'ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ': ಹಿಂದಿ ಹೇರಿಕೆ ಖಂಡಿಸಿದ ಡಿ-ಬಾಸ್
ಹಿಂದಿ ದಿವಸ್ ಆಚರಣೆ ಹಾಗೂ ಹಿಂದಿ ಹೇರಿಕೆಗೆ ಕರ್ನಾಟಕದಲ್ಲಿ ಭಾರಿ ವಿರೋಧ ಇದೆ. ಕನ್ನಡ ಸಿನಿಮಾ ನಟ ಹಾಗು ನಿರ್ದೇಶಕರು ಸಹ ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿದ್ದಾರೆ.
'ಆ ದಿನಗಳು' ಖ್ಯಾತಿಯ ಚೇತನ್, ಪ್ರಕಾಶ್ ರಾಜ್, ಧನಂಜಯ್, ಕವಿರಾಜ್ ಸೇರಿದಂತೆ ಹಲವರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟಿಸಿ ಟ್ವೀಟ್ ಮಾಡಿದ್ದರು. ಇದೀಗ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಹಿಂದಿ ಹೇರಿಕೆಯ ವಿರುದ್ಧ ಸಿಡಿದೆದಿದ್ದಾರೆ. 'ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ' ಎನ್ನುವ ಮೂಲಕ ಕನ್ನಡ ಪರ ನಿಂತಿದ್ದಾರೆ. ಈ ಕುರಿತು ಡಿ ಬಾಸ್ ಏನಂದ್ರು? ಮುಂದೆ ಓದಿ...

ನಾವು ಸುಮ್ಮನಿದ್ದರೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರ
''ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ'' ಎಂದು ಆಕ್ರೋಶ ಹೊರಹಾಕಿದ್ದಾರೆ.

ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ
''ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ'' ಎಂದು ಸಿಡಿದೆದ್ದಿದ್ದಾರೆ.

ನಮ್ಮ ಕೊನೆಯುಸಿರಿರುವವರೆಗೂ ಕನ್ನಡ...
''ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ'' ಎಂದು ಡಿ ಬಾಸ್ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
Recommended Video

ಕನ್ನಡ ಪರ ನಿಂತ ಸ್ಟಾರ್ಸ್
'ಹಲವು ಭಾಷೆ ಬಲ್ಲೆ.. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ..ಆದರೆ ನನ್ನ ಕಲಿಕೆ..ನನ್ನ ಗ್ರಹಿಕೆ..ನನ್ನ ಬೇರು..ನನ್ನ ಶಕ್ತಿ...ನನ್ನ ಹೆಮ್ಮೆ..ನನ್ನ ಮಾತೃಭಾಷೆ ಕನ್ನಡ #ಹಿಂದಿ_ಹೇರಿಕೆ_ಬೇಡ ..NO'' ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದಾರೆ. ''ನನ್ನ ದೇಶ ಭಾರತ ನನ್ನ ಬೇರು ಕನ್ನಡ ಎಲ್ಲ ಭಾಷೆಯನ್ನು ಗೌರವಿಸುತ್ತೇನೆ ನನ್ನ ಭಾಷೆಯನ್ನು ಹೆಚ್ಚು ಪ್ರೀತಿಸುತ್ತೇನೆ ಯಾವುದೇ ಹೇರಿಕೆ ಸಲ್ಲದು'' ಎಂದು ನಟ ಧನಂಜಯ್ ಟ್ವೀಟ್ ಮಾಡಿದ್ದಾರೆ.


Click it and Unblock the Notifications











