'ವಿರಾಟಪುರ ವಿರಾಗಿ' ಸಿನಿಮಾ ವಿದ್ಯಾರ್ಥಿಗಳಿಗೆ ಒಂದು ವಾರ ಉಚಿತ ಪ್ರದರ್ಶನ: ಸಚಿವ ಸಿ.ಸಿ. ಪಾಟೀಲ್!
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ಹಾನಗಲ್ಲ ಕುಮಾರಸ್ವಾಮಿಗಳ ಬಯೋಪಿಕ್ಗೆ ಆಕ್ಷನ್ ಕಟ್ ಹೇಳಿದ್ದಾರೆ. ಅದುವೇ 'ವಿರಾಟಪುರ ವಿರಾಗಿ'. ಇತ್ತೀಚೆಗೆ ಈ ಸಿನಿಮಾದ ಟ್ರೈಲರ್ ಗದಗದಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿದೆ. ಈ ಸಮಾರಂಭದಲ್ಲಿ ಐದು ಸಾವಿರಕ್ಕೂ ಅಧಿಕ ಮಂದಿ ಹಾಗೂ ಮಠಾಧೀಶರು, ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಈ ಸಿನಿಮಾ ಟ್ರೈಲರ್ ರಿಲೀಸ್ಗೂ ಮುನ್ನ 6 ರಥಗಳು ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆಯ ಮೂಲಕ ಒಂದು ಕೋಟಿ ಜನರಿಗೆ ಹಾನಗಲ್ ಶ್ರೀಗಳು ಹಾಗೂ ವಿರಾಟಪುರ ವಿರಾಗಿ ಸಿನಿಮಾ ಬಗ್ಗೆ ಜಾಗೃತಿ ಮೂಡಿಸಿವೆ. ಮರಳಿದ ಹಿಂತಿರುಗಿದ್ದ ಇದೇ 6 ರಥಗಳನ್ನು ಅದ್ಧೂರಿಯಾಗಿ ಬರಮಾಡಿಕೊಂಡು ಟೈಲರ್ ರಿಲೀಸ್ ಮಾಡಲಾಗಿದೆ.

'ವಿರಾಟಪುರ ವಿರಾಗಿ' ಸಿನಿಮಾದ ಟ್ರೈಲರ್ ಅನ್ನು ಯುವ ನಾಯಕ ಬಿ.ವೈ ವಿಜಯೇಂದ್ರ ರಿಲೀಸ್ ಮಾಡಿದ್ರು. "ಈ ಮಹಾನೀಯರ ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು" ಎಂದು ಹೇಳಿದ್ದಾರೆ.
'ವಿರಾಟಪುರ ವಿರಾಗಿ' ಮೇಕಿಂಗ್ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್ ರಿಲೀಸ್ ಮಾಡಿದ್ದಾರೆ. "ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧರಿತ ವಿರಾಟಪುರ ವಿರಾಗಿ ಸಿನಿಮಾ ವೀಕ್ಷಿಸಿ, ಯುವಕರು ವರ್ತನೆಗಳನ್ನು ತಿದ್ದುಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ವಾರ ಚಿತ್ರಮಂದಿರದಲ್ಲಿ ಉಚಿತವಾಗಿ ಸಿನಿಮಾ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು" ಎಂದು ಸಚಿವ ಸಿಸಿ ಪಾಟೀಲ್ ಹೇಳಿದ್ದಾರೆ.

ಈ ಸಿನಿಮಾವನ್ನು ಬಿ.ಎಸ್.ಲಿಂಗದೇವರು ನಿರ್ದೇಶಿಸಿದ್ದಾರೆ. ಹಾನಗಲ್ಲ ಕುಮಾರಸ್ವಾಮಿಗಳ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ ಸುಚೇಂದ್ರ ಪ್ರಸಾದ್ ಕಾಣಿಸಿಕೊಂಡಿದ್ದಾರೆ.


Click it and Unblock the Notifications











