ಶಿವಮೊಗ್ಗದಲ್ಲಿ ಕುಟುಂಬ ಸಹಿತ ಗಂಧದ ಗುಡಿ ಸಾಕ್ಷ್ಯಚಿತ್ರ ವೀಕ್ಷಿಸಿದ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು (ನವೆಂಬರ್ 03) ನಟ ಪುನೀತ್ ರಾಜಕುಮಾರ್ ಅವರ 'ಗಂಧದ ಗುಡಿ' ಸಾಕ್ಷ್ಯಚಿತ್ರ ವೀಕ್ಷಿಸಿದರು.
ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ನಲ್ಲಿ ಯಡಿಯೂರಪ್ಪ ಅವರು ಕುಟುಂಬ ಸಹಿತ 'ಗಂಧದ ಗುಡಿ' ಸಾಕ್ಷ್ಯ ಚಿತ್ರ ವೀಕ್ಷಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಸಾಕ್ಷ್ಯ ಚಿತ್ರ ವೀಕ್ಷಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು, ನಟ ಪುನೀತ್ ರಾಜಕುಮಾರ್ ಅವರಿಗೆ ಪ್ರಕೃತಿ ಕುರಿತು ಆಸಕ್ತಿ ಇತ್ತು. ಅದ್ಭುತವಾದ ಸಿನಿಮಾ ಮಾಡಿದ್ದಾರೆ. ಇದು ಸಂತೋಷದ ಸಂಗತಿ. ಎಲ್ಲರು ಈ ಸಿನಿಮಾವನ್ನು ನೋಡಬೇಕು. ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸಿಕೊಳ್ಳಬೇಕು ಎಂದರು.
ಯಡಿಯೂರಪ್ಪ ಅವರು ಸಿಟಿ ಸೆಂಟರ್ ಮಾಲ್ ಗೆ ಬರುತ್ತಿದ್ದಂತೆ ಜನರು ಫೋಟೊ, ಸೆಲ್ಫಿಗೆ ಮುಗಿಬಿದ್ದರು. ಕೆಲವರು ಯಡಿಯೂರಪ್ಪ ಅವರ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.



Click it and Unblock the Notifications











