ಜೂ 21ರಂದು ಶಿವಣ್ಣಗೆ ಗೌರವ ಡಾಕ್ಟರೇಟ್ ಪ್ರದಾನ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡುವ ಸಂಬಂಧ ವಿಶ್ವವಿದ್ಯಾಲಯ ಅಧಿಕೃತ ಮುದ್ರೆ ಒತ್ತಿದೆ. ನಾಳೆ (ಶನಿವಾರ, ಜೂನ್ 21) ಶಿವಣ್ಣಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಿದೆ.
ಜೂನ್ 21ರಂದು ನಡೆಯುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಶಿವರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ವಿವಿ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಭಾಗವಹಿಸಲಿದ್ದಾರೆ.

ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಶಿವರಾಜ್ ಕುಮಾರ್ ಅವರಿಗೆ ತಮ್ಮ 51ನೇ ವಯಸ್ಸಿನಲ್ಲಿ ಈ ಮನ್ನಣೆ ಸಿಕ್ಕಿರುವುದು ಅವರ ಅಭಿಮಾನಿಗಳಿಗಂತೂ ಸಂತೋಷದ ಸಂಗತಿ. (ಹ್ಯಾಟ್ರಿಕ್ ಹೀರೋ ಇನ್ನು ಡಾ.ಶಿವರಾಜ್ ಕುಮಾರ್)
ಘಟಿಕೋತ್ಸವದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡಾ ಭಾಗವಹಿಸುವ ಸಾಧ್ಯತೆಯಿದೆ. ಪುನೀತ್ ಸದ್ಯ ಬಳ್ಳಾರಿಯಲ್ಲಿ ರಣವಿಕ್ರಮ ಚಿತ್ರದ ಚಿತ್ರೀಕರಣದಲ್ಲಿದ್ದಾರೆ.
ವಿಶ್ವವಿದ್ಯಾಲಯದ ಸಿಂಡಿಕೇಟ್ ಶಿವರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಬಂದಿಲ್ಲ ಎಂದು ವಿವಿ ಅಧಿಕಾರಿಗಳು ಕೆಲವು ದಿನಗಳ ಹಿಂದೆ ಹೇಳಿದ್ದರು.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ: ಈ ವಿಶ್ವವಿದ್ಯಾಲಯವು 2010ರಲ್ಲಿ ಸ್ಥಾಪನೆಯಾಯಿತು. ಕರ್ನಾಟಕ ಸರಕಾರ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆ 2000ರಡಿಯಲ್ಲಿ ಈ ವಿವಿಯನ್ನು ಸ್ಥಾಪಿಸಿತ್ತು. ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಕಾಲೇಜುಗಳು ಈ ವಿವಿಯ ವ್ಯಾಪ್ತಿಗೆ ಬರುತ್ತದೆ. ಸುಮಾರು ನೂರು ಎಕರೆ ಪ್ರದೇಶದಲ್ಲಿರುವ ಈ ವಿವಿಯ ಹಾಲಿ ಉಪಕುಲಪತಿಗಳು ಡಾ.ಮಂಜಪ್ಪ ಡಿ ಹೊಸಮನೆ.


Click it and Unblock the Notifications











