ಮತ್ತೊಂದು ಕೆಟ್ಟ ಸುದ್ದಿ: ಕನ್ನಡದ ಉದಯೋನ್ಮುಖ ನಟ ಸುಶೀಲ್ ಆತ್ಮಹತ್ಯೆ
ಚಿತ್ರರಂಗದಲ್ಲಿ ಸಾಲು ಸಾಲು ಸಾವಿನ ಕೆಟ್ಟ ಸುದ್ದಿ ಮುಂದುವರಿದಿದೆ. ಬೆಳೆಯುತ್ತಿರುವ ಪ್ರತಿಭೆಯೊಂದು ತನ್ನ ಬದುಕನ್ನುಅಂತ್ಯಗೊಳಿಸಿಕೊಂಡಿದೆ. ದುನಿಯಾ ವಿಜಯ್ ನಾಯಕರಾಗಿರುವ 'ಸಲಗ' ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ನಟಿಸಿದ್ದ ಸುಶೀಲ್ ಗೌಡ ಸಿನಿಮಾ ಬಿಡುಗಡೆಗೂ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
Recommended Video
ನಟ, ರೂಪದರ್ಶಿ ಹಾಗೂ ಫಿಟ್ನೆಸ್ ಟ್ರೇನರ್ ಆಗಿ ಗುರುತಿಸಿಕೊಂಡಿದ್ದ ಸುಶೀಲ್ ಗೌಡ (30), ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಆತ್ಮಹತ್ಯೆಗೆ ಕಾರಣಗಳು ತಿಳಿದುಬಂದಿಲ್ಲ. ಕಮರೊಟ್ಟು ಚೆಕ್ ಪೋಸ್ಟ್ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಗುರುತಿಸಿಕೊಂಡಿದ್ದ ಅವರು, 'ಲೋಟಸ್' ಎಂಬ ಫಿಟ್ನೆಸ್ ಕೇಂದ್ರ ನಡೆಸುತ್ತಿದ್ದರು. ಸುಶೀಲ್ ಅವರ ಸಾವಿನ ಕುರಿತು ಸಲಗ ಚಿತ್ರ ನಾಯಕ ಮತ್ತು ನಿರ್ದೇಶಕ ದುನಿಯಾ ವಿಜಯ್ ಮಾಹಿತಿ ಹಂಚಿಕೊಂಡಿದ್ದಾರೆ. ಮುಂದೆ ಓದಿ...

ಹೀರೋ ಆಗಬಹುದಾದ ಹುಡುಗ
'ಸಲಗ' ಚಿತ್ರದಲ್ಲಿ ಒಂದು ಒಳ್ಳೆಯ ಪೊಲೀಸ್ ಪಾತ್ರವಿದೆ. ಅದನ್ನು ಒಬ್ಬ ಸ್ಫುರದ್ರೂಪಿ ಹುಡುಗ ನಿರ್ವಹಿಸಿದ್ದ. ಆತನ ಹೆಸರು ಸುಶೀಲ್ ಅಂತ. ಮಂಡ್ಯದವನು. ಆತನ ನೋಡ್ತಿದ್ರೆ ಮುಂದೊಮ್ಮೆ ಹೀರೋ ಆಗಬಹುದಾದ ಹುಡುಗ ಅಂತ ಮನಸ್ಸಲ್ಲೇ ಅಂದ್ಕೊಂಡಿದ್ದೆ. ಆದ್ರೆ ಅದೇನಾಯ್ತೋ ಗೊತ್ತಿಲ್ಲ; ನಿನ್ನೆ ಇರಬೇಕು ಆತ್ಮಹತ್ಯೆ ಮಾಡ್ಕೊಂಡಿದ್ದಾನೆ ಅಂತ ಗೊತ್ತಾಯ್ತು. ನನಗೆ ಈಗಲೂ ನಂಬೋಕೆ ಆಗ್ತಿಲ್ಲ ಎಂದು ದುನಿಯಾ ವಿಜಯ್ ತಿಳಿಸಿದ್ದಾರೆ.

