ಪುನೀತ್ ನಮನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವಗೌಡರಿಗೆ ಆಹ್ವಾನ
ಪುನೀತ್ ರಾಜ್ಕುಮಾರ್ ಹಠಾತ್ ನಿಧನದಿಂದ ಚಿತ್ರರಂಗ ಸೈಲೆಂಟ್ ಆಗಿದೆ. ಅಪ್ಪು ಅಗಲಿಕೆಯ ಬಳಿಕ ಕನ್ನಡ ಸೇರಿದಂತೆ ತೆಲುಗು, ತಮಿಳು ಚಿತ್ರರಂಗದ ಗಣ್ಯರು ಪುನೀತ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಟಾಲಿವುಡ್ ಸ್ಟಾರ್ ನಟರಾದ ನಾಗಾರ್ಜುನ, ರಾಮ್ ಚರಣ್, ತಮಿಳು ನಟ ಸೂರ್ಯ, ಶಿವಕಾರ್ತಿಕೇಯ, ಹಿರಿಯ ನಟಿ ಗೀತಾ, ಪ್ರಿಯಾಮಣಿ ಸೇರಿದಂತೆ ಚಿತ್ರರಂಗದ ಗಣ್ಯರು ಅಪ್ಪು ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸುತ್ತಿದ್ದಾರೆ. ಇದೇ ವೇಳೆ ಇನ್ನೊಂದು ಕಡೆ ಇಡೀ ಚಿತ್ರರಂಗ ಒಂದಾಗಿ ಪುನೀತ್ ರಾಜ್ಕುಮಾರ್ಗೆ ನಮನ ಸಲ್ಲಿಸಲು ಸಜ್ಜಾಗುತ್ತಿದ್ದಾರೆ.
ನವೆಂಬರ್ 16 ರಂದು ಚಲನಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ 'ಪುನೀತ್ ನಮನ' ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಫಿಲ್ಮ್ ಚೇಂಬರ್ನ ಸದಸ್ಯರು ತೆಲುಗು, ತಮಿಳು ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗ ಹಾಗೂ ರಾಜಕೀಯ ಮುಖಂಡರಿಗೆ ಆಹ್ವಾನ ನೀಡುತ್ತಿದ್ದಾರೆ. ಸದ್ಯ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರಿಗೆ ಫಿಲ್ಮ್ ಚೇಂಬರ್ ವತಿಯಿಂದ ಪುನೀತ್ ನಮನ ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಲಾಗಿದೆ.
ಹೆಚ್ಡಿ ದೇವೇಗೌಡರನ್ನು ಆಹ್ವಾನಿಸಿದ ಸಾ.ರಾ ಗೋವಿಂದು
ಪುನೀತ್ ನಮನ ಕಾರ್ಯಕ್ರಮದ ಮುಂದಾಳಾತ್ವ ವಹಿಸಿರುವ ಸಾರಾ ಗೋವಿಂದು ಇಂದು ( ನವೆಂಬರ್ 6) ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರನ್ನು ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಇವರೊಂದಿಗೆ ಮೆಜೆಸ್ಟಿಕ್ ಚಿತ್ರದ ನಿರ್ಮಾಪಕ ಎಂ ಜಿ ರಾಮಮೂರ್ತಿ ಹಾಗೂ ನಿರ್ದೇಶಕ ಹೆಚ್ ವಾಸು ಕೂಡ ಜೊತೆಯಾಗಿದ್ದರು. "ಅನಾರೋಗ್ಯದ ಹಿನ್ನೆಲೆ ಕಾರ್ಯಕ್ರಮಕ್ಕೆ ಹಾಜರಾಗುವುದು ಸಾಧ್ಯವಾಗುತ್ತದೆಯೋ ಇಲ್ಲವೋ ನೋಡೋಣ. ಶಕ್ತಿ ಮೀರಿ ಪುನೀತ್ ನಮನ ಕಾರ್ಯಕ್ರಮಕ್ಕೆ ಬರಲು ಯತ್ನಿಸುತ್ತೇನೆ. ಕಾರ್ಯಕ್ರಮಕ್ಕೆ ಬರಲು ಶತಪ್ರಯತ್ನ ಮಾಡುತ್ತೇನೆ" ಎಂದು ಹೆಚ್ಡಿ ದೇವೇಗೌಡರು ಭರವಸೆ ನೀಡಿದ್ದಾರೆ.

