2016ನೇ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
2016ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಗೆದ್ದ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಏಪ್ರಿಲ್ 24) ಪ್ರಶಸ್ತಿ ಪ್ರದಾನ ಮಾಡಿದರು. ಈ ಮೂಲಕ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬದಂದು ರಾಜ್ಯ ಪ್ರಶಸ್ತಿ ಪ್ರದಾನ ಮಾಡಬೇಕೆಂಬ ರಾಜ್ಯ ಸರ್ಕಾರದ ಸೂಚನೆಯಂತೆ ನಿನ್ನೆ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿಸಲಾಯಿತು.
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತಿಥಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟ ಅಚ್ಯುತ್ ಕುಮಾರ್ ಹಾಗೂ ನಟಿ ಶ್ರುತಿ ಹರಿಹರನ್ ಗೆ 2016ನೇ ಸಾಲಿನ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಟಿ ಪ್ರಶಸ್ತಿಯನ್ನ ಪ್ರದಾನ ಮಾಡಿದರು.[2016 ರಾಜ್ಯ ಪ್ರಶಸ್ತಿ: 'ಅಮರಾವತಿ' ಅತ್ಯುತ್ತಮ ಚಿತ್ರ, ಅಚ್ಯುತ್ ಕುಮಾರ್ ಅತ್ಯುತ್ತಮ ನಟ ]

ಇನ್ನು ಜೀವಿತಾವಧಿ ಸಾಧನೆಗಾಗಿ ಹಿರಿಯರಾದ ಆದವಾನಿ ಲಕ್ಷ್ಮೀದೇವಿ ಅವರಿಗೆ ಡಾ.ರಾಜ್ ಕುಮಾರ್ ಪ್ರಶಸ್ತಿ, ಕೆ.ವಿ. ರಾಜು ಅವರಿಗೆ ಪುಟ್ಟಣ್ಣ ಕಣಗಾಲ್ ಮತ್ತು ಕೆ. ಚಿನ್ನಪ್ಪ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇನ್ನು 2016ನೇ ಸಾಲಿನಲ್ಲಿ ಪ್ರಶಸ್ತಿ ಪಡೆದ 'ರಾಮಾ ರೇ ರಾಮಾ ರೇ', 'ಕಿರಿಕ್ ಪಾರ್ಟಿ', 'ಅಮರಾವತಿ', 'ರೈಲ್ವೇ ಚಿರ್ಲ್ಡನ್', 'ಮೂಡಲ ಸೀಮೆಯಲಿ' ಚಿತ್ರಗಳು ಸೇರಿದಂತೆ ಎಲ್ಲ ಸಾಧಕರಿಗೂ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ''ಇನ್ನು ಮುಂದೆ ರಾಜ್ಯದಲ್ಲಿ ಏಕ ಕಾಲಕ್ಕೆ ರಾಜ್ ಜನ್ಮದಿನಾಚರಣೆ ಆಚರಿಸುವ ಘೋಷಣೆ ಮಾಡಿದ್ರು. ಮುಂದಿನ ವರ್ಷದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲದಲ್ಲಿ ಡಾ.ರಾಜ್ ಕುಮಾರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಘೋಷಿಸಿದರು.

ಇನ್ನು ಕಾರ್ಯಕ್ರಮ ಆರಂಭಕ್ಕೂ ಮುಂಚೆ ಮುಖ್ಯಮಂತ್ರಿಗಳು ಹಾಗೂ ಚಲನಚಿತ್ರ ಕಲಾವಿದರು ಡಾ.ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಿದರು. ಸಚಿವರಾದ ಕೆ.ಜೆ.ಜಾರ್ಜ್, ಉಮಾಶ್ರೀ, ಹಾಗೂ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು, ಅಕಾಡೆಮಿ ಅಧ್ಯಕ್ಷ ಎಸ್.ವಿ ರಾಜೇಂದ್ರ ಸಿಂಗ್ ಬಾಬು, ಹಿರಿಯ ನಟಿ ಜಯಂತಿ, ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ಸೇರಿದಂತೆ ಹಲವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದರು.


Click it and Unblock the Notifications











