ಜಾತಿ ವಿವಾದ: ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ವಿರುದ್ಧ ದೂರು
ಬ್ರಾಹ್ಮಣರ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ಕುಮಾರ್ ವಿರುದ್ಧ ದೂರು ನೀಡಿದ್ದ ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ವಿರುದ್ಧ ಸರ್ಕಾರಿ ಸಂಸ್ಥೆಯ ಹೆಸರು ಮತ್ತು ಮುದ್ರೆ ದುರುಪಯೋಗ ಪಡಿಸಿಕೊಂಡ ಆರೋಪ ಕೇಳಿಬಂದಿದೆ.
ಚೇತನ್ ವಿರುದ್ಧ ಬ್ರಾಹ್ಮಣರನ್ನು ಎತ್ತಿಕಟ್ಟಿ ಅಶಾಂತಿ ಸೃಷ್ಟಿಸಲು ಕರ್ನಾಟಕದ ಬ್ರಾಹ್ಮಣ ಸಮುದಾಯದ ಅಧ್ಯಕ್ಷ ಸಚ್ಚಿದಾನಂದ ಅವರು ಸರ್ಕಾರಿ ಸಂಸ್ಥೆಯ ಹೆಸರು, ಸರ್ಕಾರಿ ಮುದ್ರೆಯನ್ನು ದುರುಪಯೋಗ ಪಡಿಸಿಕೊಂಡು ಕ್ರಿಮಿನಲ್ ಅಪರಾದ ಮಾಡಿದ್ದಾರೆ ಎಂದು ಮಹಿಳಾ ಹೋರಾಟಗಾರ್ತಿ, ರಂಗಕರ್ಮಿ ಕಾವ್ಯಾ ಅಚ್ಯುತ್ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
'ಬ್ರಾಹ್ಮಣ ಅಭಿವೃದ್ದಿ ಮಂಡಳಿಯೂ ಬ್ರಾಹ್ಮಣರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಮೀಸಲಾಗಿರುವ ಸರ್ಕಾರಿ ಸಂಸ್ಥೆಯಾಗಿದೆ. ಬಡ, ಹಿಂದುಳಿದ ಬ್ರಾಹ್ಮಣರ ಏಳಿಗೆಗಾಗಿ ಯೋಜನೆಗಳನ್ನು ರೂಪಿಸುವುದು ಮತ್ತು ಜಾರಿ ಮಾಡುವುದಷ್ಟೇ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಕೆಲಸವಾಗಿರುತ್ತದೆ. ಬಡ, ಹಿಂದುಳಿದ ಬ್ರಾಹ್ಮಣರ ಅಭಿವೃದ್ದಿಯ ನಿಟ್ಟಿನಲ್ಲಿ ಕೆಲಸ ಮಾಡದ ಮಂಡಳಿ ಅಧ್ಯಕ್ಷರು, ಸರ್ಕಾರಿ ದಾಖಲೆ/ಮುದ್ರೆ/ ಲಾಂಛನ ಮತ್ತು ಕರ್ನಾಟಕ ಸರ್ಕಾರ ಎಂಬ ಹೆಸರನ್ನು ದುರುಪಯೋಗಪಡಿಸಿಕೊಂಡು ನಟ ಚೇತನ್ ವಿರುದ್ದ ದೂರು ನೀಡುವ ಮೂಲಕ ಕ್ರಿಮಿನಲ್ ಅಪರಾಧ ಮಾಡಿದ್ದಾರೆ.'

'ಬಸವ ಅನುಯಾಯಿ ಆಗಿರುವ ಶರಣ ಚೇತನ್ ಅಹಿಂಸಾ ವಿರುದ್ದ ಸರ್ಕಾರಿ ದಾಖಲೆಯನ್ನು ದುರುಪಯೋಗಪಡಿಸಿಕೊಂಡು ಬ್ರಾಹ್ಮಣರನ್ನು ಎತ್ತಿಕಟ್ಟುವ, ಸಮುದಾಯಗಳ ಮಧ್ಯೆ ಅಶಾಂತಿ ಸೃಷ್ಟಿಸುವ ಮತ್ತು ಸರ್ಕಾರಿ ಲಾಂಛನ ದುರುಪಯೋಗ ಪಡಿಸಿಕೊಂಡಿರುವ ಹೆಚ್.ಎಸ್ ಸಚ್ಚಿದಾನಂದ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ನಾನು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದೇನೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.
'ಕನ್ನಡದ ಖ್ಯಾತ ನಟ ಚೇತನ್ ಅಹಿಂಸಾ ರಾಜ್ಯಾದ್ಯಂತ ಕೊರೊನಾ ಸೋಂಕಿತರು, ಕೊರೊನಾ ವಾರಿಯರ್ಸ್, ಲಾಕ್ ಡೌನ್ ಸಂತ್ರಸ್ತರಿಗೆ ಜೀವನಾಗತ್ಯ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭದಲ್ಲಿ ಬ್ರಾಹ್ಮಣರಿಗೆ ಪ್ರತ್ಯೇಕವಾಗಿ ಆಹಾರ ವಿತರಣೆ ಮಾಡಿದ ನಟರೊಬ್ಬರ ಬಗ್ಗೆ ಮನುಷ್ಯ ಸಹಜವಾಗಿ ಚೇತನ್ ಟೀಕಿಸಿದ್ದರು.'

'ಸಮಾನತೆಯನ್ನು ಬಯಸುವ, ಸಂವಿಧಾನದಲ್ಲಿ ನಂಬಿಕೆ ಇರುವ ಭಾರತದ ಯಾವ ನಾಗರಿಕನೂ ಕೊರೊನಾ ಸಂತ್ರಸ್ತರಲ್ಲೂ ಬ್ರಾಹ್ಮಣರನ್ನು ಪ್ರತ್ಯೇಕಿಸುವುದನ್ನು ಒಪ್ಪಲಾರರು. ಅಂತೆಯೇ ನಟ ಚೇತನ್ ಕೂಡಾ ಅದನ್ನು ಖಂಡಿಸಿ ಮಾತನಾಡುವ ಜೊತೆಗೆ ಬ್ರಾಹ್ಮಣ್ಯದ ಅಪಾಯಗಳನ್ನು ಜನರಿಗೆ ಮನವರಿಕೆ ಮಾಡಿದ್ದರು.' ಜೊತೆಗೆ ಡಾ. ಅಂಬೇಡ್ಕರ್ ಮತ್ತು ಪೆರಿಯಾರ್ ಹೇಳಿಕೆಯನ್ನು ಶೇರ್ ಮಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Click it and Unblock the Notifications











