ಏ. 18ರಂದು ಸ್ಯಾಂಡಲ್ ವುಡ್ ಚಿತ್ರೋದ್ಯಮ ಬಂದ್
ಬೆಂಗಳೂರು, ಕೋಲಾರ ಮತ್ತು ಇನ್ನಿತರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಮೇಕೆದಾಟಿನಲ್ಲಿ ನಿರ್ಮಿಸುವ ಅಣೆಕಟ್ಟು ಯೋಜನೆಯನ್ನು ವಿರೋಧಿಸಿ ಇತ್ತೀಚೆಗೆ ತಮಿಳುನಾಡು ಬಂದ್ ಗೆ ಕರೆಕೊಡಲಾಗಿತ್ತು. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು ಕನ್ನಡ ಚಿತ್ರೋದ್ಯಮವೂ ತಮಿಳುನಾಡಿಗೆ ತಿರುಗೇಟು ನೀಡಲು ಸಿದ್ಧವಾಗಿದೆ.
ಈ ಸಂಬಂಧ ರಾಜ್ಯದ ಕೆಲವು ಕನ್ನಡ ಪರ ಸಂಘಟನೆಗಳು ಏಪ್ರಿಲ್ 18ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ರಾಜ್ಯದ ಜನತೆಗೆ ಅವಶ್ಯಕವಾಗಿರುವ ಕುಡಿಯುವ ನೀರನ್ನು ಕಲ್ಪಿಸಲು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆ ಮೇಕೆದಾಟು ಅಣೆಕಟ್ಟು ಯೋಜನೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. [ಮೇಕೆದಾಟು ಯೋಜನೆ ವಿವಾದ ಏಕೆ, ಏನು?]

ಈ ವಿಷಯವಾಗಿ ಏಪ್ರಿಲ್ 9ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಇತರೆ ಅಂಗಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಚಿತ್ರೋದ್ಯಮದ ಗಣ್ಯರು ಸಭೆ ಸೇರಿ, ಕನ್ನಡ ನಾಡಿನ ನೆಲ, ಜಲ, ಭಾಷೆಯ ವಿಷಯದಲ್ಲಿ ಯಾವುದೇ ಅನ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ಅದನ್ನು ಪ್ರತಿಭಟಿಸುವ ಕೆಲಸದಲ್ಲಿ ಚಲನಚಿತ್ರರಂಗವು ಈ ಹಿಂದಿನಿಂದಲೂ ಭಾಗವಹಿಸಿರುವುದರಿಂದ ಈಗಲೂ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಲು ತೀರ್ಮಾನಿಸಿವೆ.
ಆದ್ದರಿಂದ ಏಪ್ರಿಲ್ 18ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಚಲನಚಿತ್ರ ಚಿತ್ರೀಕರಣ, ಪ್ರದರ್ಶನ ಹಾಗೂ ಚಿತ್ರೋದ್ಯಮಕ್ಕೆ ಸಂಬಂಧಪಟ್ಟ ಎಲ್ಲಾ ಕಾರ್ಯಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತವಾಗಲಿವೆ. ಬಂದ್ ಗೆ ಬೆಂಬಲ ಸೂಚಿಸುವ ಮೂಲಕ ಯಶಸ್ವಿಗೊಳಿಸಿಕೊಡಬೇಕೆಂದು ಚಿತ್ರೋದ್ಯಮಕ್ಕೆ ವಾಣಿಜ್ಯ ಮಂಡಳಿ ಮನವಿ ಮಾಡಿದೆ. (ಫಿಲ್ಮಿಬೀಟ್ ಕನ್ನಡ)


Click it and Unblock the Notifications