ಪುನೀತ್ ನಮನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
"ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯಲಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ. ಕೇವಲ ಚಿತ್ರರಂಗ ಹಾಗೂ ರಾಜಕೀಯ ವಲಯದ ಗಣ್ಯರಿಗಷ್ಟೇ ಆಹ್ವಾನ ನೀಡಲಾಗಿದೆ. ನಿಯಂತ್ರಣ ಕಷ್ಟ ಆಗುತ್ತೆ ಅನ್ನುವ ಕಾರಣಕ್ಕೆ ಸಾರ್ವಜನಿಕರಿಗೆ ಆಹ್ವಾನ ನೀಡಿಲ್ಲ. ಆದರೆ, ಮಾಧ್ಯಮಗಳಲ್ಲಿ ಹಾಗೂ ಯೂಟ್ಯೂಬ್ ಚಾನೆಲ್ಗಳಲ್ಲಿ ಈ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಅವಕಾಶ ನೀಡಲಾಗಿದ್ದು, ಟಿವಿ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ." ಎಂದು ನಿರ್ಮಾಪಕ ಸಾರಾ ಗೋವಿಂದು ಫಿಲ್ಮಿ ಬೀಟ್ಗೆ ತಿಳಿಸಿದ್ದಾರೆ.
1 ಸಾವಿರ ಗಣ್ಯರು ಆಗಮಿಸುವ ನಿರೀಕ್ಷೆ
ಪುನೀತ್ ನಮನ ಕಾರ್ಯಕ್ರಮಕ್ಕೆ ಕರ್ನಾಟಕ ಅಷ್ಟೇ ಅಲ್ಲ, ದಕ್ಷಿಣ ಭಾರತದ ಗಣ್ಯರನ್ನು ಆಹ್ವಾನಿಸಲಾಗಿದೆ. ಚಿತ್ರರಂಗ ಸೇರಿದಂತೆ, ಪುನೀತ್ ಆತ್ಮೀಯರಿಗೆ ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸುಮಾರು ಒಂದು ಸಾವಿರ ಗಣ್ಯರು ಪುನೀತ್ ನಮನ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮದಲ್ಲಿ ಕೇವಲ ಗಣ್ಯರ ಮಾತು ಹಾಗೂ ಗೀತೆಯೊಂದಿಗೆ ನಮನ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹೆಸರಾಂತ ಗಾಯಕರು ಪುನೀತ್ ನಮನ ಕಾರ್ಯಕ್ರಮದಲ್ಲಿ ಅಪ್ಪುಗಾಗಿ ಗೀತ ನಮನ ಸಲ್ಲಿಸಲಿದ್ದಾರೆ. ಅಪ್ಪು ಬಗ್ಗೆ ಸಿನಿ ಸಾಹಿತಿ ಡಾ. ನಾಗೇಂದ್ರ ಪ್ರಸಾದ್ ಬರೆದಿರುವ ಹಾಡೊಂದನ್ನು ವೇದಿಕೆ ಮೇಲೆ ಹಾಡಲಾಗುತ್ತದೆ. ಈ ಗೀತೆಯ ಮೂಲಕವೇ ಗೀತ ನಮನ ಆರಂಭವಾಗಲಿದೆ ಎಂದು ಸಾ.ರಾ.ಗೋವಿಂದ ತಿಳಿಸಿದ್ದಾರೆ. ಈ ವೇಳೆ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಅಣ್ಣಾವ್ರ ಕುಟುಂಬ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ಈಗಾಗಲೇ ಫಿಲ್ಮ್ ಚೇಂಬರ್ ವತಿಯಿಂದ ಪೂರ್ವ ತಯಾರಿ ನಡೆಯುತ್ತಿದ್ದು, ಸಿನಿಮಾ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರದಿಂದ ಗಣ್ಯರನ್ನು ಆಹ್ವಾನಿಸುವ ಕೆಲಸ ಭರದಿಂದ ಸಾಗಿದೆ.


Click it and Unblock the Notifications











