ಕೊನೆಗೂ ನನಸಾಗಲಿದೆ ಕನ್ನಡ ಚಿತ್ರರಂಗದ ಬಹುದಿನಗಳ ಕನಸು, ಮೈಸೂರಿನಲ್ಲಿ ಫಿಲ್ಮ್ ಸಿಟಿ ಖಚಿತ..!
ಕನ್ನಡ ಚಿತ್ರರಂಗಕ್ಕೆ ಒಂದು ಚಿತ್ರ ನಗರಿ ಬೇಕು ಎನ್ನುವ ಕೂಗು ಇಂದು ನಿನ್ನೆಯದಲ್ಲ. 90 ವರ್ಷ ಇತಿಹಾಸವನ್ನು ಹೊಂದಿರುವ ಕನ್ನಡ ಚಿತ್ರರಂಗದಲ್ಲಿ ಈ ಕೂಗು ಆಗಾಗ ಕೇಳಿ ಬರುತ್ತಾನೇ ಇರುತ್ತೆ. ಆದರೆ, ಇಲ್ಲಿಯವರೆಗೆ ಈ ಕೂಗು ಮಾತ್ರ ಸರ್ಕಾರಕ್ಕೆ ಕೇಳಲಿಲ್ಲ. ಆಗಾಗ ಕೇಳಿಸಿಕೊಂಡರು ಕೂಡ ಸರ್ಕಾರ ಜಾಣ ಕಿವುಡುತನ ಪ್ರದರ್ಶನ ಮಾಡುತ್ತಿತ್ತು. ಕೇವಲ ಪೇಪರ್ಗಷ್ಟೇ ಫಿಲಂ ಸಿಟಿಯನ್ನು ಸೀಮಿತವಾಗಿಸಿತ್ತು. ಬೆಂಗಳೂರುದಿಂದ ಮೈಸೂರು, ಮೈಸೂರುದಿಂದ ಮತ್ತೆ ಬೆಂಗಳೂರು, ನಡುವೆ ರಾಮನಗರ ಹೀಗೆ ಚಿತ್ರ ನಗರಿಯ ಸ್ಥಳವನ್ನು ಬದಲು ಮಾಡುತ್ತಾನೇ ಇತ್ತು.
ಆದರೆ ಈಗ ಫಿಲಂ ಸಿಟಿ ಕೊನೆಗೂ ತಲೆ ಎತ್ತಿ ನಿಲ್ಲುವ ಲಕ್ಷಣ ಕಂಡು ಬರುತ್ತಿದೆ. ಇದಕ್ಕೆ ಕೈಗನ್ನಡಿ ಎಂಬಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದಾರೆ. ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚಿಸಿದ್ದಾರೆ. ಇದರೊಂದಿಗೆ ಎರಡನೇ ಹಂತದ ವಿಸ್ತರಣೆಗೆ ಹೆಚ್ಚುವರಿಯಾಗಿ 50 ಎಕರೆ ಗುರುತಿಸಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಇನ್ನೂ ಮೊದಲ ಹಂತದ ಯೋಜನೆಯನ್ನು ಶೀಘ್ರವೇ ಪ್ರಾರಂಭ ಮಾಡುವಂತೆ ಕೂಡ ಸೂಚನೆ ನೀಡಿರುವ ಸಿ.ಎಂ.ಸಿದ್ಧರಾಮಯ್ಯ 2015-2016ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕ ಮಾಡಲು ಟೆಂಡರ್ ಕರೆಯುವಂತೆ ಕೂಡ ಸೂಚಿಸಿದ್ದಾರೆ.
ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸಬೇಕು ಎಂದು ಕೂಡ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಫಿಲಂ ಸಿಟಿಯಲ್ಲಿ ಥಿಯೇಟರ್, ಸ್ಟುಡಿಯೋ, ಮಲ್ಟಿಪ್ಲೆಕ್ಸ್, ಥೀಮ್ ಪಾರ್ಕ್ ಮತ್ತು ಹೊಟೇಲ್ ನಿರ್ಮಾಣ ಮಾಡಲು ಕೂಡ ಸೂಚನೆ ನೀಡಿದ್ದಾರೆ. ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ (Film Tourism) ಕೂಡ ಒತ್ತು ನೀಡಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಇನ್ನೂ.. ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕವಾದ ನಂತರ ಚಿತ್ರರಂಗದ ಸದಸ್ಯರ ಜೊತೆ ಸಮಾಲೋಚನೆ ಮಾಡಿ, ಚಿತ್ರನಗರಿಯ ರೂಪರೇಷೆಗಳನ್ನು ಅಂತಿಮಗೊಳಿಸಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


Click it and Unblock the Notifications











