ಅಪ್ಪು ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡ ಜನಾರ್ದನ ರೆಡ್ಡಿ ಪುತ್ರ ಕಿರೀಟಿ!
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದೀಗ ನಿಜವಾಗಿದೆ. ತೆಲುಗಿನ ಪ್ರಸಿದ್ಧ ನಿರ್ಮಾಣ ಸಂಸ್ಥೆ ವಾರಾಹಿ ಪ್ರೊಡಕ್ಷನ್ ಜನಾರ್ದನ ರೆಡ್ಡಿ ಪುತ್ರನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದೆ. ಇದು ವಾರಾಹಿ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ 15ನೇ ಸಿನಿಮಾ. ಈ ಸಿನಿಮಾ ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣಗೊಳ್ಳಲಿದೆ. ರಾಧಾಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಲವ್ ಕಮ್ ಫ್ಯಾಮಿಲಿ ಕಥೆಯುಳ್ಳ ಸಿನಿಮಾ ಆಗಿದ್ದು, ತೆಲುಗಿನ ಸ್ಟಾರ್ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ನೀಡಲಿದ್ದಾರೆ.
ಇದೀಗ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಅಪ್ಪು ಮತ್ತ ತನ್ನ ಒಡನಾಟದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪುನೀತ್ ಅವರ ಅಭಿನಯ, ಅವರ ಮ್ಯಾನರಿಸಂ ನೋಡಿ ಫುಲ್ ಫಿದಾ ಆಗಿದ್ದೆ ಎಂಬ ಬಗ್ಗೆ ಬರೆದುಕೊಂಡಿದ್ದಾರೆ. ಅಲ್ಲದೇ ಪುನೀತ್ ಅವರೊಂದಿಗೆ ಹತ್ತು ವರುಷದ ಹಿಂದೆ ತೆಗೆಸಿಕೊಂಡಿದ್ದ ಫೋಟೊವನ್ನು ಹಂಚಿಕೊಂಡು ಸಾಲು ಗಟ್ಟಲೇ ಅಪ್ಪು ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಿರೀಟಿ ಅಪ್ಪು ಬಗ್ಗೆ ಏನು ಬರೆದಿದ್ದಾರೆ ಅನ್ನೋದನ್ನ ಮುಂದೆ ಓದಿ.
ನಟ ಕಿರೀಟಿ ಅವರ ಸಾಲುಗಳು ಈ ರೀತಿ ಇವೆ. "ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸ 10 ವರ್ಷಗಳದ್ದು . ಆದರೂ ಆ ನೆನಪುಗಳು ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. 2010ರಲ್ಲಿ ಜಾಕಿ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ನಾನು ಅಪ್ಪು ಸರ್ ಅವರನ್ನು ಮೊದಲ ಸಲ ಭೇಟಿಯಾದೆ. ಅವರ ಡ್ಯಾನ್ಸ್, ಆ್ಯಕ್ಷನ್, ಸ್ಕ್ರೀನ್ ಪ್ರೆಸೆನ್ಸ್ ನೋಡಿ ಅಚ್ಚರಿಗೊಂಡಿದ್ದೆ. ಆದರೆ, ಅವರು ಆಫ್ ಸ್ಕ್ರೀನ್ ನಲ್ಲಿದ್ದ ರೀತಿ ಮನಸಿಗೆ ಹತ್ತಿರವಾಯಿತು."

"ನಾವು ಥಿಯೇಟರ್ನಿಂದ ನನ್ನ ಮನೆಗೆ ಹೋಗುತ್ತಿದ್ದಾಗ, ಮಳೆ ಬೀಳುತ್ತಿತ್ತು ಮತ್ತು ಪುನೀತ್ ಸರ್ ಅವರೆ ಕೊಡೆ ಹಿಡಿದರು. ನೃತ್ಯದ ಬಗ್ಗೆ ಮತ್ತು ಅವರ ಆಕ್ಷನ್ ಬಗ್ಗೆ ನನ್ನೊಂದಿಗೆ ಮಾತನಾಡುತ್ತಿದ್ದರು. ಚಿಕ್ಕ ಹುಡುಗನಿಗೆ ಕೊಡೆ ಹಿಡಿದ ಸೂಪರ್ ಸ್ಟಾರ್. ನಮ್ಮ ಕನಸಿನಲ್ಲಿಯೂ ಊಹಿಸಲಾಗದ ಸಂಗತಿ. ಅದು ಪುನೀತ್ ಸರ್ ಅವರಿಂದ ಮಾತ್ರ ಸಾಧ್ಯ. ಆ ದಿನ ನಾನು ಸರಳತೆಯ ಮೌಲ್ಯವನ್ನು ಅರಿತೆ. ಇದು ಅಪ್ಪು ಸರ್ ಅವರಿಂದ ನಾನು ಕಲಿತ ಅತ್ಯಮೂಲ್ಯವಾದ ಪಾಠ."
