ಭರವಸೆ ಹುಟ್ಟುಹಾಕಿದ 'ಇನಾಮ್ದಾರ್' ಟೀಸರ್
ಕನ್ನಡ ಚಿತ್ರರಂಗಕ್ಕೆ ಸದ್ಯ ಸುವರ್ಣ ಕಾಲ ಬಂದಿದೆ. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿ ಅಪ್ಪಿಕೊಂಡಿದ್ದು ಯಶಸ್ವಿಯಾಗಿವೆ. ಅದೇ ರೀತಿ ಇದೀಗ ವಿಭಿನ್ನ ಕಥೆ ಹೊಂದಿರುವ "ಇನಾಮ್ದಾರ್" ಎಂಬ ಚಿತ್ರದ ಟೀಸರ್ ಬಿಡುಗಡೆಗೊಂಡಿದ್ದು ಸಾಕಷ್ಟು ಕುತೂಹಲ ಹಾಗೂ ಭರವಸೆಯನ್ನು ಹುಟ್ಟುಹಾಕಿದೆ.
ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ "ಇನಾಮ್ದಾರ್" ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣಸಂಘರ್ಷದ ಕಥೆಯಾಗಿದೆ. "ಇನಾಮ್ದಾರ್" ಚಿತ್ರಕ್ಕೆ "ಕಪ್ಪು ಸುಂದರಿಯ ಸುತ್ತ" ಎಂಬ ಅಡಿ ಬರಹವಿದ್ದು, ಪೋಸ್ಟರ್ ನೋಡಿದ ಸಿನಿರಸಿಕರಲ್ಲಿ ಕುತೂಹಲ ಕೆರಳಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದ್ದಿ, ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಇನ್ನು ಡಬ್ಬಿಂಗ್ ಸಹ ಪೂರ್ಣವಾಗಿದ್ದು, ಚಿತ್ರ ಹೇಗೆ ಮೂಡಿ ಬಂದಿದೆ ಎಂದು ಟೀಸರ್ ಮೂಲಕ ತೋರಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ ಹಾಗೂ ನನ್ನ ಕನಸಿಗೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ. ಇನ್ನು ಈ ಚಿತ್ರದಲ್ಲಿ ಸ್ವತಃ ತಾವೂ ಸಹ ಒಂದು ಪಾತ್ರವನ್ನು ನಿರ್ವಹಿಸಿರುವುದಾಗಿ ಸಹ ನಿರ್ದೇಶಕರು ತಿಳಿಸಿದ್ದಾರೆ.
'ನನ್ನದು ಈ ಚಿತ್ರದಲ್ಲಿ ಕಾಡಿನ ನಾಯಕನ ಪಾತ್ರ, ಕಾಡು ವಾಸಿಗಳ ಹಾಗೆ ತುಂಡು ಉಡುಗೆ, ಮೈ ಪೂರ್ತಿ ಕಪ್ಪು ಬಣ್ಣವಿರುತ್ತದೆ. ಬಣ್ಣ ಹಾಕಲು ಎರಡು ಗಂಟೆ ಹಿಡಿಸಿದರೆ, ತೆಗೆಯಲು ಐದು ಗಂಟೆ ಹಿಡಿಸುತ್ತಿತ್ತು" ಎಂದು ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು ನಟ ಪ್ರಮೋದ್ ಶೆಟ್ಟಿ.

ಅಭಿನಯದ ಅನುಭವವಿಲ್ಲದ ನನಗೆ ಅಭಿನಯ ಹೇಳಿಕೊಟ್ಟವರು ನಿರ್ದೇಶಕರು. ನನ್ನ ಅಭಿನಯ ಚೆನ್ನಾಗಿ ಬಂದಿದ್ದರೆ, ಅದಕ್ಕೆ ನಿರ್ದೇಶಕರೆ ಕಾರಣ ಎಂದು ನಿರಂಜನ್ ಛತ್ರಪತಿ ಹೇಳಿಕೆ ನೀಡಿದ್ದಾರೆ.
ನಿರ್ದೇಶಕ ಸಂದೇಶ್ ನನ್ನ ಆತ್ಮೀಯ ಗೆಳೆಯ ಹಾಗೂ ಚಿತ್ರದ ಟೀಸರ್ ನೋಡಿ ಖುಷಿಯಾಗಿದೆ. ಚಿತ್ರ ಕೂಡ ಚೆನ್ನಾಗಿ ಬಂದಿರುತ್ತದೆ ಎಂಬ ಭರವಸೆ ಮೂಡಿದೆ ಎಂದು ತಿಳಿಸಿದರು ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರು.
ನಾಯಕಿಯರಾದ ಚಿರಶ್ರೀ ಅಂಚಿನ್, ಎಸ್ತರ್ ನರೋನ್ಹಾ, ಚಿತ್ರದಲ್ಲಿ ನಟಿಸಿರುವ ಎಂ.ಕೆ.ಮಠ, ರಘು ಪಾಂಡೇಶ್ವರ ತಮ್ಮ ಅಭಿನಯದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ರಾಕಿ ಸೋನು, ಛಾಯಾಗ್ರಾಹಕ ಮುರಳಿ, ಸಂಕಲನಕಾರ ಶಿವರಾಜ್ ಮೇಹು ಹಾಗೂ ನೃತ್ಯ ನಿರ್ದೇಶಕಿ ಗೀತಾ ಸಾಯಿ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿ ಚಿತ್ರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.


Click it and Unblock the Notifications











