ಡಾ.ರಾಜ್ ಸ್ಮಾರಕಕ್ಕೆ ನ.13ರಂದು ಶಿಲಾನ್ಯಾಸ
ಬೆಂಗಳೂರು, ನ.4: ಡಾ.ರಾಜ್ ಕುಮಾರ್ ಸ್ಮಾರಕ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.13ರಂದು ಹಮ್ಮಿಕೊಳ್ಳ್ಳಲಾಗಿದೆ. ಸದಾಶಿವ ನಗರದ ಡಾ.ರಾಜ್ ನಿವಾಸಕ್ಕೆ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಈ ಕುರಿತು ವಿವರ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು, ಡಾ.ರಾಜ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ರು. 8 ಕೋಟಿಯನ್ನು ಬಿಡುಗಡೆ ಮಾಡಿದೆ. ಸ್ಮಾರಕ ನಿರ್ಮಾಣಕ್ಕೆ ಅಗತ್ಯವಾದ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ನ.13ರಂದು ಶಿಲಾನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಶೀಘ್ರದಲ್ಲೇ ಸ್ಮಾರಕ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.
ಕನ್ನಡ ಚಲನಚಿತ್ರರಂಗದ ಸುವರ್ಣ ಮಹೋತ್ಸವನ್ನು ವಿಜೃಂಭಣೆಯಿಂದ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದ ವರದಿ ನೀಡುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಕೋರಿದ್ದೇವೆ. ವರದಿ ಬಂದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಮಾತನಾಡುತ್ತಾ,ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಲಭಿಸಿರುವುದು ನಮ್ಮ ಕುಟುಂಬದಲ್ಲಿ ಅತೀವ ಸಂತೋಷ ಉಂಟು ಮಾಡಿದೆ ಎಂದರು. ರಾಜ್ ಕುಮಾರ್ ಅವರು ಇದ್ದಾಗ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ನೀಡುವಂತೆ ಹಲವಾರು ಬಾರಿ ಒತ್ತಾಯ ಮಾಡಿದ್ದರು ಎಂದು ಪಾರ್ವತಮ್ಮ ರಾಜ್ ಕುಮಾರ್ ನೆನೆದರು.
(ದಟ್ಸ್ ಕನ್ನಡ ಸಿನಿವಾರ್ತೆ)


Click it and Unblock the Notifications