ಅಪ್ಪು ಕನಸು ಈಡೇರಿಸಲು ಹೊಸ ಉದ್ಯಮಕ್ಕೆ ಕಾಲಿಟ್ಟ ಅಶ್ವಿನಿ ಪುನೀತ್ ರಾಜ್ಕುಮಾರ್; ಜೂನಿಯರ್ ಟೋಸ್?
ಅಪ್ಪು ಅಗಲಿಕೆ ಬಳಿಕ ಪಿಆರ್ಕೆ ಸಂಸ್ಥೆಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಯಶಸ್ವಿಯಾಗಿ ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ. ಈ ಬ್ಯಾನರ್ ಅಡಿಯಲ್ಲಿ ಹೊಸ ಸಿನಿಮಾಗಳ ನಿರ್ಮಾಣ ಮಾಡುತ್ತಿದ್ದಾರೆ. ಇದೇ ಬೆನ್ನಲ್ಲೇ ಈಗ ಶಿಕ್ಷಣ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದು ಪುನೀತ್ ಹಾಗೂ ಅಶ್ವಿನಿ ಪುನೀತ್ ರಾಜ್ಕುಮಾರ್ ಸೇರಿ 20 ವರ್ಷಗಳ ಹಿಂದೆ ಕಂಡಿದ್ದ ಕನಸು.
ಹೌದು, ಅಶ್ವಿನಿ ಪುನೀತ್ ರಾಜ್ಕುಮಾರ್ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕಾಗಿ ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಅನ್ನು ಆರಂಭ ಮಾಡಿದ್ದಾರೆ. ಈ ಮೂಲಕ ಪುನೀತ್ ರಾಜ್ಕುಮಾರ್ 20 ವರ್ಷಗಳ ಹಿಂದೇನೆ ಕಂಡಿದ್ದ ಕನಸನ್ನು ಈಗ ನನಸು ಮಾಡಿದ್ದಾರೆ. ಇತ್ತೀಚೆಗೆ ಇದರ ಅನಾವರಣ ಕೂಡ ನಡೆದಿದೆ.

ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ನಿರ್ಮಾಣಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೊಂದಿಗೆ ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ಡಾ. ಬಿಂದು ರಾಣಾ ಅವರು ಕೈಜೋಡಿಸಿದ್ದಾರೆ. ಮಕ್ಕಳ ಶಿಕ್ಷಣವನ್ನು ಉನ್ನತ ಮಟ್ಟಕ್ಕೆ ಏರಿಸುವುದಕ್ಕೆ ಈ ಪ್ರಯತ್ನಕ್ಕೆ ಕೈ ಹಾಕಲಾಗಿದೆ. ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ವಿಶಿಷ್ಟವಾದ ಪ್ರಾಥಮಿಕ ಶಿಕ್ಷಣ ಯೋಜನೆಯನ್ನು ಇಟ್ಟುಕೊಂಡಿದೆ.
ಖ್ಯಾತ ಶಿಕ್ಷಣತಜ್ಞೆ ಸುನೀತಾ ಗೌಡ, ಡಾ. ಬಿಂದು ರಾಣಾ ಅವರ ಅತ್ಯಾಧುನಿಕ ಪಠ್ಯಕ್ರಮ ಈ ಜೂನಿಯರ್ ಟೋಸ್ ಪ್ರಿಸ್ಕೂಲ್ನಲ್ಲಿ ಇರಲಿದೆ. ಮಕ್ಕಳಲ್ಲಿ ಬಾಲ್ಯದಿಂದಲೇ ನಾಯಕತ್ವ, ಸೃಜನಶೀಲತೆ ಹಾಗೂ ಉದ್ಯಮಶೀಲತೆಯ ಚಿಂತನೆಯನ್ನು ಬೆಳೆಸುವುದು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಜೊತೆಗಾರರ ಕನಸು. ಈ ಸ್ಕೂಲ್ ಅನ್ನು ಇಂಡಿಯನ್ ವುಮನ್ ಅಚೀವರ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಶಿಕ್ಷಣತಜ್ಞೆ ಐಶ್ವರ್ಯ ಡಿ.ಕೆ.ಎಸ್ ಹೆಗ್ಡೆಯವರ ಸಮ್ಮುಖದಲ್ಲಿ ಉದ್ಘಾಟನೆಯಾಗಿದೆ.
