'ಪೂಲ್ ಔರ್ ಕಾಂಟೆ' ನೆನಪಿಸಿ ಅಜಯ್ಗೆ ಬುದ್ಧಿ ಹೇಳಿದ ಎಚ್ಡಿ ಕುಮಾರಸ್ವಾಮಿ
ಸುದೀಪ್ರ ಹಿಂದಿ ಭಾಷೆ ಕುರಿತಾದ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಮಾಡಿರುವ ಟ್ವೀಟ್ ಭಾರಿ ವಿವಾದ ಎಬ್ಬಿಸಿದೆ. ಹಿಂದಿ ರಾಷ್ಟ್ರಭಾಷೆ ಎಂದು ಬುದ್ಧಿ ಹೇಳಲು ಬಂದ ಅಜಯ್ಗೆ ಕನ್ನಡಿಗರೆಲ್ಲ ಒಟ್ಟಾಗಿ ಬುದ್ಧಿ ಹೇಳುತ್ತಿದ್ದಾರೆ.
ಸುದೀಪ್ ಮಾತಿಗೆ ಕೇವಲ ಚಿತ್ರರಂಗದವರು ಮಾತ್ರವೇ ಅಲ್ಲದೆ ರಾಜಕಾರಣಿಗಳು ಸಹ ಬೆಂಬಲ ನೀಡಿದ್ದಾರೆ. ಅಜಯ್ ದೇವಗನ್ ಟ್ವೀಟ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಪ್ರತಿಕ್ರಿಯೆ ನೀಡಿ, ಹಿಂದಿ ಎಂದೂ ನಮ್ಮ ರಾಷ್ಟ್ರಭಾಷೆ ಆಗಿರಲಿಲ್ಲ, ಆಗುವುದೂ ಇಲ್ಲ ಎಂದಿದ್ದರು.
ಇದೀಗ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಅಜಯ್ ದೇವಗನ್ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ಅಜಯ್ ದೇವಗನ್ರ ಮೊದಲ ಸಿನಿಮಾವನ್ನು ನೆನಪಿಸಿ ಸಹಭಾಳ್ವೆ, ವಿವಿಧತೆಯಲ್ಲಿ ಏಕತೆಯ ಪಾಠವನ್ನು ಕುಮಾರಸ್ವಾಮಿ ಮಾಡಿದ್ದಾರೆ.
Recommended Video


ಸುದೀಪ್ ಹೇಳಿರುವುದು ಸರಿಯಾಗಿಯೇ ಇದೆ: ಎಚ್ಡಿಕೆ
''ಚಿತ್ರನಟ ಕಿಚ್ಚ ಸುದೀಪ್ ಅವರು ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ'' ಎಂದಿದ್ದಾರೆ ಎಚ್ಡಿ ಕುಮಾರಸ್ವಾಮಿ. ''ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ'' ಎಂದು ಬುದ್ಧಿವಾದ ಹೇಳಿದ್ದಾರೆ ಎಚ್ಡಿಕೆ.

ಡಬ್ ಮಾಡಬೇಡಿ ಎಂದರೆ ಏನರ್ಥ?: ಕುಮಾರಸ್ವಾಮಿ ಪ್ರಶ್ನೆ
''ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ?'' ಎಂದು ಪ್ರಶ್ನೆ ಮಾಡಿದ್ದಾರೆ ಕುಮಾರಸ್ವಾಮಿ.

ರಾಷ್ಟ್ರೀಯ ಪಕ್ಷಗಳಿಂದ ಹಿಂದಿ ಹೇರಿಕೆ: ಎಚ್ಡಿಕೆ
''ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ' ಹಿಂದಿ ರಾಜಕೀಯ ಪಕ್ಷಗಳು ' ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ. ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ'' ಎಂದು ಇಂದಿನ ಸ್ಥಿತಿಗೆ ರಾಷ್ಟ್ರೀಯ ಪಕ್ಷಗಳು ಕಾರಣ ಎಂದಿದ್ದಾರೆ ಕುಮಾರಸ್ವಾಮಿ.

'ಫೂಲ್ ಔರ್ ಕಾಂಟೆ' ಒಂದು ವರ್ಷ ಓಡಿತ್ತು: ಎಚ್ಡಿಕೆ
''ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ 'ಫೂಲ್ ಔರ್ ಕಾಂಟೆ' ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು'' ಎಂದು ನೆನಪು ಮಾಡಿದ್ದಾರೆ ಕುಮಾರಸ್ವಾಮಿ. ''ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ'' ಎಂದು ಎಚ್ಚರಿಕೆ ನೀಡಿದ್ದಾರೆ.


Click it and Unblock the Notifications











