ಅಂಬರೀಶ್ ಸ್ಮಾರಕ ಅಭಿವೃದ್ಧಿಗೆ 12 ಕೋಟಿ ಅನುದಾನ ಮಂಜೂರು
ನಟ ಅಂಬರೀಶ್ ಸ್ಮಾರಕ ಅಭಿವೃದ್ಧಿಗೆ ರಾಜ್ಯ ಸರ್ಕಾರವು 12 ಕೋಟಿ ರುಪಾಯಿ ಅನುದಾನ ನೀಡಿದೆ. ಇಂದು ಸಂಪುಟ ಸಭೆಯಲ್ಲಿ ಸ್ಮಾರಕ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಯನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಲು ಯೋಜನೆ ಸಿದ್ಧವಾಗಿದ್ದು, ಕೆಲಸ ಸಹ ಆರಂಭವಾಗಿತ್ತು. ಕೊರೊನಾ ಹಾಗೂ ಇತರೆ ಕಾರಣಗಳಿಂದಾಗಿ ಕೆಲಸ ನಿಧಾನವಾಗಿತ್ತು. ಇದೀಗ ಸಂಪುಟವು ಸ್ಮಾರಕ ಅಭಿವೃದ್ಧಿಗೆ ಅನುದಾನ ನೀಡುವ ಮೂಲಕ ಸ್ಮಾರಕ ಕಾರ್ಯಕ್ಕೆ ಚುರುಕು ನೀಡಿದೆ.
Recommended Video
ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ನೀಡಲಾಗಿತ್ತು. ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೆಲಸಗಳೂ ನಡೆದಿದ್ದವು. ಇದೀಗ ಮತ್ತೆ 12 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.

ಪುನೀತ್ ರಾಜ್ಕುಮಾರ್ ನಿಧನ ಹೊಂದಿದಾಗ ಸರ್ಕಾರವು ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು, ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದರು. ಆ ಸಂದರ್ಭದಲ್ಲಿ ಅಂಬರೀಶ್ ಅಭಿಮಾನಿಗಳು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿ, ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಬೇಕು, ಅಂಬರೀಶ್ಗೆ ಪದ್ಮ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದರು.
ಅಂಬರೀಶ್ ಅಭಿಮಾನಿಗಳ ಬೇಡಿಕೆಯನ್ನು ಗಮನಿಸಿದ್ದ ನಟಿ, ಸಂಸದೆ ಸುಮಲತಾ, '''ನನ್ನ ಮನವಿ, ನಮ್ಮ ಪ್ರೀತಿಯ ಡಾ.ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಿಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ. ನಮ್ಮ ಕುಟುಂಬದೊಂದಿಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ'' ಎಂದಿದ್ದರು.
ಮುಂದುವರೆದು, '''ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು, ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ. ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಷ್ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಅತಿಶಯೋಕ್ತಿಯಾಗಬಾರದು'' ಎಂದಿದ್ದರು.
''ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ. ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಷ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ'' ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.


Click it and Unblock the Notifications











