ಲಾಕ್ಡೌನ್ ಎಂಬುದು ಬೆದರು ಬೊಂಬೆ: ಸರ್ಕಾರದ ನಿರ್ಧಾರಕ್ಕೆ ಕವಿರಾಜ್ ಕಿಡಿ
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರವು ರಾಜ್ಯದಾದ್ಯಂತ ವೀಕೆಂಡ್ ಲಾಕ್ಡೌನ್ ಘೋಷಣೆ ಮಾಡಿದೆ. ಜೊತೆಗೆ ಪ್ರತಿದಿನ ನೈಟ್ ಕರ್ಫ್ಯೂ ವಿಧಿಸಿದೆ. ಜೊತೆಗೆ ಚಿತ್ರಮಂದಿರ, ಬಾರ್, ರೆಸ್ಟೊರೆಂಟ್, ಮಾಲ್ಗಳಲ್ಲಿ 50% ಆಕ್ಯುಪೆನ್ಸಿಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಸರ್ಕಾರದ ವೀಕೆಂಡ್ ಲಾಕ್ಡೌನ್ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರರಂಗದವರಿಂದ ಬಹುತೇಕ ವಿರೋಧವೇ ವ್ಯಕ್ತವಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಸರ್ಕಾರದ ಆದೇಶಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ದುನಿಯಾ ವಿಜಯ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಚಿತ್ರ ಸಾಹಿತಿ, ನಿರ್ದೇಶಕ ಕವಿರಾಜ್ ಸಹ ಸರ್ಕಾರದ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕವಿರಾಜ್, ಪ್ರಚಲಿತ ವಿದ್ಯಮಾನಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಸ್ಪಂದಿಸುತ್ತಿರುತ್ತಾರೆ, ತಮ್ಮ ಅಭಿಪ್ರಾಯವನ್ನು ದಾಖಲಿಸುವ ಕಾರ್ಯ ಮಾಡುತ್ತಿರುತ್ತಾರೆ. ಇದೀಗ ಸರ್ಕಾರ ಹೊರಡಿಸಿರುವ ವೀಕೆಂಡ್ ಲಾಕ್ಡೌನ್ ಮತ್ತು 50% ನಿಯಮದ ಬಗ್ಗೆ ಕವಿರಾಜ್ ತಮ್ಮ ಅಸಹಮತ ವ್ಯಕ್ತಪಡಿಸಿದ್ದು, ಅದಕ್ಕೆ ಕಾರಣವನ್ನೂ ವಿವರಿಸಿದ್ದಾರೆ. ಕವಿರಾಜ್ರು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಅಭಿಪ್ರಾಯ ಇಲ್ಲಿದೆ...

''ಒಮಿಕ್ರಾನ್ ವೇಗವಾಗಿ ಹರಡುವುದಾದರು ಅದು ಪ್ರಾಣಾಪಾಯ ತರುವುದಿಲ್ಲ ಎಂದು ಸ್ವತಃ WHO ಹೇಳಿದೆ. ಅದೇ ಪ್ರಕಾರ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರು ಆಸ್ಪತ್ರೆ ಸೇರುತ್ತಿರುವವರ ಅನುಪಾತ ಬಹಳ ಕಡಿಮೆಯೇ ಇದೆ. ಸಾಮರ್ಥ್ಯದ ಮಾಪನದಲ್ಲಿ ಒಮಿಕ್ರಾನ್ ಈಗಾಗಲೇ ಶಕ್ತಿಗುಂದಿರುವ ಕೊರೊನಾ ವೈರಾಣು'' ಎಂದಿದ್ದಾರೆ ಕವಿರಾಜ್.
''ಒಮಿಕ್ರಾನ್ ಒಂದು ಸಾಮಾನ್ಯ ಶೀತ , ಕೆಮ್ಮಿನಂತೆ ಕಾಡುವುದು. ಅದು ಒಮ್ಮೆ ಎಲ್ಲರಿಗೂ ಬಂದು ಹೋದರೆ ಒಂದು ಲೆಕ್ಕಾಚಾರದಲ್ಲಿ ಒಳ್ಳೆಯದೆ . ಅದರಿಂದ ಹರ್ಡ್ ಇಮ್ಯೂನಿಟಿ ಬೆಳೆಯುತ್ತದೆ. ಆ ಮೂಲಕ ಪ್ಯಾಂಡೆಮಿಕ್ ಎಂಡೆಮಿಕ್ ಹಂತ ತಲುಪಲಿದೆ ಎಂದು WHO ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಸೇರಿದಂತೆ ಹಲವು ತಜ್ಞ ವೈದ್ಯರು ಹೇಳುತ್ತಿದ್ದಾರೆ. ಆದರೂ ಸರ್ಕಾರಗಳು ಈ ಬೆದರು ಬೊಂಬೆಯಂತೆ ಲಾಕ್ ಡೌನ್ ಬಗ್ಗೆ ಯಾಕೆ ಚಿಂತಿಸುತ್ತಿವೆಯೋ'' ಎಂದು ಅಮಸಮಾಧಾನ ವ್ಯಕ್ತಪಡಿಸಿದ್ದಾರೆ ಕವಿರಾಜ್.
