"ಶಿವಣ್ಣ ನಿರುದ್ಯೋಗಿಯಾಗಬೇಕಿಲ್ಲ, ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು": ಕುಮಾರ್ ಬಂಗಾರಪ್ಪ
ಸೊರಬದ ಕುಟುಂಬ ಮತ್ತು ದ್ವೇಷ ರಾಜಕಾರಣ ಬಹಳ ಚರ್ಚೆಗೆ ಗ್ರಾಸವಾಗುತ್ತಲೇ ಬರುತ್ತಿದೆ. ಮಾಜಿ ಸಿಎಂ ಬಂಗಾರಪ್ಪನವರ ಮಕ್ಕಳಾದ ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ನಡುವೆ ಶೀತಲ ಸಮರ ಮುಂದುವರೆದಿದೆ. ಚುನಾವಣೆಗಳ ಸಮಯದಲ್ಲೇ ಅದು ಪದೇ ಪದೆ ಭುಗಿಲೇಳುತ್ತದೆ. ಇನ್ನು ಸಹೋದರಿ ಗೀತಾ ಶಿವರಾಜ್ಕುಮಾರ್ ಈ ಬಾರಿ ಶಿವಮೊಗ್ಗದ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾರೆ.
ಗೀತಾ ಸಹೋದರ ಮಧು ಬಂಗಾರಪ್ಪ ಜೊತೆ ಗುರ್ತಿಸಿಕೊಂಡಿದ್ದಾರೆ. ಅಣ್ಣ-ತಮ್ಮರ ಜಗಳ ಮುಂದುವರೆದಿದೆ. ಕುಮಾರ್ ಬಂಗಾರಪ್ಪ ಬಿಜೆಪಿ ಪಕ್ಷದಲ್ಲಿದ್ದಾರೆ. ಇನ್ನು ಮಧು ಕಾಂಗ್ರೆಸ್ ಶಾಸಕರಾಗಿದ್ದಾರೆ. ಶಿಕ್ಷಣ ಸಚಿತವಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ಬಾರಿ ಸಹೋದರಿ ಗೀತಾ ಅವರನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಗೆಲ್ಲಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದರೆ ಅದರಲ್ಲಿ ಯಶಸ್ವಿ ಆಗಲಿಲ್ಲ. ಗೀತಾ ಎದುರು ಬಿ. ವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.

ಬಿ. ವೈ ರಾಘವೇಂದ್ರ ಒಟ್ಟು 778721 ಮತ ಗಳಿಸಿಸಿದ್ದಾರೆ. ಗೀತಾ ಶಿವರಾಜ್ಕುಮಾರ್ 535006 ಮತಗಳನ್ನು ಗಳಿಸಿ 243715 ಮತಗಳ ಅಂತರದಲ್ಲಿ ಸೋತಿದ್ದಾರೆ. ಗೀತಾ ಪರ ಪತಿ ನಟ ಶಿವರಾಜ್ಕುಮಾರ್ ಭರ್ಜರಿ ಪ್ರಚಾರ ನಡೆಸಿದ್ದರು. ದುನಿಯಾ ವಿಜಯ್, ಅನುಶ್ರೀ ಸೇರಿದಂತೆ ಕೆಲ ತಾರೆಯರು ಕೈ ಜೋಡಿಸಿದ್ದರು. ಗೀತಾ ಸೋಲಿನ ಬಗ್ಗೆ ಸುದೀರ್ಘ ಪೋಸ್ಟ್ ಮಾಡಿ ಕುಮಾರ್ ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಮಧು, ಶಿವಣ್ಣ, ಗೀತಾ ಎಲ್ಲರ ಬಗ್ಗೆ ವ್ಯಂಗ್ಯವಾಡಿದ್ದಾರೆ.
"ಧಿರೋದ್ದಾತ ನಾಯಕ ಬಂಗಾರಪ್ಪ ಅವೆರನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ. ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ" ಎಂದಿದ್ದಾರೆ.

"ಕನ್ನಡದ ಕಣ್ಮಣಿ ಡಾ. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೇ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆoದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು" ಎಂದು ಕುಮಾರ್ ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ.
"ಶಿವರಾಜ್ಕುಮಾರ್ ಅವರ ಕ್ಷೇತ್ರ, ಸಿನಿಮಾ ಅದನ್ನು ನಿಭಾಯಿಸಿಕೊಂಡಿರುವುದು ಆರೋಗ್ಯಕರ. ಈ ವಿಜಯೋತ್ಸವದ ಕೊಡುಗೆ ಜಿಲ್ಲೆಯ ಹಾಗೂ ಲೋಕ ಸಭಾ ಕ್ಷೇತ್ರದ ಮತದಾರರಿಂದ ಲಭಿಸಿದ್ದು, ಅವರಿಗೆ ನಾವು ಚಿರಋಣಿಗಳಾಗಿರುತ್ತೇವೆ. ಅವರ ಆಶಯಗಳನ್ನು ಸಾಕಾರಗೊಳಿಸುತ್ತೇವೆ. ಅವರ ನಂಬಿಕೆಗೆ ಚ್ಯುತಿಬಾರದಂತೆ ನಡೆದುಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು, ಹಿರಿಯ -ಕಿರಿಯ ಪದಾಧಿಕಾರಿಗಳು, ಸಂಘಟನೆಯಲ್ಲಿ ತೊಡಗಿಸಿಕೊಂಡ ಬ್ರಿಗೇಡ್/ಶಿಸ್ತಿನ ಸಿಪಾಯಿಗಳು ಹಗಲಿರುಲೆನ್ನದೆ ದುಡಿದು ರಾಘವೇಂದ್ರರಿಗೆ ಅತ್ಯಧಿಕ ಬಹುಮತದಿಂದ ವಿಜಯಶಾಲಿಯನ್ನಾಗಿಸಿದ್ದಾರೆ ಅವರೆಲ್ಲರಿಗೂ ನನ್ನ ನಮನಗಳು." ಧನ್ಯವಾದ ತಿಳಿಸಿದ್ದಾರೆ.
"ಇನ್ನು ನನ್ನ ತಮ್ಮ ಮಧು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು, ಇಲ್ಲ CM ಅವನನ್ನು ಸಂಪುಟ ದಿಂದ ವಜಾ ಮಾಡಬೇಕು. ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೊಲ್ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ ಭಾವ, ನನ್ನ ತಂಗಿಯ ಗಂಡ ಡಾ. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು. ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ, ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು" ಎಂದು ಅಣಕವಾಡಿದ್ದಾರೆ.
"ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು.ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು" ಎಂದು ಕುಮಾರ್ ಬಂಗಾರಪ್ಪ ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.


Click it and Unblock the Notifications