ಸಾವು ಪರಿಹಾರವೇ?
ಇಂಡಸ್ಟ್ರೀನಲ್ಲಿ ಬೆಳೆಯಬೇಕು ಅಂತ ಬರೋರು ಸಿನಿಮಾದಲ್ಲಿ ಒಂದೊಳ್ಳೆಯ ಅವಕಾಶ ಸಿಕ್ಕಮೇಲೂ ಚಿತ್ರ ಬಿಡುಗಡೆಗೂ ಕಾಯದೆ ಆತ್ಮಹತ್ಯೆ ಮಾಡೋದು ಅಂದರೆ ಏನು?! ನಿಮ್ಮ ಸಮಸ್ಯೆ ಎಷ್ಟೇ ದೊಡ್ಡದಿರಬಹುದು. ಆದರೆ ಸಾವು ಅದಕ್ಕೆ ಪರಿಹಾರವಾಗುತ್ತಾ? ಸಮಸ್ಯೆಗೆಲ್ಲ ಸಾವಲ್ಲೇ ಉತ್ತರ ಕಾಣೋದಾದ್ರೆ ಬಹುಶಃ ಭೂಮೀಲಿ ಯಾರೊಬ್ಬರೂ ಉಳಿದಿರಲ್ಲ ಅನ್ಸುತ್ತೆ! ಎಂದು ಅವರು ಬರೆದಿದ್ದಾರೆ.

ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ
ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿರುವ ಸುಶೀಲ್ ಕುಮಾರ್, ಬೆಂಗಳೂರಿನಲ್ಲಿ ಜಿಮ್ ಟ್ರೈನರ್ ಆಗಿದ್ದರು. ಲಾಕ್ ಡೌನ್ ಕಾರಣದಿಂದ ಕಳೆದ ಮೂರು ತಿಂಗಳಿನಿಂದ ಜಿಮ್ ತೆರೆದಿರಲಿಲ್ಲ. ಹೀಗಾಗಿ ಮಂಡ್ಯಕ್ಕೆ ವಾಪಸಾಗಿದ್ದರು. ಇಂಡವಾಳು ಗ್ರಾಮದಲ್ಲಿರುವ ತಮ್ಮ ಸ್ನೇಹಿತನ ಮನೆಗೆ ತೆರಳಿದ್ದ ಅವರು ಅಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳಷ್ಟೇ ಜತೆಗಿದ್ದರು
ಸುಶೀಲ್ ವಯಸ್ಸು ಮೂವತ್ತರ ಆಸುಪಾಸು ಇರಬಹುದು. ನಮ್ಮ ಜತೆ ಶೂಟಿಂಗಲ್ಲಿದ್ದಿದ್ದು ಬೆರಳೆಣಿಕೆ ದಿನಗಳಷ್ಟೇ. ಅಷ್ಟಕ್ಕೇನೇ ನಮಗಿಷ್ಟೊಂದು ನೋವಾಗ್ತಿದೆ. ಹಾಗಾದರೆ ಈ ಮೂವತ್ತು ವರ್ಷಗಳ ಕಾಲ ಜತೆಗಿದ್ದ ಮನೆಯವರಿಗೆ ಹೇಗಾಗಬೇಡ?! ಸತ್ತ ಮೇಲೆ ಮಾತನಾಡಿ ಉಪಯೋಗವಿಲ್ಲ ನಿಜ. ಆದರೆ ನನಗೇನೋ ಈ ವರ್ಷದ ಸಾವುಗಳ ಸರಣಿ ಇಲ್ಲಿಗೆ ಮುಗಿಯುತ್ತೆ ಅಂತ ಅನಿಸ್ತಿಲ್ಲ! ಯಾಕೆಂದರೆ ಪರಿಸ್ಥಿತಿ ಹಾಗಿದೆ. ಜನ ಕೊರೊನಾ ರೋಗಕ್ಕಷ್ಟೇ ಭಯಪಡುತ್ತಿಲ್ಲ; ಕೆಲಸ ಇರದೆ ಬದುಕಿನ ಭರವಸೆಯನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ನನ್ನ ಮನವಿ ಅಂಥವರಿಗೂ ಕೂಡ ಆಗಿದೆ.

