ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
14ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, ಕನ್ನಡ ಚಿತ್ರರಂಗಕ್ಕೆ ಸಿಹಿಸುದ್ದಿ ಸಿಕ್ಕಿದೆ. ಹಲವು ವರ್ಷಗಳಿಂದ ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ಹಿಂದಿನ ಸರ್ಕಾರಗಳ ಆಡಳಿತ ಅವಧಿಯಲ್ಲೂ ಬಜೆಟ್ ಮಂಡನೆ ವೇಳೆ ಈ ವಿಷಯ ಪ್ರಸ್ತಾಪವಾಗಿತ್ತು.
ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡುವುದಾಗಿ ಈ ಬಾರಿ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಿಂದೆ ಕೂಡ ಸಿಎಂ ಸಿದ್ದು ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವುದಾಗಿ ಹೇಳಿದ್ದರು. ನಂತರ ಎಚ್ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಮನಗರದಲ್ಲಿ ಫಿಲ್ಮ್ ಸಿಟಿ ನಿರ್ಮಿಸುವ ಉದ್ದೇಶದ ಹೊಂದಿದ್ದರು. ಬಿಜೆಪಿ ಸರ್ಕಾರ ಮೈಸೂರು, ರಾಮನಗರ ಬಿಟ್ಟು ಬೆಂಗಳೂರಿನ ಹೊರ ವಲಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಒಲವು ತೋರಿತ್ತು. ಈ ಬಗ್ಗೆ ಹಿಂದಿನ ಬಜೆಟ್ಗಳಲ್ಲಿ ಘೋಷಣೆ ಮಾಡಲಾಗಿತ್ತು.

ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಬಜೆಟ್ ಮಂಡನೆ ವೇಳೆ ಈ ವಿಷಯ ಪ್ರಸ್ತಾಪವಾಗಿದೆ. ಈ ಹಿಂದೆ ಹಲವು ಬಾರಿ ಫಿಲ್ಮ್ ಸಿಟಿ ನಿರ್ಮಿಸಿಕೊಡುವಂತೆ ಚಿತ್ರರಂಗದ ನಿಯೋಗ ಸರ್ಕಾರಗಳ ಬಳಿ ಮನವಿ ಸಲ್ಲಿಸಿತ್ತು. ಸದ್ಯ ಕರ್ನಾಟಕದಲ್ಲಿ ದೊಡ್ಡ ಫಿಲ್ಮ್ ಸಿಟಿ ಇಲ್ಲ. ಕಂಠೀರವ ಸ್ಟುಡಿಯೋ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಹಾಗೂ ಅಭಿಮಾನ್ ಸ್ಟುಡಿಯೋಗಳಲ್ಲಿ ಸಿನಿಮಾಗಳ ಚಿತ್ರೀಕರಣ ನಡೀತಿದೆ. ಆದರೆ ದೊಡ್ಡಮಟ್ಟದಲ್ಲಿ ನಡೀತಿಲ್ಲ. ಸಕಲ ಸೌಕರ್ಯಗಳಿರುವ ಫಿಲ್ಮ್ ಸಿಟಿಗಾಗಿ ಹೈದರಾಬಾದ್ಗೆ ತೆರಳುವಂತಾಗಿದೆ.
ಬಜೆಟ್ ಮಂಡನೆ ವೇಳೆ "2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಫಿಲ್ಮ್ ಸಿಟಿ ನಿರ್ಮಿಸಲಿದೆ." ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಹಲವು ವರ್ಷಗಳಿಂದ ಫಿಲ್ಮ್ ಸಿಟಿ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಆದರೆ ಈವರೆಗೆ ಅದು ಕಾರ್ಯರೂಪಕ್ಕೆ ಬಂದಿಲ್ಲ. ಈಗಲೂ ಸಿನಿಮಾಗಳ ಚಿತ್ರೀರಣಕ್ಕಾಗಿ ಹೈದರಾಬಾದ್ಗೆ ಹೋಗುವಂತಹ ಪರಿಸ್ಥಿತಿ ಇದೆ. ಇತ್ತೀಚೆಗೆ 'KGF-2', 'ಕಾಟೇರ', 'ಮಾರ್ಟಿನ್' ಸೇರಿದಂತೆ ಹಲವು ಸಿನಿಮಾಗಳ ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದಿತ್ತು.


Click it and Unblock the Notifications











