"ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ, ಕೇಳಲು ಸಾಕಷ್ಟು ಪ್ರಶ್ನೆಗಳಿವೆ"- ಧ್ರುವ ಸರ್ಜಾ
ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ ವಿಚಾರ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಒಬ್ಬ ಶ್ರೇಷ್ಠ ನಟನಿಗೆ ಕೊಡುವ ಗೌರವ ಇದೇನಾ? ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ನಿರ್ದೇಶಕ ರವಿ ಶ್ರೀವತ್ಸ, ನಿರ್ಮಾಪಕ ಕೆ. ಮಂಜು ಸೇರಿದಂತೆ ಚಿತ್ರರಂಗದ ಕೆಲವರು ಈ ಬಗ್ಗೆ ದನಿ ಎತ್ತಿದ್ದಾರೆ. ನಟ ಧ್ರುವ ಸರ್ಜಾ ಕೂಡ ಅಭಿಮಾನಿಗಳ ಬೆಂಬಲಕ್ಕೆ ನಿಂತಿದ್ದಾರೆ.
ಕುಟುಂಬಸ್ಥರ ಆಸೆಯಂತೆ ಈಗಾಗಲೇ ಮೈಸೂರಿನಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ. ಆದರೆ ಅಭಿಮಾನಿಗಳು ಮಾತ್ರ ಅವರ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ಆಗಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಈಗ ಅಲ್ಲಿದ್ದ ಸಮಾಧಿ ಗೋಪುರವನ್ನು ಕೂಡ ಕೆಡವಲಾಗಿದೆ. ಯಾವತ್ತಾದರೂ ಒಂದು ದಿನ ಅಲ್ಲಿ ಸ್ಮಾರಕ ನಿರ್ಮಾಣವಾಗುತ್ತದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮುಂದೇನು? ಎನ್ನುವ ಪ್ರಶ್ನೆ ಕಾಡುತ್ತಿದೆ.

ಅಭಿಮಾನ್ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣವಾಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ಇದಕ್ಕೆ ನಟ ಧ್ರುವ ಸರ್ಜಾ ಕೂಡ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಧ್ರುವ "ಸಾಧಕನಿಗೂ ಸಾವಿಲ್ಲ ಕಲೆಗೂ ಸಾವಿಲ್ಲ ವಿಷ್ಣು ಅಪ್ಪಾಜಿ ಅಜರಾಮರ ... ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು, ಆದರೂ ಸಹ ಈ ಒಂದು ನಾಡಿನಲ್ಲಿ ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ, ಮನಸ್ಸಿಗೆ ಬಹಳಷ್ಟು ನೋವು ಉಂಟಾಗಿದೆ. ಕೇಳಲು ಸಾಕಷ್ಟು ಪ್ರಶ್ನೆಗಳಿವೆ" ಎಂದು ಬರೆದುಕೊಂಡಿದ್ದಾರೆ.
"ಇದೆಲ್ಲದಕ್ಕೂ ಉತ್ತರ ನಾನು ಒಬ್ಬ ಕನ್ನಡಿಗನಾಗಿ ಒಬ್ಬ ಕಲಾವಿದನಾಗಿ ಈ ಸಂದರ್ಭದಲ್ಲಿ ವಿಷ್ಣು ಸರ್ ಅಭಿಮಾನಿಗಳ ಜೊತೆ ಪ್ರಾಮಾಣಿಕವಾಗಿ ಇದ್ದೇನೆ. ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ.. ಜೈ ಕನ್ನಡಾಂಬೆ ವಿಷ್ಣು ದಾದಾ ಅಜರಾಮರ" ಎಂದು ಧ್ರುವ ಸರ್ಜಾ ಟ್ವೀಟ್ ಮಾಡಿದ್ದಾರೆ. ನಿನ್ನೆ(ಆಗಸ್ಟ್ 8) ಬೆಳಗ್ಗೆ 3 ಗಂಟೆ ಸುಮಾರಿಗೆ ಸಮಾಧಿ ತೆರವು ಕಾರ್ಯಾಚರಣೆ ಮಾಡಲಾಗಿದೆ. ವಿಷಯ ಗೊತ್ತಾದರೆ ವಿಷ್ಣುವರ್ಧನ್ ಅಭಿಮಾನಿಗಳು ಗಲಾಟೆ ಮಾಡುತ್ತಾರೆ ಎಂದು ಹೀಗೆ ರಾತ್ರೋರಾತ್ರಿ ಸಮಾಧಿ ಧ್ವಂಸ ಮಾಡಿದ್ದಾರೆ ಎನ್ನಲಾಗ್ತಿದೆ.
ಅಭಿಮಾನ್ ಸ್ಟುಡಿಯೋ ಬಳಿ ಕೆಲ ಅಭಿಮಾನಿಗಳು ತೆರಳಿ ಪ್ರತಿಭಟನೆ ನಡೆಸುವುದಕ್ಕೆ ಪ್ರಯತ್ನಿಸಿದ್ದರು. ಆದರೆ ಪೊಲೀಸರು ಅಭಿಮಾನಿಗಳನ್ನು ಅಲ್ಲಿಂದ ಹೊರಗೆ ಹೋಗುವಂತೆ ಕಳುಹಿಸುತ್ತಿಲ್ಲ. ಯಾರೂ ಪ್ರತಿಭಟನೆ ಮಾಡಬಾರದು ಎಂದು ಪ್ರತಿಭಟನಾಕಾರನ್ನು ಅಲ್ಲಿಂದ ಕಳುಹಿಸುತ್ತಿದ್ದಾರೆ. "ಶ್ರೇಷ್ಠನಟನ ಸಮಾಧಿಗೆ ರಾಜಧಾನಿಯಲ್ಲಿ ಜಾಗ ಕೊಡೋಕೆ ಸಾಧ್ಯವಿಲ್ಲವೇ?" ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
16 ವರ್ಷಗಳಿಂದ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸಾಧ್ಯವಾಗಲೇ ಇಲ್ಲ. ವಿವಾದಿತ ಜಾಗದಲ್ಲಿ ಸಮಾಧಿ ಇದ್ದಿದ್ದೇ ಇಷ್ಟೊಂದು ತಡವಾಗಲು ಕಾರಣವಾಗಿತ್ತು. ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಸಮಾಧಿ ಕೆಡವಲಾಗಿದೆ. ಮೈಸೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದರೂ ಅಭಿಮಾನಿಗಳು ಅಲ್ಲಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ದಾದಾ ಪಾರ್ಥೀವ ಶರೀರಕ್ಕೆ ಅಗ್ನಿ ಸ್ಪರ್ಶವಾಗಿರುವ ಜಾಗದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಎಂದು ಮನವಿ ಮಾಡುತ್ತಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಸದಸ್ಯರು, ಸರ್ಕಾರ ಹಾಗೂ ಅಂಬರೀಶ್ ಸಾಕಷ್ಟು ಪ್ರಯತ್ನ ನಡೆಸಿದ್ದರು. ಆದರೆ ದಿನದಿಂದ ದಿನಕ್ಕೆ ಅಲ್ಲಿ ಸ್ಮಾರಕ ನಿರ್ಮಾಣ ಕಗ್ಗಂಟಾಗುತ್ತಾ ಹೋಗಿತ್ತು. ಹಾಗಾಗಿ ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಒಪ್ಪಿದ್ದರು.


Click it and Unblock the Notifications











