ಸಾಮಾಜಿಕ ಜಾಲತಾಣಕ್ಕೆ ಅಶ್ವಿನಿ ಪುನೀತ್: ಅಭಿಮಾನಿಗಳಿಗೆ ಪತ್ರ
ನಟ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ತೀವ್ರ ಆಘಾತದಲ್ಲಿರುವ ಅಶ್ವಿನಿ ಅವರ ದುಃಖ ಇನ್ನು ತೀರಿಲ್ಲ. ನಿನ್ನೆ ನಡೆದ 'ಪುನೀತ್ ನಮನ' ಕಾರ್ಯಕ್ರಮದಲ್ಲಿಯೂ ಅವರು ಅಳುತ್ತಲೇ ಇದ್ದರು. ಪುನೀತ್ ನಿಧನದ ಬಳಿಕ ಅವರು ಮಾಧ್ಯಮಗಳೊಟ್ಟಿಗೆ ಅಥವಾ ವೇದಿಕೆ ಮೇಲೆ ಈವರೆಗೆ ಮಾತನಾಡಿಲ್ಲ, ತಮ್ಮ ನೋವು ತೋಡಿಕೊಂಡಿಲ್ಲ.
ಆದರೆ ಈಗ ಅಶ್ವಿನಿ ಪುನೀತ್ ಅವರು ಮೊದಲ ಬಾರಿಗೆ ಅಧಿಕೃತವಾಗಿ ಸಾಮಾಜಿಕ ಜಾಲತಾಣ ಪ್ರವೇಶಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪುನೀತ್ ಅಭಿಮಾನಿಗಳೊಂದಿಗೆ ಸಂಪರ್ಕ ಸಾಧಿಸಲು ತಮ್ಮ ಯೋಜನೆ, ಆಲೋಚನೆಗಳನ್ನು ಹಂಚಿಕೊಳ್ಳಲು ಸಾಮಾಜಿಕ ಜಾಲತಾಣ ವೇದಿಕೆಯನ್ನು ಬಳಸಿಕೊಳ್ಳಲಿದ್ದಾರೆ.
ನಿನ್ನೆಯಷ್ಟೆ ಸಾಮಾಜಿಕ ಜಾಲತಾಣಕ್ಕೆ ಕಾಲಿಟ್ಟಿರುವ ಅಶ್ವಿನಿ, ಪುನೀತ್ ರಾಜ್ಕುಮಾರ್ ಅವರ ಚಿತ್ರವನ್ನು ಡಿಸ್ಪ್ಲೆ ಪಿಕ್ಚರ್ ಆಗಿ ಬಳಸಿದ್ದಾರೆ. ಮೊದಲ ದಿನವೇ ಅಭಿಮಾನಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.

''ಪುನೀತ್ ರಾಜ್ಕುಮಾರ್ ಅಕಾಲಿಕ ಅಗಲಿಕೆ ನಮಗಷ್ಟೆ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಷ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಟಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೂ ಅವರ ವಿದಾಯ ತಂದಿತ್ತ ದುಃಖ ಎಷ್ಟಿರಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಆದರೂ ಇಂಥಹಾ ಸಂದರ್ಭದಲ್ಲಿ ನೀವುಗಳು ಎಲ್ಲಿಯೂ ಸಂಯಮ ಕಳೆದುಕೊಳ್ಳದೆ ಅಹಿತಕರ ಘಟನೆಗಳು ನಡೆಯಲು ಬಿಡದೆ ಅವರಿಗೊಂದು ಗೌರವಯುತ ಬೀಳ್ಕೊಡುಗೆ ನೀಡುವಲ್ಲಿ ಸಹಕರಿಸಿದ್ದೀರಿ''.
''ಸಿನಿಮಾ ಪ್ರೇಮಿಗಳು ಮಾತ್ರವೇ ಅಲ್ಲದೆ ವಯೋಮಾನದ ಮಿತಿ ಇಲ್ಲದೆ ದೇಶ-ವಿದೇಶಗಳಿಂದ ಕೋಟ್ಯಂತರ ಜನರು ಸಂತಾಪ ಸೂಚಿಸುವುದನ್ನು ಕಂಡಾಗ ಮನಸ್ಸು ಭಾರವಾಗುತ್ತದೆ. ನಿಮ್ಮ ಪ್ರೀತಿಯ ಅಪ್ಪು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಕೋಟ್ಯಂತರ ಜನ ನೇತ್ರದಾನಕ್ಕೆ ನೊಂದಣಿ ಮಾಡಿರುವುದು ನೋಡಿದಾಗ ಕಣ್ಣು ತುಂಬಿ ಬರುತ್ತದೆ''.
