'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ತಡೆಯಾಜ್ಞೆ; ನಾಗಾಭರಣ ನಿರ್ದೇಶನದಲ್ಲಿ ಹೀರೊ ಆಗೋದ್ಯಾರು?
ಇತ್ತೀಚೆಗೆ ನಿರ್ದೇಶಕ ದಿನೇಶ್ ಬಾಬು ನಾಡಪ್ರಭು ಕೆಂಪೇಗೌಡರ ಜೀವನಾಧರಿತ ಚಿತ್ರವನ್ನು ಘೋಷಿಸಿದ್ದರು. 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಟೈಟಲ್ನಲ್ಲಿ ಕಿರಣ್ ತೋಟಂಬೈಲ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಇದೀಗ ಆ ಚಿತ್ರಕ್ಕೆ ತಾತ್ಕಾಲಿಕ ತಡೆಯಾಜ್ಞೆ ಬಂದಿದೆ.
ಟಿ. ಎಸ್ ನಾಗಾಭರಣ ನಿರ್ದೇಶನದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತು ಸಿನಿಮಾ ಮಾಡುವ ಪ್ರಯತ್ನ ಬಹಳ ದಿನಗಳಿಂದ ನಡೆಯುತ್ತಿದೆ. ಚಿತ್ರೀಕರಣದ ಪೂರ್ವ ಸಿದ್ಧತೆಗಳು ನಡೀತಿದೆ. ಕೆಂಪೇಗೌಡರ ಸಾಹಸಗಾಥೆಯನ್ನು ತೆರೆಮೇಲೆ ಕಟ್ಟಿಕೊಡುವ ಪ್ರಯತ್ನ ಅಣ್ಣಾವ್ರ ಕಾಲದಿಂದಲೂ ನಡೆಯುತ್ತಿದೆ. ಟಿ. ಎಸ್ ನಾಗಾಭರಣ ನಿರ್ದೇಶನದಲ್ಲಿ ಯುವ ರಾಜ್ಕುಮಾರ್ ಹೀರೊ ಆಗಿ ಸಿನಿಮಾ ಮೂಡಿ ಬರುತ್ತದೆ ಎನ್ನುವ ಗುಲ್ಲಾಗಿತ್ತು.

ಈ ಸಂಬಂಧ ನಿರ್ದೇಶಕ ನಾಗಾಭರಣ ಫಿಲ್ಮಿಬೀಟ್ಗೆ ಮಾಹಿತಿ ನೀಡಿದ್ದರು. ನಾನು ನಟನನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೇ ಕಥೆ, ಸಿನಿಮಾ ಮಾಡಲ್ಲ. ನನ್ನ ಕಥೆಗೆ ಸೂಕ್ತವಾದ ನಟನನ್ನು ಆರಿಸಿಕೊಳ್ಳುತ್ತೇನೆ ಎಂದಿದ್ದರು. ಇದೀಗ ತೆರೆಮರೆಯಲ್ಲಿ ನಾಗಾಭರಣ ಕೆಂಪೇಗೌಡರ ಜೀವನಾಧರಿತ ಚಿತ್ರಕ್ಕೆ ಸಿದ್ಧತೆ ನಡೆಸುತ್ತಿರುವುದು ಬಹಿರಂಗವಾಗಿದೆ. ಡಾ. ಎಂ. ಎನ್. ಶಿವರುದ್ರಪ್ಪ ಮತ್ತು ರಾಹುಲ್ ಗುಂಡಾಲ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
ಕಿರಣ್ ತೋಟಂಬೈಲ್ ನಿರ್ಮಾಣದಲ್ಲಿ ಘೋಷಣೆ ಆಗಿರುವ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ವಿರುದ್ಧ ಕೋರ್ಟ್ ತಡೆಯಾಜ್ಞೆ ನೀಡಿದ್ದು ಈ ಸಂಬಂಧ ಬಗ್ಗೆ 'ನಾಡಪ್ರಭು ಕೆಂಪೇಗೌಡ' ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಈಶ್ವರ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಪತ್ರಿಕಾ ಪ್ರಕಟಣೆ ನೀಡಿದೆ. ಈ ಪ್ರಕಟನೆಯಲ್ಲಿ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಅಥವಾ ಸಾರ್ವಜನಿಕರಿಗೆ ಸಂವಹನಗಳನ್ನು ಮಾಡದಂತೆ ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ ಎಂದು ತಿಳಿಸಲಾಗಿದೆ.
ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ಆದೇಶದ ಅನುಸಾರ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ಶ್ರೀ ದಿನೇಶ್ ಬಾಬು, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ "ಧರ್ಮಭೀರು ನಾಡಪ್ರಭು ಕೆಂಪೇಗೌಡ" ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.

"ನಾಡಪ್ರಭು ಕೆಂಪೇಗೌಡ" ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಈಶ್ವರ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರತಿನಿಧಿಗಳಾದ ನಿರ್ಮಾಪಕರುಗಳು ಡಾ ಎಂ. ಎನ್. ಶಿವರುದ್ರಪ್ಪ ಮತ್ತು ಶ್ರೀ ರಾಹುಲ್ ಗುಂಡಾಲ, ನಿರ್ದೇಶಕ ಶ್ರೀ ಟಿ.ಎಸ್. ನಾಗಾಭರಣ, ಸಹಲೇಖಕಿ ಶ್ರೀಮತಿ ಪ್ರತಿಭಾ ನಂದಕುಮಾರ್ ಇವರ 'ನಾಡಪ್ರಭು ಕೆಂಪೇಗೌಡ' ಚಿತ್ರದ ಚಿತ್ರಕಥೆಯ ಟ್ರೇಡ್ಮಾರ್ಕ್, ಶೀರ್ಷಿಕೆ, ಬ್ರಾಂಡ್, ಪೂರ್ವಪ್ರತ್ಯಯ ಮತ್ತು ಪ್ರತ್ಯಯ ಸೇರಿಕೆ, ರಿಮೇಕ್, ಅಳವಡಿಕೆ ಕುರಿತ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಸಿನಿಮಾ ಮಾಡದಂತೆ ತಿಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
'ನಾಡಪ್ರಭು ಕೆಂಪೇಗೌಡ' ಕುರಿತಂತೆ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಡಾ ಎಂ ಎನ್ ಶಿವರುದ್ರಪ್ಪ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಬೆಂಗಳೂರು, ಇಲ್ಲಿ ದಾವೆ ಹೂಡಿದ್ದಾರೆ. ಇನ್ನು ನಾಗಾಭರಣ ನಿರ್ದೇಶನದ 'ನಾಡಪ್ರಭು ಕೆಂಪೇಗೌಡ' ಚಿತ್ರದಲ್ಲಿ ಡಾಲಿ ಧನಂಜಯ ಹೀರೊ ಆಗಿ ನಟಿಸುವುದು ಬಹುತೇಕ ಖಚಿತವಾಗಿದೆ.


Click it and Unblock the Notifications