ಎಲ್ಲರೂ ಕಷ್ಟ ಕಂಡಿರುತ್ತಾರೆ
ನಾವೆಲ್ಲ ರಾಮ ಸೀತೆ ಕಥೆ ಕೇಳಿಯೇ ಬೆಳೆದಿರುತ್ತೇವೆ. ದೇವರಾಗಿದ್ದರೂ ಮನುಷ್ಯ ರೂಪದಲ್ಲಿ ಎಷ್ಟೊಂದು ಕಷ್ಟ ಅನಿಭವಿಸಬೇಕಾಗಿತ್ತೆ ಅನ್ನೋದು ಅದರ ತಾತ್ಪರ್ಯ. ಅಂಥ ಕಷ್ಟ ನಮಗೆಲ್ಲ ಬಂದೇ ಇರುವುದಿಲ್ಲ. ಆದರೂ ಬದುಕು ಸಾಕಾಗಿ ಬಿಡುತ್ತದೆ ಅನ್ನೋದೇ ವಿಪರ್ಯಾಸ. ನಮ್ಮ ಧರ್ಮ ಓದಿ ಕೈ ಮುಗಿಯೋಕಷ್ಟೇ ಇರೋದಲ್ಲ. ಬದುಕಲ್ಲಿ ಅಳವಡಿಸೋಕೂ ಹೌದು. ಇಲ್ಲಿ ಸ್ಟಾರಾಗಿರೋ ಪ್ರತಿಯೊಬ್ಬರೂ ಒಂದಲ್ಲ ಒಮ್ಮೆ ಪಾತಾಳದಷ್ಟು ಕಷ್ಟ ಕಂಡೇ ಇರುತ್ತಾರೆ. ಅಭಿಮನ್ಯು ತರಹ ಒಳಗೆ ಬರುವ ಕಥೆ ಮಾತ್ರ ತಿಳಿದು ಮುನ್ನುಗ್ಗಿ ಬಂದು ಕೈ ಚೆಲ್ಲಿದರೆ ಅದು ಸಾಧನೆ ಅಲ್ಲ; ವೇದನೆ.

ಆತ್ಮಹತ್ಯೆ ಖಂಡಿತಾ ತಪ್ಪು
ನೀವೇನೂ ಸತ್ತು ಹೋಗ್ತೀರಿ; ನಿಮಗೆ ಬೆಂಕಿ ಇಡಬೇಕಾದರೆ ಅಲ್ಲಿ ಜೀವ ಇರುವುದಿಲ್ಲ. ಆದರೆ ಜತೆಗಿರುವ ತಾಯಿ, ತಂದೆ, ಮಡದಿ ಜೀವನಪೂರ್ತಿ ಬೆಂಕಿಯಲ್ಲಿದ್ದಂಥ ಬದುಕು ಕೊಡ್ತೀರಲ್ಲ? ಇದೇನು ನ್ಯಾಯ? ಆತ್ಮಹತ್ಯೆ ಖಂಡಿತವಾಗಿ ತಪ್ಪು. ಸುಶೀಲ್ ಆತ್ಮಕ್ಕೆ ಶಾಂತಿ ಸಿಗಲಿ. ಆದರೆ ಮುಂದೆ ಯಾವ ತಂದೆ ತಾಯಿಗೂ ಇಂಥ ದುಃಖ ಎದುರಿಸುವ ಸಂದರ್ಭ ಬಾರದಿರಲಿ.


Click it and Unblock the Notifications