''ಅವರನ್ನು ಆದರ್ಶವನ್ನಾಗಿಟ್ಟುಕೊಂಡು ನೀವುಗಳು ಮಾಡುವ ಸತ್ಕಾರ್ಯದಲ್ಲಿ ಅವರ ನೆನಪುಗಳು ನಿಮ್ಮಲ್ಲಿ ಮೂಡಿಸುವ ಉತ್ಸಾಹದಲ್ಲಿ ಅವರೆಂದೂ ಜೀವಂತವಾಗಿರುತ್ತಾರೆ. ವಿಶ್ವದಾದ್ಯಂತ ನಮ್ಮ ಶೋಕವನ್ನು ಹಂಚಿಕೊಂಡು ಬೆಂಬಲಕ್ಕೆ ನಿಂತ ಎಲ್ಲಾ ಸಹೃದಯಿ ಅಭಿಮಾನಿ ದೇವರುಗಳಿಗೆ ಮತ್ತು ಸಾರ್ವಜನಿಕರಿಗೆ ನಮ್ಮ ಇಡೀ ಕುಟುಂಬದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು'' ಎಂದಿದ್ದಾರೆ ಅಶ್ವಿನಿ ಪುನೀತ್ ರಾಜ್ಕುಮಾರ್.
ಕೆಲವು ದಿನಗಳ ಹಿಂದೆ ಪತ್ರ ಬರೆದಿದ್ದ ಅಶ್ವಿನಿ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದರು. ''ಪುನೀತ್ ರಾಜ್ಕುಮಾರ್ ಅಕಾಲಿಕ ಅಗಲಿಕೆ ನಮಗಷ್ಟೆ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ಪುನೀತ್ ಅವರು ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದವರು. ನಮ್ಮ ನೋವ್ನನು ಅಡಗಿಸಿಟ್ಟು ಅವರನ್ನು ಸಕಲ ಗೌರವಗಳೊಂದಿಗೆ ಕಳಿಸಿಕೊಡುವುದು ನಮ್ಮ ಜವಾಬ್ದಾರಿ ಆಗಿತ್ತು. ಇಂಥಹಾ ಸಂದರ್ಭದಲ್ಲಿ ಇಡೀಯ ಪೊಲೀಸ್ ಇಲಾಖೆ ನಮಗೆ ಬೆಂಬಲವಾಗಿ ನಿಂತು ಗೌರವಯುತವಾಗಿ ಅವರನ್ನು ಕಳಿಸಿಕೊಡಲು ಸಹಕರಿಸಿದೆ. ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡುವಲ್ಲಿ, ಮೆರವಣಿಗೆ ಮತ್ತು ಅಂತಿಮ ಸಂಸ್ಕಾರದ ಸಂದರ್ಭದಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ ಎಲ್ಲೂ ಕಾನೂನು ಸುವ್ಯವಸ್ಥೆಗೆ ನಮ್ಮಿಂದ ಧಕ್ಕೆಯಾಗದಂತೆ ನೋಡಿಕೊಂಡಿದ್ದೀರಿ. ನಿಮ್ಮ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲಾ ಅಭಿಮಾನಿಗಳ ಪರವಾಗಿ ನಿಮಗೆ ಮತ್ತು ನಿಮ್ಮ ಎಲ್ಲಾ ಸಿಬ್ಬಂದಿಗಳಿಗೆ ಹೃದಯಪೂರ್ವಕ ಕೃತಜ್ಞತೆಗಳು'' ಎಂದಿದ್ದರು. ಪೊಲೀಸ್ ಇಲಾಖೆ, ಬಿಬಿಎಂಪಿ, ಜಿಲ್ಲಾಧಿಕಾರಿಗಳು, ಗೃಹ ಸಚಿವರು, ಮುಖ್ಯ ಮಂತ್ರಿಗಳಿಗೆ ಅಶ್ವಿನಿ ಅವರು ಪತ್ರಮುಖೇನ ಧನ್ಯವಾದಗಳನ್ನು ಅರ್ಪಿಸಿದ್ದರು.


Click it and Unblock the Notifications











