'ಕಾಂತಾರ'-1 ಸಹನಟ ಕಪಿಲ್ ಸಾವು; ಹೊಂಬಾಳೆ ಫಿಲ್ಮ್ಸ್ ಪ್ರತಿಕ್ರಿಯೆ
ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ 'ಕಾಂತಾರ'-1 ಸಿನಿಮಾ ಸಹನಟ ಕಪಿಲ್ ಇತ್ತೀಚೆಗೆ ಸಾವನ್ನಪ್ಪಿದ್ದರು. ಈ ಬಗ್ಗೆ ಸಾಕಷ್ಟು ಊಹಾಪೋಹ ಹರಿದಾಡಿತ್ತು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಾಗಿದೆ. ಸದ್ಯ ಈ ಘಟನೆ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದೆ.
ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಚಿಕ್ಕ ಪತ್ರ ಪೋಸ್ಟ್ ಮಾಡಿದೆ. "ಎಂ. ಎಫ್ ಕಪಿಲ್ ಅವರ ನಿಧನಕ್ಕೆ ನಮ್ಮ ಅಗಾದವಾದ ಸಂತಾಪಗಳು. ಅವರ ಕುಟುಂಬಕ್ಕೆ ಹಾಗೂ ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮೆಲ್ಲರ ಸಹಾನುಭೂತಿ ಅವರೊಂದಿಗಿದೆ" ಎಂದು ಕಪಿಲ್ ಸಾವಿಗೆ ಚಿತ್ರತಂಡ ಸಂತಾಪ ಸೂಚಿಸಿದೆ.

"ಈ ಘಟನೆ 'ಕಾಂತಾರ-1' ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ. ಆ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ ಮತ್ತು ಆ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ, ಚಲನಚಿತ್ರ ಸಂಬಂಧಿತ ಚಟುವಟಿಕೆಗಳ ವ್ಯಾಪ್ತಿಯ ಹೊರಗೆ ಸಂಭವಿಸಿದೆ. ದಯವಿಟ್ಟು ಈ ಘಟನೆಯನ್ನು 'ಕಾಂತಾರ'-1 ಚಿತ್ರ ಅಥವಾ ಅದರ ಸಿಬ್ಬಂದಿಯೊಂದಿಗೆ ಯಾವುದೇ ಸಂಬಂಧವನ್ನು ಕಲ್ಪಿಸಬಾರದು ಎಂದು ನಾವು ವಿನಂತಿಸುತ್ತೇವೆ" ಎಂದು ಹೊಂಬಾಳೆ ಸಂಸ್ಥೆ ಸ್ಪಷ್ಟನೆ ನೀಡಿದೆ.
ಕಪಿಲ್ ಸಾವಿನ ಬಗ್ಗೆ ತನಿಖೆ ನಡೆಸಬೇಕು ಎಂದು ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಆಗ್ರಹಿಸಿದೆ. ಆತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದೆಲ್ಲದರ ಬೆನ್ನಲ್ಲೇ ಚಿತ್ರತಂಡ ಸ್ಪಷ್ಟನೆ ನೀಡಿದೆ. 'ಕಾಂತಾರ-1' ಸಿನಿಮಾ ಚಿತ್ರೀಕರಣ ಆರಂಭವಾದ ದಿನದಿಂದಲೂ ಒಂದಿಲ್ಲೊಂದು ವಿಘ್ನ ಎದುರಾಗುತ್ತಿದೆ. ಈ ಹಿಂದೆ ಸಹ ಕಲಾವಿದರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾಗಿತ್ತು.
ಕುಂದಾಪುರದಲ್ಲಿ ಭಾರೀ ಸೆಟ್ ನಿರ್ಮಾಣ ಮಾಡಿ 'ಕಾಂತಾರ'-1 ಸಿನಿಮಾ ಚಿತ್ರೀಕರಣ ನಡೆಸಲಾಗುತ್ತಿದೆ. ಭಾರೀ ಸಂಖ್ಯೆಯ ಸಹಕಲಾವಿದರನ್ನು ಚಿತ್ರಕ್ಕಾಗಿ ಬಳಸಿಕೊಳ್ಳಲಾಗ್ತಿದೆ. ಕರ್ನಾಟಕದ ಸಹಕಲಾವಿದರ ಜೊತೆಗೆ ಕೇರಳ ಮೂಲದ ಕಲಾವಿದರು ಕೂಡ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಮೃತ ಕಪಿಲ್ ಕೇರಳ ಮೂಲದವರು. ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ.
'ಇಂಡಿಯನ್-2' ಹಾಗೂ 'ಸರ್ದಾರ್-2' ಸಿನಿಮಾ ಚಿತ್ರೀಕರಣದ ವೇಳೆ ನಡೆದ ದುರಂತಗಳನ್ನು ಪ್ರಸ್ತಾಪಿಸಿ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಪೋಸ್ಟ್ ಮಾಡಿತ್ತು. ಇಂತಹ ಘಟನೆಗಳು ನಡೆದಾಗ ಚಿತ್ರತಂಡಗಳು ಅದನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತವೆ ಎಂದಿತ್ತು. ಆದರೆ ಕಪಿಲ್ ಸಾವಿಗೂ 'ಕಾಂತಾರ-1' ಚಿತ್ರೀಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೊಂಬಾಳೆ ಸಂಸ್ಥೆ ಹೇಳಿದೆ.
ರಿಷಬ್ ಶೆಟ್ಟ ನಿರ್ದೇಶನದ 'ಕಾಂತಾರ' ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ಅದರ ಬೆನ್ನಲ್ಲೇ ಸೀಕ್ವೆಲ್ ಮಾಡಬೇಕು ಎನ್ನುವ ಬೇಡಿಕೆ ಹೆಚ್ಚಾಗಿತ್ತು. ಅಂತಿಮವಾಗಿ ರಿಷಬ್ ಪ್ರೀಕ್ವೆಲ್ ಮಾಡಲು ಮನಸ್ಸು ಮಾಡಿದ್ದರು. ಮೊದಲ ಭಾಗಕ್ಕಿಂತ ಹಲವು ಪಟ್ಟು ದೊಡ್ಡದಾಗಿ 'ಕಾಂತಾರ- 1' ಸಿನಿಮಾ ಮೂಡಿ ಬರಲಿದೆ. ಅಕ್ಟೋಬರ್ 2ಕ್ಕೆ ಸಿನಿಮಾ ರಿಲೀಸ್ ಪ್ರಯತ್ನ ನಡೀತಿದೆ.
ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಕಳರಿಪಯಟ್ಟು ವಿದ್ಯೆ ಕಲಿತು ನಟಿಸುತ್ತಿದ್ದಾರೆ. ಹಾಲಿವುಡ್ ತಂತ್ರಜ್ಞರು ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದು 'ಕಾಂತಾರ- 1' ಚಿತ್ರವನ್ನು ಆಸ್ಕರ್ ಸ್ಪರ್ಧೆಗೆ ಕೊಂಡೊಯ್ಯಲು ಚಿತ್ರತಂಡ ಮುಂದಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಇಂಗ್ಲೀಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಈ ವರ್ಷದ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿಯಲ್ಲಿ 'ಕಾಂತಾರ- 1' ಕೂಡ ಇದೆ.


Click it and Unblock the Notifications