ಈ ವೇಳೆ ಅಶ್ವಿನಿ ಪುನೀತ್ ರಾಜ್ಕುಮಾರ್ ತಮ್ಮ ಹಾಗೂ ಅಪ್ಪು ಕನಸು ಹಾಗೂ ಸ್ಕೂಲ್ ಬಗ್ಗೆ ರಿವೀಲ್ ಮಾಡಿದ್ದಾರೆ. "ನಾನು ಮತ್ತು ಪುನೀತ್ 20 ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಬರಬೇಕು ಎನ್ನುವ ಕನಸನ್ನು ಹೊಂದಿದ್ದೆವು. ಆ ಕನಸು ಈಗ ಈಡೇರುತ್ತಿದೆ. ಪ್ರತಿ ಮಗುವಿನ ಸಾಮರ್ಥ್ಯವನ್ನು ಹೆಚ್ಚಿಸುವಂತಹ ಶಾಲೆಗಳನ್ನು ಸ್ಥಾಪಿಸುವುದು ಈ ಶಾಲೆಯ ಮುಖ್ಯ ಧ್ಯೇಯ" ಎಂದು ಹೇಳಿದ್ದಾರೆ.
ಈ ಪ್ರೀಸ್ಕೂಲ್ ಬೆಂಗಳೂರಿನಲ್ಲಿ ಮೊದಲು ಆರಂಭ ಆಗಲಿದೆ. ಆರಂಭದಲ್ಲಿ ಐದು ಕೇಂದ್ರಗಳನ್ನು ಆರಂಭಿಸುವ ಆಲೋಚನೆಯಿದೆ. ಇದರಲ್ಲಿ ಆಧುನಿಕ ಆಧುನಿಕ ಸೌಲಭ್ಯಗಳು, ಅನುಭವಿ ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ತಜ್ಞರು ಸೇರಿ ಸಿದ್ಧಪಡಿಸಿದ ವಿನೂತನವಾದ ಪಠ್ಯಕ್ರಮಗಳನ್ನು ಅಳವಡಿಸಲಾಗಿದೆ. ಎರಡು ವರ್ಷದಿಂದ ಆರು ವರ್ಷದ ಮಕ್ಕಳಿಗೆ ಇಲ್ಲಿ ಶಿಕ್ಷಣವನ್ನು ನೀಡಲಾಗುತ್ತೆ.
ಸದ್ಯ ಬೆಂಗಳೂರಿನಲ್ಲಿ ಆರಂಭವಾದ ಈ ಶಿಕ್ಷಣ ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ದೇಶಾದ್ಯಂತ ವಿಸ್ತರಣೆ ಮಾಡುವ ಆಲೋಚನೆಯನ್ನು ಇಟ್ಟುಕೊಂಡಿದ್ದಾರೆ. ಈ ಮೂಲಕ ಇಂತಹ ವಿನೂತನ ಶಿಕ್ಷಣ ಭಾರತದಾದ್ಯಂತ ಇರುವ ಎಲ್ಲಾ ಮಕ್ಕಳಿಗೂ ಸಿಗುವಂತೆ ಆಗಬೇಕು ಎಂಬುದು ಇವರ ಆಶಯ. ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಶಿಕ್ಷಣ ಕ್ಷೇತ್ರಕ್ಕೂ ಕಾಲಿಟ್ಟಿದ್ದು ಅಪ್ಪು ಅಭಿಮಾನಿಗಳಿಗೆ ಖುಷಿಕೊಟ್ಟಿದೆ.


Click it and Unblock the Notifications