"ಜಗತ್ತಿಗೆ ನನ್ನನ್ನು ಪರಿಚಯಿಸಿಕೊಳ್ಳಲು ಕೇವಲ ಒಂದು ದಿನ ಬಾಕಿ. ಇದೆಲ್ಲಾ ಶುರುವಾಗಿದ್ದು ಪುನೀತ್ ರಾಜ್ಕುಮಾರ್ ಸರ್ ಅವರಿಂದ. ಸ್ಫೂರ್ತಿ, ಮಾದರಿ, ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಜೀವನದ ಮಾರ್ಗದರ್ಶಿ ಅವರು. "ನಿಮ್ಮ ಮಾತುಗಳನ್ನು ಎಂದಿಗೂ ಮರೆಯುವುದಿಲ್ಲ ಸರ್". ನನ್ನ ಮೇಲಿನ ನಿಮ್ಮ ನಂಬಿಕೆಯೆ ರಕ್ಷಾಕವಚ. ನಾನು ಅದನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ನೀವು ಮತ್ತು ನಮ್ಮ ಜನತೆ ಯಾವಾಗಲೂ ಹೆಮ್ಮೆಪಡುವಂತೆ ಮಾಡಲು ಸದಾ ಶ್ರಮಿಸುತ್ತೇನೆ." ಎಂದು ಭಾವನಾತ್ಮಕವಾಗಿ ಕಿರೀಟಿ ಬರೆದುಕೊಂಡಿದ್ದಾರೆ. ಈ ಮೂಲಕ ಅಪ್ಪು ಮತ್ತು ತನ್ನ ಒಡನಾಟವನ್ನು ಜನರಿಗೆ ಪರಿಚಯಿಸಿದ್ದಾರೆ.
ಇನ್ನು ಕಿರೀಟಿ ಅಭಿನಯದ ಮೊದಲ ಸಿನಿಮಾದ ಟೈಟಲ್ ಅನ್ನು ಇನ್ನೂ ಚಿತ್ರತಂಡ ರಿವೀಲ್ ಮಾಡಿಲ್ಲ. ಬಿಗ್ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿರುವುದರಿಂದ ಕನ್ನಡ ಹಾಗೂ ತೆಲುಗು ಎರಡೂ ಭಾಷೆಗೆ ಸೂಟ್ ಆಗುವಂತಹ ಟೈಟಲ್ ಇಡಬಹುದು ಎಂದು ನಿರೀಕ್ಷಿಸಲಾಗಿದೆ. ಎರಡು ಭಾಷೆಯ ಸಿನಿಮಾ ಆಗಿರುವುದರಿಂದ ಕನ್ನಡ ಹಾಗೂ ತೆಲುಗಿನಲ್ಲಿ ಯಾವೆಲ್ಲಾ ಕಲಾವಿದರು ಅಭಿನಯಿಸುತ್ತಾರೆ ಎಂಬ ಕುತೂಹಲ ಶುರುವಾಗಿದೆ. ವಾರಾಹಿ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ಅದ್ದೂರಿಯಾಗಿ ಮಾರ್ಚ್ 04 ರಂದು ಚಾಲನೆ ನೀಡಲಾಗುತ್ತಿದೆ. ಅಂದೇ ಈ ಸಿನಿಮಾದಲ್ಲಿ ಬೇರೆ ಯಾರೆಲ್ಲಾ ನಟಿಸಲಿದ್ದಾರೆ? ಎಲ್ಲೆಲ್ಲಿ ಶೂಟಿಂಗ್ ಮಾಡುತ್ತಾರೆ ಎಂಬ ವಿಷಯಗಳೆಲ್ಲವೂ ರಿವೀಲ್ ಆಗುವ ಸಾಧ್ಯತೆ ಇದೆ.


Click it and Unblock the Notifications











