Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ಯಾರಾಮೌಂಟ್ ಸಹಭಾಗಿತ್ವದಲ್ಲಿ ಹೆಸರುಘಟ್ಟ ಚಿತ್ರನಗರಿ
ಬೆಂಗಳೂರು ಹೊರವಲಯದ ಹೆಸರುಘಟ್ಟದಲ್ಲಿ ಅಂತರರಾಷ್ಟ್ರೀಯ ಮಟ್ಟದ ಚಿತ್ರನಗರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎಂ.ಜಿ.ಎಂ. ಸಂಸ್ಥೆ ಹಾಗೂ ಪ್ಯಾರಾಮೌಂಟ್ ಸ್ಟುಡಿಯೋ ಕಂಪನಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಈ ಸಂಬಂಧ ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಚಿತ್ರನಗರಿ ನಿರ್ಮಾಣ ಮಾಡಲು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಸಚಿವ ಆರ್. ರೋಷನ್ ಬೇಗ್ ಅವರು ತಿಳಿಸಿದರು.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ತಾರಾ ಅನುರಾಧ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕಳೆದ 30 ವರ್ಷಗಳಿಂದಲೂ ಹೆಸರಘಟ್ಟದಲ್ಲಿ ಚಿತ್ರನಗರಿ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಲೇ ಬಂದಿವೆ. [ಚಿತ್ರೀಕರಣ ಅನುಮತಿಗೆ ಏಕಗವಾಕ್ಷಿ ಪದ್ಧತಿ ಚಿಂತನೆ]
ಚಿಕಾಗೋ, ಸ್ವಿಜರ್ಲ್ಯಾಂಡ್ ದೇಶಗಳಲ್ಲಿ ಚಿತ್ರೀಕರಣಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಅಲ್ಲಿಯ ಸರ್ಕಾರ ಸಿನಿಮಾ ರಂಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ ರೀತಿ ನಮ್ಮ ದೇಶದಲ್ಲೂ ಏಕೆ ಆಗಬಾರದೆಂದು ಸಚಿವರು ಅಭಿಪ್ರಾಯಪಟ್ಟರು.
ಚಲನಚಿತ್ರಗಳ ಚಿತ್ರೀಕರಣಕ್ಕೆ ಅನುಮತಿ ಪಡೆಯಲು ಆಗುತ್ತಿರುವ ತೊಂದರೆಗಳನ್ನು ತಪ್ಪಿಸಲು ಏಕಗವಾಕ್ಷಿ ವ್ಯವಸ್ಥೆಯನ್ನು ಹಾಗೂ ಚಿತ್ರೀಕರಣಕ್ಕೆ ಪರವಾನಗಿ ನೀಡುವ ನಿಯಮಾವಳಿಗಳನ್ನು ಸರಳೀಕರಣಗೊಳಿಸಲಾಗುವುದೆಂದು ಸಚಿವರು ತಿಳಿಸಿದರು.
ಅಲ್ಲದೆ, ವಿಧಾನಸೌಧ ಮುಂಭಾಗ, ಹೈಕೋರ್ಟ್ ಮುಂಭಾಗ ಹಾಗೂ ಲಾಲ್ಬಾಗ್ ಪ್ರದೇಶಗಳಲ್ಲಿ ರಜಾದಿನಗಳಂದು ಸಿನಿಮಾ ಚಿತ್ರೀಕರಣ ಮಾಡಲು ಅವಕಾಶ ಕಲ್ಪಿಸುವ ಸಂಬಂಧ ಜೂ.17ನೇ ತಾರೀಖಿನಂದು ನಗರ ಪೊಲೀಸ್ ಆಯುಕ್ತರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದೆಂದರು.
ನಗರದಲ್ಲಿರುವ ಕಂಠೀರವ ಸ್ಟೂಡಿಯೋದಲ್ಲಿ ಚಿತ್ರೀಕರಣಕ್ಕೆ ಈಗಿರುವ ಸೌಲಭ್ಯಗಳು ಸಮರ್ಪಕವಾಗಿಲ್ಲದರುವುದರಿಂದ ನೊಯಿಡಾದಲ್ಲಿರುವ ಆಧುನಿಕ ಸಿನಿಮಾನಗರ ಮಾದರಿಯಲ್ಲೇ ಶ್ರೀ ಕಂಠೀರವ ಸ್ಟೂಡಿಯೋವನ್ನು ಉನ್ನತೀಕರಿಸಲಾಗುವುದು. ಈ ಸಂಬಂಧ ಅಧಿಕಾರಿಗಳೊಡನೆ ನೊಯಿಡಾಗೆ ತೆರಳಿ ಅಲ್ಲಿರುವ ಸಿನಿಮಾನಗರಿಯಲ್ಲಿ ಏನೆಲ್ಲಾ ಸೌಲಭ್ಯಗಳಿವೆ ಎಂಬ ಮಾಹಿತಿ ಪಡೆಯಲಾಗಿದೆ ಎಂದರು.
ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿ ಸುಮಾರು ರು.10 ಕೋಟಿ ವೆಚ್ಚದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಅನುಕೂಲವಾಗುವಂತೆ ಅಮೃತ ಮಹೋತ್ಸವ ಭವನ ನಿರ್ಮಾಣ ಹಂತದಲ್ಲಿದ್ದು, ಅಲ್ಲಿ ಮಲ್ಟಿಫ್ಲೆಕ್ಸ್ ಚಿತ್ರಮಂದಿರ ಹಾಗೂ ಚಲನಚಿತ್ರ ರಂಗವನ್ನು ಪ್ರತಿಬಿಂಬಿಸುವ ವಸ್ತು ಸಂಗ್ರಹಾಲಯವನ್ನು ರು.10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದರು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನತಾ ಚಿತ್ರಮಂದಿರಗಳನ್ನು ಪ್ರಾರಂಭಿಸಲು ಮುಂದೆ ಬರುವ ಆಸಕ್ತ ಉದ್ಯಮಿಗಳಿಗೆ ಸರ್ಕಾರದ ವತಿಯಿಂದ ಪ್ರೋತ್ಸಾಹಧನ ನೀಡಲಾಗುವುದು. ಇದರಿಂದ ಚಲನಚಿತ್ರಗಳ ಪ್ರದರ್ಶನಕ್ಕೆ ಅನುಕೂಲವಾಗುವುದೆಂದು ಸಚಿವರು ತಿಳಿಸಿದರು.
ಡಾ.ರಾಜ್ಕುಮಾರ್ ಸ್ಮಾರಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಅವರ ಕುಟುಂಬ ವರ್ಗದವರ ಜೊತೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಹಾಗೆಯೇ, ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದವಾರ ಸಭೆ ನಡೆಸಲಾಗಿದ್ದು, ಸ್ಮಾರಕ ನಿರ್ಮಾಣಕ್ಕೆ ಸ್ಥಳ ಹುಡುಕಲಾಗುತ್ತಿದೆ. ಭೂಮಿ ಸಿಕ್ಕ ತಕ್ಷಣ ಸ್ಮಾರಕ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದೆಂದರು. (ಒನ್ಇಂಡಿಯಾ ಕನ್ನಡ)