ರಾತ್ರೋರಾತ್ರಿ ಮಂಡ್ಯದ ಬಾಡಿಗೆ ಮನೆ ಖಾಲಿ ಮಾಡಿದ ರಮ್ಯಾ.!
Recommended Video

ಮಂಡ್ಯದ ಗಂಡು ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದೆ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಮಾಜಿ ಸಂಸದೆ ರಮ್ಯಾ, ರಾತ್ರೋರಾತ್ರಿ ಮಂಡ್ಯದಿಂದ ಬಾಡಿಗೆ ಮನೆ ಖಾಲಿ ಮಾಡುವ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದ್ರಾ ಎಂಬ ಊಹಾಪೋಹ ಮಂಡ್ಯ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ.
ಊಹಾಪೋಹ ಸತ್ಯ ಎಂಬ ರೀತಿಯಲ್ಲಿ ತಡರಾತ್ರಿ ಮಂಡ್ಯದ ವಿದ್ಯಾನಗರದಲ್ಲಿರುವ ರಮ್ಯಾ ಅವರ ಮನೆಗೆ ಬಂದ ಎರಡು ಲಾರಿಗಳಿಗೆ, ರಮ್ಯಾ ಅವರ ಮನೆಯ ವಸ್ತುಗಳನ್ನು ತುಂಬುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯದಲ್ಲಿ ಮನೆ ಮಾಡಿ, ಅಲ್ಲೇ ಇದ್ದು ಮಂಡ್ಯ ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ರು. ಅದಾದ ನಂತರ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲನುಭವಿಸಿದ ರಮ್ಯಾ, ಸದ್ದಿಲ್ಲದೆ ಮಂಡ್ಯದಿಂದ ಮನೆ ಖಾಲಿ ಮಾಡಿ ವರ್ಷಾನುಗಟ್ಟಲೆ ಮಂಡ್ಯ ಕಡೆ ತಲೆ ಹಾಕಲೇ ಇಲ್ಲ. ಮುಂದೆ ಓದಿರಿ...

ವಿದೇಶದಲ್ಲಿ ಇದ್ದ ರಮ್ಯಾ
ಇದ್ದಕ್ಕಿದ್ದಂತೆ ಮತ್ತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವ ಕನಸು ಕಂಡಿದ್ದ ರಮ್ಯಾ ಅವರಿಗೆ, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಬಿಸಿತುಪ್ಪವಾಗಿ ಪರಿಣಮಿಸಿತ್ತು. ಇತ್ತೀಚೆಗೆ ನಡೆದ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿ, ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟಿತ್ತು. ಅದರಂತೆ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲೂ ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಡುವುದು ಬಹುತೇಕ ಖಚಿತವಾಗಿದೆ. ಹೀಗಿದ್ದಾಗ ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ರು.

ಅಂತಿಮ ದರ್ಶನ ಪಡೆಯದ ರಮ್ಯಾ
ಅಂಬರೀಶ್ ಅವರು ಮೃತಪಟ್ಟಾಗಲೂ ಅವರ ಅಂತಿಮ ದರ್ಶನ ಪಡೆಯಲು ರಮ್ಯಾ ಮಂಡ್ಯಕ್ಕೆ ಬರಲಿಲ್ಲ. ಇದ್ರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದಿದ್ದರು.

ಮಂಡ್ಯ ತೊರೆದ್ರಾ ರಮ್ಯಾ.?
ಈ ಎಲ್ಲ ಬೆಳವಣಿಗೆ ನಡುವೆಯೇ ರಾತ್ರೋರಾತ್ರಿ ರಮ್ಯಾ ಅವರ ಮನೆಯಲ್ಲಿದ್ದ ವಸ್ತುಗಳನ್ನು ಎರಡು ಲಾರಿಗಳ ಮೂಲಕ ಹೊರಗೆ ಸಾಗಿಸಲಾಗುತ್ತಿದೆ. ಇದೆಲ್ಲವನ್ನು ನೋಡಿದ್ರೆ ಮಂಡ್ಯದಲ್ಲಿ ನನಗಿನ್ನು ರಾಜಕೀಯವಾಗಿ ಭವಿಷ್ಯವಿಲ್ಲ ಎಂದು ಶಾಶ್ವತವಾಗಿ ರಮ್ಯಾ ಮಂಡ್ಯ ತೊರೆಯುತ್ತಿದ್ದಾರೆ ಎಂಬ ಚರ್ಚೆ ಜಿಲ್ಲೆಯಲ್ಲಿ ಶುರುವಾಗಿದೆ.


Click it and Unblock the Notifications











