"ನನ್ನ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ": ಅಭಿಮಾನಿಗಳಲ್ಲಿ ದರ್ಶನ್ ವಿಶೇಷ ಮನವಿ
ಚಾಲೆಂಜಿಂಗ್ ದರ್ಶನ್ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಅಭಿಮಾನಿಗಳು ಆ ದಿನ ನೆಚ್ಚಿನ ನಟನನ್ನು ನೋಡಿ ಕೈ ಕುಲುಕಿ ಶುಭ ಹಾರೈಸಲು ಕಾಯುತ್ತಿದ್ದಾರೆ. ಇದರ ನಡುವೆ ನಟ ದರ್ಶನ್ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ನಟ ದರ್ಶನ್ ಕೆಲ ವರ್ಷಗಳ ಹಿಂದೆಯೇ ಅದ್ಧೂರಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಕಳೆದೆರಡು ವರ್ಷಗಳಿಂದ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಒಮ್ಮೆ ಕೊರೋನಾ ಅಡ್ಡಗಾಲು ಹಾಕಿದರೆ ಕಳೆದ ಬಾರಿ ಅಪ್ಪು ಅಗಲಿಕೆಯ ಹಿನ್ನೆಲೆಯಲ್ಲಿ ದರ್ಶನ್ ಸಂಭ್ರಮಾಚರಣೆ ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಈ ಬಾರಿ 'ಕ್ರಾಂತಿ' ಸಿನಿಮಾ ಸಕ್ಸಸ್ ಬೆನ್ನಲ್ಲೇ ನೆಚ್ಚಿನ ನಟನ ಹುಟ್ಟುಹಬ್ಬ ಬರ್ತಿದೆ. ಇದು ಸಹಜವಾಗಿಯೇ ಅಭಿಮಾನಿಗಳಲ್ಲಿ ಸಂತಸ ಹೆಚ್ಚಿಸಿದೆ.
ಹುಟ್ಟುಹಬ್ಬ ಹತ್ತಿರವಾಗುತ್ತಿದ್ದಂತೆ ಪ್ರೀತಿಯ ಅಭಿಮಾನಿಗಳಲ್ಲಿ ನಟ ದರ್ಶನ್ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ನನ್ನ ಹುಟ್ಟುಹಬ್ಬದ ಹೆಸರಿನಲ್ಲಿ ದುಂದು ವೆಚ್ಚ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.

ಹಾರ, ಬ್ಯಾನರ್, ಕೇಕ್ ಬೇಡ
"ಬ್ಯಾನರ್, ಕೇಕ್ ಹಾಗೂ ಹಾರಗಳನ್ನು" ದಯಮಾಡಿ ತರಬೇಡಿ. ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ, ಭೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನಿಡಿ. ಅದನ್ನು ಒಗ್ಗೂಡಿಸಿ ಸೇರಿಸಬೇಕಾದ ಅನಾಥಾಶ್ರಮ ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನನ್ನದು" ಎಂದು ದರ್ಶನ್ ಹೇಳಿದ್ದಾರೆ. ಕಳೆದ ಕೆಲ ವರ್ಷಗಳಿಂದ ಇದನ್ನು ಅಭಿಮಾನಿಗಳು ಕೂಡ ಮಾಡುತ್ತಾ ಬಂದಿದ್ದಾರೆ. ಟನ್ಗಟ್ಟಲೆ ದವಸ ಧಾನ್ಯವನ್ನು ಅವಶ್ಯಕ ಇರುವವರಿಗೆ ತಲುಪುವಂತೆ ಮಾಡಿದ್ದಾರೆ.

ನನ್ನ ಕೋರಿಕೆಯನ್ನು ನಡೆಸಿಕೊಡುತ್ತೀರಾ
"ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಮನೆಯ ಅಕ್ಕ-ಪಕ್ಕದ ನಿವಾಸಿಗಳಿಗೆ ನಿಮ್ಮಿಂದ ತೊಂದರೆಯಾಗುವುದು, ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು, ಹೂ ಕುಂಡಗಳನ್ನು ಬೀಳಿಸುವುದು ಹಾಗೂ ಅವರ ಸ್ವತ್ತುಗಳಿಗೆ ಹಾನಿ ಮಾಡುವುದು, ಇಂತಹ ಅನುಚಿತ ವರ್ತನೆ ನಡೆಯಬಾರದು. ನನ್ನ ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ ಈ ನನ್ನ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ. ಹಾಗು ಸಂಘದ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕೆಂದು ವಿನಂತಿಸುತ್ತೇನೆ.

ಸ್ಪೆಷಲ್ ಸಿಡಿಪಿ ಡಿಸೈನ್
ಫೆಬ್ರವರಿ 16ರಂದು ದರ್ಶನ್ ಹುಟ್ಟುಹಬ್ಬ. ಅಂದೇ ಅಭಿಮಾನಿಗಳಿಗೆ ದೀಪಾವಳಿ, ಯುಗಾದಿ ಸಂಭ್ರಮ. ದರ್ಶನ್ ಈ ವರ್ಷ 46ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಅಭಿಮಾನಿಗಳು ನೆಚ್ಚಿನ ನಟನ ಆಣತಿಯಂತೆ ಹುಟ್ಟುಹಬ್ಬಕ್ಕೆ ಖರ್ಚು ಮಾಡುವ ಹಣದಲ್ಲಿ ದವಸ ಧಾನ್ಯವನ್ನು ಅವಶ್ಯಕತೆ ಇರುವವರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ದರ್ಶನ್ ಹುಟ್ಟುಹಬ್ಬಕ್ಕಾಗಿ ಸ್ಪೆಷಲ್ ಕಾಮನ್ ಡಿಪಿ ಕೂಡ ಸಿದ್ಧವಾಗಲಿದೆ. ಅದನ್ನು ಟ್ವಿಟ್ಟರ್ನಲ್ಲಿ ಟ್ರೆಂಡ್ ಮಾಡುವ ಸಾಧ್ಯತೆಯಿದೆ.

ದರ್ಶನ್ ಬರ್ತ್ಡೇಗೆ D56 ಗಿಫ್ಟ್
ಇನ್ನು ದರ್ಶನ್ ಹುಟ್ಟಹಬ್ಬದ ಸಂಭ್ರಮದಲ್ಲಿ D56 ಚಿತ್ರತಂಡದಿಂದ ಸ್ಪೆಷf ಉಡುಗೊರೆ ಸಿಗಲಿದೆ. ತರುಣ್ ಸುಧೀರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಬಹಳ ವಿಭಿನ್ನವಾದ ಪಾತ್ರದಲ್ಲಿ ದರ್ಶನ್ ನಟಿಸ್ತಿದ್ದು ರಾಧನಾ ರಾಮ್ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ರಾಕ್ಲೈವ್ ವೆಂಕಟೇಶ್ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಒಂದಷ್ಟು ಚಿತ್ರೀಕರಣ ಕೂಡ ನಡೆದಿದೆ. ಫೆಬ್ರವರಿ 16ಕ್ಕೆ ದರ್ಶನ್ ಹುಟ್ಟುಹಬ್ಬದ ವಿಶೇಷವಾಗಿ ಸಣ್ಣ ಟೀಸರ್ ಝಲಕ್ ಜೊತೆ ಸಿನಿಮಾ ಟೈಟಲ್ ಅನೌನ್ಸ್ ಮಾಡುವ ಸಾಧ್ಯತೆಯಿದೆ.


Click it and Unblock the Notifications











