ಕೆಎಫ್ ಸಿಸಿಯಿಂದ ಗೋವಾ ಚಲನಚಿತ್ರೋತ್ಸವಕ್ಕೆ ಬಹಿಷ್ಕಾರ!
'ಈ ಬಾರಿಯ ‘ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ' ಕ್ಕೆ ಸಂಚಾರಿ ವಿಜಯ್ ಅಭಿನಯದ 'ನಾನು ಅವಳಲ್ಲ ಅವನು' ಚಿತ್ರ ಆಯ್ಕೆಯಾಗಿರುವುದು ಸಂತಸದ ಸಂಗತಿ. ಅದರೆ, ಫಿಲಂ ಫೆಸ್ಟಿವಲ್ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪಾಲ್ಗೊಳ್ಳುವುದಿಲ್ಲ' ಎಂದು ಕೆಎಫ್ ಸಿಸಿ ಅಧ್ಯಕ್ಷ ಸಾ.ರಾ. ಗೋವಿಂದು ಘೋಷಿಸಿದ್ದಾರೆ.
ಇದು ಕೆಎಫ್ ಸಿಸಿ ನಿರ್ಧಾರ ಮಾತ್ರವಲ್ಲ, ಕನ್ನಡ ಸಿನಿಮಾ ಇಂಡಸ್ಟ್ರಿಯ ಒಕ್ಕೊರಲ ದನಿಯಾಗಿದೆ. ಕಳಸಾ ಬಂಡೂರಿ ಯೋಜನೆಯನ್ನು ಬೆಂಬಲಿಸುವ ಸಲುವಾಗಿ ಈ ಹಿಂದೆ ತೆಗೆದುಕೊಂಡ ನಿರ್ಣಯವನ್ನು ನ.20ರಂದು ಜಾರಿಗೊಳಿಸುತ್ತಿದ್ದೇವೆ.
ನ.20ರಂದು ಗೋವಾದಲ್ಲಿ ನಡೆಯಲಿರುವ ‘ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ'ದಲ್ಲಿ ಭಾಗವಹಿಸದಿರಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ ಎಂದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್ ಮಾತನಾಡಿ, ಗೋವಾದಲ್ಲಿ ಕನ್ನಡಿಗರಿಗಾಗುತ್ತಿರುವ ತೊಂದರೆ ಹಾಗೂ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಗೋವಾ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಲನಚಿತ್ರೋದ್ಯಮದ ಯಾವುದೇ ಕಲಾವಿದರು, ತಂತ್ರಜ್ಞರು ‘ಗೋವಾ ಚಲನಚಿತ್ರೋತ್ಸವ'ದಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ ಎಂದರು.
ಸಭೆಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಕೆ.ಸಿ.ಎನ್.ಚಂದ್ರಶೇಖರ್, ಥಾಮಸ್ ಡಿಸೋಜ, ಕಾರ್ಯದರ್ಶಿ ಎನ್.ಎಂ. ಸುರೇಶ್, ರಾಮಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿಯ ನಿರ್ಧಾರಕ್ಕೆ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಸೇರಿದಂತೆ ಹಲವು ನಿರ್ದೇಶಕರು, ಕಲಾವಿದರು ಹಾಗೂ ತಂತ್ರಜ್ಞರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಗೂ ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ನ.20ರಂದು ಬೆಂಗಳೂರು ಬೆಂಗಳೂರಿನ ಮೌರ್ಯ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆಯ ಮುಂದೆ ವೌನ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.


Click it and Unblock the Notifications