''ಈಗಾಗಲೇ ಸುಮಾರು 20 ತಿಂಗಳಿಂದ ಈ ಕರೊನಾ, ಲಾಕ್ ಡೌನ್ ಹೊಡೆತಕ್ಕೆ ಸಿಲುಕಿ ಬಡ ಮತ್ತು ಮದ್ಯಮ ವರ್ಗದ ಆರ್ಥಿಕ ಪರಿಸ್ಥಿತಿ ಜರ್ಝರಿತವಾಗಿದೆ. ಹೇಗೊ ಒದ್ದಾಡಿ ಚಿಗುರುತ್ತಿರುವ ಹೊತ್ತಿಗೆ ಮತ್ತೆ ಲಾಕ್ಡೌನ್ ಹೇರಿದರೆ ಅವರ ಬದುಕು ಇನ್ನಷ್ಟು ದುಸ್ತರವಾಗಲಿದೆ. ಆಗ ಕರೊನಾದಿಂದ ಸಾಯುವವರ ಸಂಖ್ಯೆಗಿಂತ ಹಸಿವು , ಹತಾಶೆ , ನಿರುದ್ಯೋಗ, ಆರ್ಥಿಕ ಜಂಜಾಟ , ಸಾಲಗಾರರ ಕಿರುಕುಳ , ಅವಮಾನದಿಂದ ಸಾಯುವವರ ಸಂಖ್ಯೆಯೇ ಜಾಸ್ತಿಯಾಗಲಿದೆ'' ಎಂದು ಅಂದಾಜಿಸಿದ್ದಾರೆ ಕವಿರಾಜ್.
''ಈ ನಡುವೆ ಲಕ್ಷಾಂತರ ಜನರನ್ನು ಸೇರಿಸಿ ಬೃಹತ್ ಸಮಾವೇಶಗಳನ್ನು ನಡೆಸಿ ಬೀಗುತ್ತಿರುವ ರಾಜಕಾರಣಿಗಳು ಜನರು ಸಹಕರಿಸದಿರುವುದೇ ಕರೊನಾ ಹೆಚ್ಚಾಗಲು ಕಾರಣ ಎಂದು ತಪ್ಪನ್ನು ಜನರ ಮೇಲೆ ಹೇರಲು ಪ್ರಯತ್ನಿಸುತ್ತಿರುವುದು ಅತ್ಯಂತ ಅನೈತಿಕವಾಗಿದೆ'' ಎಂದು ರಾಜಕಾರಣಿಗಳ ಇಬ್ಬಗೆ ನೀತಿಯನ್ನು ಟೀಕಿಸಿದ್ದಾರೆ ಕವಿರಾಜ್.
''ನಿಮ್ಮ ಅವಾಂತರ , ಅವಿವೇಕತನ, ಅಸಮರ್ಥತೆಗಳಿಗೆ ಜನರನ್ನು ಹೊಣೆಗಾರರಾಗಿಸಿ ಇನ್ನಷ್ಟು ಸಂಕಷ್ಟಕ್ಕೆ ದೂಡಬೇಡಿ. ಪರಿಣಾಮಕಾರಿ ಮುನ್ನೆಚ್ಚರಿಕೆ , ನಿಯಂತ್ರಣ ಕ್ರಮಗಳನ್ನು ಬಿಗಿಯಾಗಿ ಜಾರಿಗೊಳಿಸಿ ಸಾಧ್ಯವಾದಷ್ಟು ಸಹಜ ಜನಜೀವನಕ್ಕೆ ಅನುವು ಮಾಡಿಕೊಡಿ. ತೀರಾ ಕಡಿಮೆ ಜನ ಓಡಾಡುವ ನೈಟ್ ಹೊತ್ತಲ್ಲಿ ಕರ್ಫ್ಯೂ , ಒಂದು ಸೀಟ್ ಗ್ಯಾಪ್ ಬಿಟ್ಟು ಕುಳಿತ ಕೂಡಲೇ ಕರೊನಾ ಬರುವುದಿಲ್ಲವೇನೋ ಎನ್ನುವಂತಿರುವ 50:50 ರೂಲ್ಸ್ ಗಳೆಲ್ಲ ಒಂದು ರೀತಿ ಹಾಸ್ಯಾಸ್ಪದ ರೂಲ್ಸ್ ಗಳೇ . ಅದರ ಬದಲು ಎಲ್ಲರೂ ವ್ಯಾಕ್ಸಿನ್ ಹಾಕಿಸುವ ವ್ಯವಸ್ಥೆ ಆಗಲಿ . ಜೊತೆಗೆ ಮಾಸ್ಕ್ , ಸಾಮಾಜಿಕ ಅಂತರ , ಎಲ್ಲಿಗೆ ಆಗಲಿ ಪ್ರವೇಶಕ್ಕೆ ಮುನ್ನ ಸ್ಯಾನಿಟೈಸೇಷನ್ ಕಡ್ಡಾಯವಾಗಲಿ. ಲಾಕ್ ಡೌನ್ ಕೊನೆಯ ಆಯ್ಕೆಯಾಗಿರಲಿ'' ಎಂದು ಸಲಹೆ ನೀಡಿದ್ದಾರೆ ಕವಿರಾಜ್.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕವಿರಾಜ್, ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಸಿನಿಮಾ ರಂಗದ ಗೆಳೆಯರನ್ನು ಒಟ್ಟು ಮಾಡಿಕೊಂಡು 'ಉಸಿರು' ಬಳಗ ಕಟ್ಟಿ ಕೊರೊನಾ ಪೀಡಿತರಿಗೆ ನೇರವಾಗಿ ಸಹಾಯ ಮಾಡಿದ್ದರು. ಆಮ್ಲಜನಕ ಪೂರೈಕೆ ಮಾತ್ರವೇ ಅಲ್ಲದೆ ಇನ್ನೂ ಹಲವು ರೀತಿಯಲ್ಲಿ ನೆರವಾಗಿದ್ದರು.


Click it and Unblock the Notifications











