ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಶಂಕುಸ್ಥಾಪನೆ
ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೆಂಗೇರಿ ಬಳಿಯ ಮೈಲಸಂದ್ರ ಗ್ರಾಮದ ಡಾ. ವಿಷ್ಣುವರ್ಧನ್ ಮುಖ್ಯರಸ್ತೆಯಲ್ಲಿ ಡಾ.ವಿಷ್ಣುವರ್ಧನ್ ಸ್ಮಾರಕದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿಷ್ಣು ಸ್ಮಾರಕ ಪ್ರದೇಶದಲ್ಲಿ ಸಭಾಂಗಣ, ಗ್ರಂಥಾಲಯ ಹಾಗೂ ಚಿತ್ರರಂಗಕ್ಕೆ ಸಂಬಂಧಿಸಿದ ಇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ಸ್ಮಾರಕ ನಿರ್ಮಾಣಕ್ಕೆ ಬಜೆಟ್ನಲ್ಲಿ ರು.11 ಕೋಟಿ ಅನುದಾನ ಮೀಸಲಿಡಲಾಗಿದೆ. ಸ್ಮಾರಕದ ನಿರ್ಮಾಣ ಕಾಮಗಾರಿಯನ್ನು ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. [ಡಾ.ವಿಷ್ಣು ಸ್ಮಾರಕಕ್ಕೆ ಸಂಬಂಧಿಸಿದ ಕೆಲವು ಪ್ರಶ್ನೆಗಳು]

ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿಯ ಮೈಲಸಂದ್ರ ಗ್ರಾಮ (ಸರ್ವೆ ನಂ.22)ದಲ್ಲಿ 108 ಎಕರೆಗೂ ಅಧಿಕ ವಿಸ್ತೀರ್ಣದ ಜಾಗವಿದೆ. ಇಲ್ಲಿ ಸರಕಾರದ ಆದೇಶದಂತೆ 1935ರ ಡಿ.14ರಂದು ಸರಕಾರಿ ಮುಫತ್ ಕಾವಲಿಗೆ 78 ಎಕರೆ, 18 ಗುಂಟೆ ಪ್ರದೇಶವನ್ನು ಕಾಯ್ದಿರಿಸಲಾಗಿದೆ. ಉಳಿದ 29 ಎಕರೆ ಪ್ರದೇಶವನ್ನು ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಲಾಗಿದೆ. ಈ ಪೈಕಿ ಎರಡು ಎಕರೆ ಭೂಮಿಯನ್ನು ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. [ಸ್ಯಾಂಡಲ್ ವುಡ್ ಮಹಾಚುನಾವಣೆ 2014 - ನಿಮ್ಮ ಮತ ಯಾರಿಗೆ?]
ಡಾ. ವಿಷ್ಣವರ್ಧನ್ ಸ್ಮಾರಕದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಸ್.ಟಿ. ಸೋಮಶೇಖರ್ ಅವರು ವಹಿಸುವರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಕೇಂದ್ರದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ್, ವಸತಿ ಸಚಿವ ಹೆಚ್. ಅಂಬರೀಶ್, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ ಪಾಲ್ಗೊಳ್ಳಲಿದ್ದಾರೆ.
ಜೊತೆಗೆ ಖ್ಯಾತ ಚಲನಚಿತ್ರ ನಟಿ ಭಾರತಿ ವಿಷ್ಣುವರ್ಧನ್, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ರಾಜೇಂದ್ರಸಿಂಗ್ ಬಾಬು, ಕಂಠೀರವ ಸ್ಟುಡಿಯೋದ ಅಧ್ಯಕ್ಷರಾದ ವಿಜಯಲಕ್ಷ್ಮೀ ಅರಸ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರ, ಬೆಂಗಳೂರು ಮಹಾಪೌರರಾದ ಶಾಂತಕುಮಾರಿ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಹಾಗೂ ಶಾಸಕ ಮುನಿರತ್ನ, ಲೋಕಸಭಾ ಸದಸ್ಯ ಡಿ.ಕೆ. ಸುರೇಶ್, ರಾಜ್ಯಸಭಾ ಸದಸ್ಯೆ ಡಾ. ಬಿ. ಜಯಶ್ರೀ ಅವರೂ ಉಪಸ್ಥಿತರಿರುತ್ತಾರೆ. (ಫಿಲ್ಮಿಬೀಟ್ ಕನ್ನಡ)


Click it and Unblock the Notifications











