ಎಂದು ಚರ್ಚೆಯಾಗುತ್ತಿದೆ.


Click it and Unblock the Notifications











