"ಅತ್ತಿಗೆ ಗರ್ಭಿಣಿ ಆಗಿದ್ದಾಗ್ಲೆ ಅಣ್ಣ ಸತ್ತಿದ್ದು, ಆ ನೋವು ಗೊತ್ತು"; ರೇಣುಕಾಸ್ವಾಮಿ ಕುಟುಂಬಕ್ಕೆ ಧ್ರುವ ಸಾಂತ್ವನ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಆರೋಪಿಯಾಗಿ ಜೈಲು ಸೇರಿದ್ದಾರೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ ಕಾರಣಕ್ಕೆ ದರ್ಶನ್ ತಮ್ಮ ಆಪ್ತರ ಮೂಲಕ ಆತನನ್ನು ಅಪಹರಿಸಿ ಥಳಿಸಿದ್ದಾರೆ. ಈ ವೇಳೆ ಆತನ ಜೀವವೇ ಹೋಗಿದೆ ಎಂದು ಹೇಳಲಾಗುತ್ತಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಭಾವನಾ ಬೆಳಗೆರೆ ಸೇರಿದಂತೆ ಕೆಲವರು ಚಿತ್ರದುರ್ಗದ ರೇಣುಕಾಸ್ವಾಮಿ ಮನೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮನೆಗೆ ಆಧಾರವಾಗಿದ್ದ ಮಗನನ್ನಯ ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಪತ್ನಿ ಈಗ ಗರ್ಭಿಣಿ. ಮನೆ ನಡೆಸುವುದು ಹೇಗೆ ಎನ್ನುವ ಪರಿಸ್ಥಿತಿ ಎದುರಾಗಿದೆ. ಇತ್ತೀಚೆಗೆ ಸಹಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.

ಇದೀಗ ನಟ ಧ್ರುವ ಸರ್ಜಾ ಅಭಿಮಾನಿಗಳು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಧನಸಹಾಯ ಸಹ ಮಾಡಿದ್ದಾರೆ. ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಹಾಗೂ ತಂಡದವರು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಹೋಗಿದ್ದು, ಧ್ರುವ ಸರ್ಜಾ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿಸಿದ್ದಾರೆ. ಈ ವೇಳೆ ಧ್ರುವ ಸರ್ಜಾ, ಮೃತ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆಗೆ ಮಾತನಾಡಿದ್ದಾರೆ.
"ಅತ್ತಿಗೆ ಗರ್ಭಿಣಿ ಆಗಿದ್ದಾಗ್ಲೆ ಅಣ್ಣ ಸತ್ತಿದ್ದು, ಆ ನೋವು ನನಗೆ ಗೊತ್ತು, ನಿಮ್ಮ ಜೊತೆಗೆ ನಾವಿದ್ದೇವೆ. ಏನೇ ಸಹಾಯ ಬೇಕಾದರೂ ನಮ್ಮನ್ನು ಕೇಳಿ" ಎಂದು ಹೇಳಿದ್ದಾರೆ ಎನ್ನಲಾಗಿದೆ. ನಂತರ ಧ್ರುವ ಅಭಿಮಾನಿ ಸಂಘದವರು ಹಣ ನೀಡಿ, ರೇಣುಕಾಸ್ವಾಮಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಬಂದಿದ್ದಾರೆ.


Click it and Unblock the Notifications











