ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರು ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ.ಎನ್ ಚಂದ್ರಶೇಖರ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ತಂದೆ ಕೆ.ಸಿ. ನಂಜುಂಡೇಗೌಡ ಅವರಿಂದ ಪ್ರಭಾವಿತರಾಗಿ 50ಕ್ಕೂ ಹೆಚ್ಚು ಜನಪ್ರಿಯ ಕನ್ನಡ ಚಿತ್ರಗಳನ್ನು ನಿರ್ಮಿಸಿದ್ದ ಅವರು 'ಹುಲಿಯ ಹಾಲಿನ ಮೇವು', 'ಬಬ್ರುವಾಹನ' ಮುಂತಾದ ಅತ್ಯುತ್ತಮ ಚಿತ್ರಗಳನ್ನು ನಿರ್ಮಿಸಿದ್ದರು.
ಮೂರು ಅವಧಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಸಿನಿಮಾಗಳ ಬಗ್ಗೆ ಉತ್ತಮ ಜ್ಞಾನ ಹೊಂದಿದ್ದರು. ಅವರ ನಿಧನದಿಂದ ಅತ್ಯುತ್ತಮ ನಿರ್ಮಾಪಕರನ್ನು ಕನ್ನಡ ಚಿತ್ರರಂಗ ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ನಿಧನ ಹೊಂದಿದ್ದಾರೆ. 69 ವರ್ಷದ ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್ಕುಮಾರ್ ನಟನೆಯ ಶಂಕರ್ ಗುರು ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಪ್ರಾರಂಭ ಮಾಡಿದ್ದರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.
ಹುಲಿಯ ಹಾಲಿನ ಮೇವು, ಭಕ್ತ ಜ್ಞಾನದೇವ, ಧರ್ಮ ಯುದ್ಧ, ತಾಯಿ ಸೇರಿದಂತೆ ಅನೇಕ ಅದ್ಭುತ ಸಿನಿಮಾಗಳನ್ನು ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೆ ಕೆಸಿಎನ್ ಬ್ಯಾನರ್ ಮೂಲಕ ತಮಿಳು, ತೆಲುಗು ಮತ್ತು ಬಂಗಾಳಿ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಇವರಿಗಿದೆ.
Recommended Video
ಇಂದು ಕೆಸಿಎನ್ ಚಂದ್ರುಶೇಖರ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.


Click it and Unblock the Notifications











