100 ರ ಬದಲು 125 ಚಿತ್ರಗಳಿಗೆ ಸಹಾಯ ಧನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರತಿ ವರ್ಷವೂ ಸದಭಿರುಚಿಯ 100 ಚಿತ್ರಗಳಿಗೆ ತಲಾ 10 ಲಕ್ಷ ಸಹಾಯ ಧನವನ್ನ ನೀಡುತ್ತಿರುವ ಕರ್ನಾಟಕ ಸರ್ಕಾರ, ಮುಂದಿನ ವರ್ಷದಿಂದ 125 ಚಿತ್ರಗಳಿಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ.
ನಿನ್ನೇ (ನವೆಂಬರ್ 13) ನಗರದ ಜಿಕೆವಿಕೆ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ 2014-15 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರಗಳಿಗೆ ಸಬ್ಸಿಡಿ ಹೆಚ್ಚು ಮಾಡಿರುವುದನ್ನ ತಿಳಿಸಿದರು. ಬಳಿಕ ಮಾತನಾಡಿದ ಅವರು, ನಾಡು ನುಡಿಯ ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಹಾಗೂ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಗಳಿಗೆ ಹೆಚ್ಚಿನ ಬೆಂಬಲ ನೀಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.

ಇನ್ನೂ ಮುಂದಿನ ವರ್ಷದಿಂದ ಆಯಾ ವರ್ಷದ ರಾಜ್ಯದ ಚಲನಚಿತ್ರ ಪ್ರಶಸ್ತಿಯನ್ನ ಆಯಾ ವರ್ಷವೇ ನೀಡಲು ನಿರ್ಧರಿಸಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ, ಏಪ್ರಿಲ್ 24ರಂದೇ ಹಮ್ಮಿಕೊಳ್ಳಲು ಸರ್ಕಾರ ಸೂಚಿಸಿದೆ ಎಂದರು.

ಇತ್ತೀಚಿಗೆ ಚಿತ್ರೀಕರಣದ ಸಮಯದಲ್ಲಿ ನಡೆದ ಅವಘಡದಿಂದ ಸಾವನ್ನಪ್ಪಿದ್ದ ಕಲಾವಿದರಾದ ಅನಿಲ್ ಮತ್ತು ಉದಯ್ ಅವರನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಬ್ಬರು ಕುಟುಂಬದವರಿಗೆ ಸರ್ಕಾರದಿಂದ ತಲಾ 5 ಲಕ್ಷ ನೀಡುವುದಾಗಿ ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೇಂದ್ರ ಸಚಿವ ಡಿ. ವಿ ಸದಾನಂದ ಗೌಡ, ರಾಜ್ಯ ಕೃಷಿ ಸಚಿವ ಕೃಷ್ಣ ಬೈರೇಗೌಡ, ವಾರ್ತಾ ಇಲಾಖೆಯ ನಿರ್ದೇಶಕ ಎನ್ ಆರ್ ವಿಶುಕುಮಾರ್, ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಂ ಲಕ್ಷ್ಮಿ ನಾರಯಣ್, ಬೆಂಗಳೂರು ನಗರದ ಮಹಾಪೌರ ಜಿ ಪದ್ಮಾವತಿ, ರಾಜ್ಯಚಲನ ಚಿತ್ರ ಅಕಾಡೆಮಿ ಅಧ್ಯಕ್ಷ ಎಸ್. ವಿ. ರಾಜೇಂದ್ರಸಿಂಗ್ ಬಾಬು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು, ಕಂಠೀರವ ಸ್ಟುಡಿಯೋಸ್ ಅಧ್ಯಕ್ಷೆ ಅಶ್ವಿನಿ ಕೃಷ್ಣಮೂರ್ತಿ ಸೇರಿದಂತೆ ಹಲವರು ಭಾಗಿಯಾಗಿದ್ದರು.


Click it and Unblock the Notifications











