Devil Big Update: ಹೊಸ ಲುಕ್ನಲ್ಲಿ ದಾಸನ ದರ್ಶನ: ಬರ್ತ್ಡೇಗೆ ಬಿಗ್ ಸರ್ಪ್ರೈಸ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅಭಿಮಾನಿಗಳು 'ಕಾಟೇರ' ಸಕ್ಸಸ್ ಸಂಭ್ರಮದಲ್ಲಿದ್ದಾರೆ. ಸಿನಿಮಾ ಈಗಾಗಲೇ 200 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿರುವ ಅಂದಾಜಿದೆ. 25ನೇ ದಿನವೂ ಸಿನಿಮಾ ಕೆಲವೆಡೆ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಇದೆಲ್ಲದರ ನಡುವೆ ದರ್ಶನ್ ಹುಟ್ಟುಹಬ್ಬ ಬರುತ್ತಿದೆ. 'ಕಾಟೇರ' ಬ್ಲಾಕ್ಬಸ್ಟರ್ ಹಿನ್ನೆಲೆ ಈ ವರ್ಷ ಸಂಭ್ರಮಾಚರಣೆ ಜೋರಾಗಿರಲಿದೆ.
ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲೇ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದಾರೆ. ಈಗಾಗಳೇ ಮಿಲನಾ ಪ್ರಕಾಶ್ ನಿರ್ದೇಶನದಲ್ಲಿ ದರ್ಶನ್ 57ನೇ ಸಿನಿಮಾ ಘೋಷಣೆ ಮಾಡಿದ್ದಾರೆ. ಚಿತ್ರಕ್ಕೆ 'ಡೆವಿಲ್- ದಿ ಹೀರೊ' ಎನ್ನುವ ಟೈಟಲ್ ಫಿಕ್ಸ್ ಆಗಿದೆ. ಈಗಾಗಲೇ ಸರಳವಾಗಿ ಪೂಜೆ ನೆರವೇರಿಸಿ ಚಿತ್ರಕ್ಕೆ ಚಾಲನೆ ಕೊಡಲಾಗಿದೆ.

ಈ ಹಿಂದೆ ದರ್ಶನ್ ಹಾಗೂ ಪ್ರಕಾಶ್ ಕಾಂಬಿನೇಷನ್ನಲ್ಲಿ 'ತಾರಕ್' ಸಿನಿಮಾ ಬಂದು ಗೆದ್ದಿತ್ತು. ಅದೇ ಕಾಂಬಿನೇಷನ್ನಲ್ಲಿ ಮತ್ತೊಂದು ಆಕ್ಷನ್ ಎಂಟರ್ಟೈನರ್ ಸಿನಿಮಾ ನಿರ್ಮಾಣ ನಡೀತಿದೆ. ಹಲವು ವರ್ಷಗಳಿಂದ ಯಾವುದೇ ಸಿನಿಮಾ ಮಾಡದ ನಿರ್ದೇಶಕರು ಈ ಚಿತ್ರಕ್ಕಾಗಿ ಸಿದ್ಧತೆ ನಡೆಸಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಟೈಟಲ್ನಿಂದಲೇ 'ಡೆವಿಲ್' ಸಿನಿಮಾ ಕುತೂಹಲ ಮೂಡಿಸಿರುವುದು ಸುಳ್ಳಲ್ಲ.
ತಮ್ಮ ಹುಟ್ಟುಹಬ್ಬಕ್ಕೆ 'ಡೆವಿಲ್' ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲು ದರ್ಶನ್ ಮುಂದಾಗಿದ್ದಾರೆ. ಈಗಾಗಲೇ ಫೋಟೊಶೂಟ್ ನಡೆದಿರುವ ಬಗ್ಗೆ ಸುಳಿವು ಸಿಗುತ್ತಿದೆ. ಇತ್ತೀಚೆಗೆ ದರ್ಶನ್ ಅಭಿಮಾನಿಗಳ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೊಗಳನ್ನು ತಲೆ ಕೂದಲಿಗೆ ಕಲರ್ ಹಾಕಿಕೊಂಡು ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡಿರುವುದನ್ನು ನೋಡಬಹುದು. 'ಡೆವಿಲ್' ಲುಕ್ ಟೆಸ್ಟ್ಗಾಗಿಯೇ ಈ ಸ್ಟೈಲ್ ಎನ್ನಲಾಗ್ತಿದೆ.
ಅಜನೀಶ್ ಲೋಕನಾಥ್ ಸಂಗೀತ, ಸುಧಾಕರ್ ರಾಜ್ ಛಾಯಾಗ್ರಹಣ 'ಡೆವಿಲ್' ಚಿತ್ರಕ್ಕಿದೆ. ಫೋಟೊಶೂಟ್ ಮಾಡಿಸಿ ದರ್ಶನ್ ಹುಟ್ಟುಹಬ್ಬಕ್ಕೆ ಸಣ್ಣ ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಸಾಧ್ಯತೆಯಿದೆ. ಅಜನೀಶ್ ಬಿಜಿಎಂ ಹಿನ್ನೆಲೆಯಲ್ಲಿ 'ಡೆವಿಲ್' ದರ್ಶನ್ ಖದರ್ ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ದುಷ್ಯಂತ್ ಜೊತೆ ಸೇರಿ ನಿರ್ದೇಶಕ ಪ್ರಕಾಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

'ತಾರಕ್' ಚಿತ್ರದಲ್ಲಿ ಎಮೋಷನಲ್ ಅಂಶಗಳು ಚೆನ್ನಾಗಿ ವರ್ಕ್ ಆಗಿತ್ತು. ಪ್ರಕಾಶ್ ತಮ್ಮ ಸಿನಿಮಾಗಳಲ್ಲಿ ಒಳ್ಳೆ, ಚಿತ್ರಕಥೆ ಇರುವಂತೆ ನೋಡಿಕೊಳ್ಳುತ್ತಾರೆ. ಹಾಗಾಗಿ ಸಹಜವಾಗಿಯೇ 'ಡೆವಿಲ್' ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ. ಇನ್ನು ಪ್ರತಿ ವರ್ಷದಂತೆ ದರ್ಶನ್ ಈ ವರ್ಷರೂ ಅದ್ಧೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ತಿಂಗಳಿಗೂ ಮೊದಲೇ ಈ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
"ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ. ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನ್ನು ಒಗ್ಗೂಡಿಸಿ ಸೇರಿಸಬೇಕಾದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನನ್ನದು. ಹುಟ್ಟುಹಬ್ಬದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಮನೆಯ ಅಕ್ಕ-ಪಕ್ಕದ ನಿವಾಸಿಗಳಿಗೆ ನಿಮ್ಮಿಂದ ತೊಂದರೆಯಾಗುವುದು, ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು, ಹೂ ಕುಂಡಗಳನ್ನು ಬೀಳಿಸುವುದು ಹಾಗೂ ಅವರ ಸ್ವತ್ತುಗಳಿಗೆ ಹಾನಿ ಮಾಡುವುದು, ಇಂತಹ ಅನುಚಿತ ವರ್ತನೆ ನಡೆಯಬಾರದು. ನನ್ನ ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ ಈ ನನ್ನ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ. ಹಾಗು ಸಂಘದ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕೆಂದು ವಿನಂತಿಸುತ್ತೇನೆ" ಎಂದು ಮನವಿ ಮಾಡಿದ್ದಾರೆ.


Click it and Unblock the Notifications











