ಸಂಜನಾ ಜೊತೆ ಶಾಸಕ ಜಮೀರ್ ಶ್ರೀಲಂಕಾ ಪ್ರವಾಸ ಆರೋಪ: ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ಐಆರ್
'ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಅವರ ಜೊತೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಶ್ರೀಲಂಕಾಗೆ ಹೋಗಿದ್ದರು, ಈ ಕುರಿತು ತನಿಖೆ ಆದರೆ ಡ್ರಗ್ಸ್ ಜಾಲದ ನಂಟು ಬಯಲಾಗುತ್ತದೆ' ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿ ಆರೋಪಿಸಿದ್ದರು.
ಪ್ರಶಾಂತ್ ಸಂಬರ್ಗಿ ಆರೋಪಕ್ಕೆ ತಿರುಗೇಟು ನೀಡಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ನೀಡಿದ್ದು, ಎಫ್ ಐ ಆರ್ ಸಹ ದಾಖಲಾಗಿದೆ. ಡ್ರಗ್ಸ್ ಪ್ರಕರಣದ ಬಗ್ಗೆ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ. ಮುಂದೆ ಓದಿ...

ನಿಷ್ಪಕ್ಷಪಾತ ತನಿಖೆ ನಡೆಯಲಿ
ಡ್ರಗ್ಸ್ ನಂಟಿಗೆ ಸಂಬಂಧಿಸಿದಂತೆ ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರವಾದುದ್ದು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜು ಬೊಮ್ಮಾಯಿ ಅವರಲ್ಲಿ ಒತ್ತಾಯಿಸಿದ್ದಾರೆ.

ಸಂಬರ್ಗಿ ವಿರುದ್ಧ ಎಫ್ ಐ ಆರ್
ಪ್ರಶಾಂತ್ ಸಂಬರಗಿ ಎಂಬಾತನ ಸುಳ್ಳು ಆರೋಪಗಳ ಬಗ್ಗೆ ಬೆಂಗಳೂರಿನ 24ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದೇನೆ. ದೂರಿನಂತೆ ಐಪಿಸಿ ಸೆಕ್ಷನ್ 120(B), 504, 463, 465, 506 ಸೆಕ್ಷನ್ ಗಳ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆಗೆ ಚಾಮರಾಜಪೇಟೆ ಠಾಣೆಯ ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದೆ' ಎಂದು ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ.

ಸಂಜನಾ ಜೊತೆ ಹೋಗಿದ್ದರೆ ತನಿಖೆ ಆಗಲಿ
''ಜೂನ್ 08, 2019 ರಂದು ನಾನು ಸಂಜನಾ ಅವರ ಜೊತೆ ಶ್ರೀಲಂಕಾಕ್ಕೆ ಹೋಗಿದ್ದೆ ಎಂದು ಆರೋಪಿಸಲಾಗಿದೆ. ಹಾಗಿದ್ದಲ್ಲಿ ವಿಮಾನ ಪ್ರಯಾಣದ ಟಿಕೆಟ್ ಗಳಿರಬೇಕಲ್ಲಾ? ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ ಅಲ್ಲಿಯೂ ದಾಖಲೆಗಳಿಬೇಕಲ್ಲಾ? ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ನನ್ನ ಓಡಾಟದ ಚಿತ್ರಗಳೂ ಇರಬೇಕಲ್ವಾ? ಈ ಬಗ್ಗೆಯೂ ತನಿಖೆ ನಡೆಯಲಿ'' ಎಂದು ಸವಾಲ್ ಎಸೆದಿದ್ದಾರೆ.

ನಮ್ಮ ಸರ್ಕಾರ ಆಡಳಿತದಲ್ಲಿಲ್ಲ
''ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ನಾನೇನೋ ಪ್ರಭಾವ ಬೀರುತ್ತಿದ್ದೆ ಎಂದು ಹೇಳಬಹುದಿತ್ತು. ಈಗ ನಟಿ ಸಂಜನಾ ಪೊಲೀಸರ ವಶದಲ್ಲಿದ್ದಾರೆ. ಆದ್ದರಿಂದ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಿ. ಅದೇ ರೀತಿ ಶ್ರೀಲಂಕಾ ಪ್ರವಾಸದ ಬಗ್ಗೆಯೂ ತನಿಖೆ ನಡೆಸಲಿ'' ಎಂದಿದ್ದಾರೆ.

ನನ್ನ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ
''ಪೊಲೀಸರು ನಡೆಸುವ ತನಿಖೆಯಲ್ಲಿ ಸಂಬರಗಿ ಮಾಡಿರುವ ಆರೋಪಗಳು ಸಾಬೀತಾದರೆ ನನ್ನ ಸಂಪೂರ್ಣ ಆಸ್ತಿಯನ್ನು ರಾಜ್ಯ ಸರ್ಕಾರಕ್ಕೆ ಬರೆದುಕೊಡಲು ಸಿದ್ಧನಿದ್ದೇನೆ. ನನ್ನ ಮೇಲಿನ ಆರೋಪಗಳು ಸುಳ್ಳು ಎಂದು ಕಂಡುಬಂದರೆ ಆರೋಪಿಗಳನ್ನು ಈ ನೆಲದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಪಡಿಸಲಿ'' ಎಂದು ಕಿಡಿಕಾರಿದ್ದಾರೆ.
Recommended Video

ರಾಜಕೀಯದಲ್ಲಿ ಹೊಸತೇನಲ್ಲ
''ನಾನು ರಾಜಕೀಯದಲ್ಲಿರುವ ವ್ಯಕ್ತಿ, ಸುಳ್ಳು ಆರೋಪಗಳು, ಚಾರಿತ್ರ್ಯ ಹನನದ ಪ್ರಯತ್ನಗಳು ನನಗೆ ಹೊಸತೇನಲ್ಲ. ಅವೆಲ್ಲವನ್ನು ಜನಾಶೀರ್ವಾದದ ಬಲದಿಂದ ಎದುರಿಸುತ್ತಾ ಬಂದಿದ್ದೇನೆ. ನಾನು ಏನೆನ್ನುವುದು ನಾನು ನಂಬಿರುವ ಜನ ಮತ್ತು ನನ್ನ ಆತ್ಮಸಾಕ್ಷಿಗೆ ಗೊತ್ತಿದೆ'' ಎಂದು ಆರೋಪಕ್ಕೆ ತಿರುಗೇಟು ನೀಡಿದ್ದಾರೆ.


Click it and Unblock the Notifications











