"ಜವಾಬ್ದಾರಿ ಅರಿತು ಕಡ್ಡಾಯವಾಗಿ ಯೋಗ್ಯ ವ್ಯಕ್ತಿಗೆ ಮತದಾನ ಮಾಡಿ" ಮಂಡ್ಯದ ಜನತೆಗೆ ನೀನಾಸಂ ಸತೀಶ್ ಕರೆ!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಒಂದು ಕಡೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ತರಾತುರಿಯಲ್ಲಿವೆ. ಇನ್ನೊಂದು ಕಡೆ ಚುನಾವಣಾ ಅಖಾಡಕ್ಕೆ ಇಳಿಯೋ ಅಭ್ಯರ್ಥಿಗಳು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಇನ್ನೊಂದು ಕಡೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸೇರಿದಂತೆ ಆಡಳಿತ ವಲಯಗಳು ಕೂಡ ಚುನಾವಣೆಗೆ ಭರ್ಜರಿಯಾಗಿ ಸಿದ್ದತೆ ನಡೆಸುತ್ತಿದೆ. ಸದ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮಂಡ್ಯದ ಯೂತ್ ಐಕಾನ್ ಆಗಿ ಆಯ್ಕೆಯಾಗಿರೋ ನೀನಾಸಂ ಸತೀಶ್ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಯ್ತು.

"2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮೇ.10 ರಂದು ಮತದಾನ ನಡೆಯಲಿದೆ. ಅಂದಿನ ದಿನ ಯುವಕರು ಹಾಗೂ ಪ್ರಜ್ಞಾವಂತ ನಾಗರೀಕರು ಪ್ರಜ್ಞೆಯಿಂದ ಮತದಾನ ಮಾಡಿ ಈ ರಾಜ್ಯದ ಭವಿಷ್ಯ ಬರೆಯಬೇಕು. ಬದಲಾವಣೆ ಮಾಡುವ ಶಕ್ತಿ ನಿಮ್ಮ ಕೈಯಲ್ಲಿದೆ. ಜವಾಬ್ದಾರಿ ಅರಿತು ಕಡ್ಡಾಯವಾಗಿ ಯೋಗ್ಯ ವ್ಯಕ್ತಿಗೆ ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಬೇಕು" ಎಂದು ಮಂಡ್ಯ ಯೂತ್ ಐಕಾನ್ ಆಗಿ ಆಯ್ಕೆಯಾಗಿರುವ ಚಲನಚಿತ್ರ ನಟ ನೀನಾಸಂ ಸತೀಶ್ ಈ ಸಂದರ್ಭದಲ್ಲಿ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ನಗರದ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿರುವ ಶಾರದಾ ಮಂದಿರದಲ್ಲಿ ಆಯೋಜಿಸಿದ್ದ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಮತದಾರರ ಪಾಲ್ಗೊಳ್ಳುವಿಕೆ (ಸ್ವೀಪ್) ಕುರಿತು ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. "ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ" ಎಂದು ಸತೀಶ್ ಹೇಳಿದ್ದಾರೆ.
ಮತದಾನ ಮಾಡುವುದು ಹಕ್ಕು ಹಾಗೂ ಕರ್ತವ್ಯ. ಮತದಾನದ ಮಹತ್ವದ ಬಗ್ಗೆ ಜ್ಞಾನ ಹೆಚ್ಚಿಸಿಕೊಂಡು, ಸಮಾಜಕ್ಕೆ ಏನಾದರೂ ಒಳ್ಳೆಯದು ಮಾಡುವ ನಿಟ್ಟಿನಲ್ಲಿ ಆಲೋಚನೆ ಮಾಡಬೇಕಿದೆ ಎಂದರು. ಯುವಕರು ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕಿದೆ ನಮ್ಮ ಸುತ್ತಮುತ್ತಲೂ ಇರುವ ಸಮಸ್ಯೆಗಳ ಬಗ್ಗೆ ಪರಿಹಾರ ಮಾಡುವ ನಿಟ್ಟಿನಲ್ಲಿ ಚಿಂತಿಸಬೇಕಿದೆ ಎಂದರು.
ಜೀವನದಲ್ಲಿ ಗುರಿ ಇಟ್ಟುಕೊಳ್ಳಿ, ಉತ್ತಮ ವ್ಯಾಸಂಗ ಮಾಡುವ ಮೂಲಕ ಆ ಗುರಿ ಸಾಧಿಸಿ, ಸಮಾಜಕ್ಕೆ ನಮ್ಮಿಂದ ಏನಾದರೂ ಸಹಾಯ ಆಗಬೇಕು. ಆಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದರು. ಚಲನಚಿತ್ರ ಗೀತೆಗಳು ಹಾಗೂ ಸಿನಿಮಾ ಡೈಲಾಗ್ಗಳನ್ನು ಹೇಳಿ ವಿದ್ಯಾರ್ಥಿಗಳನ್ನು ರಂಜಿಸಿದರು. ಬಳಿಕ ಮತದಾನ ಜಾಗೃತಿಯ ಸಹಿ ಅಭಿಯಾನದಲ್ಲಿ ಪಾಲ್ಗೊಂಡರು. ನಂತರ ಮತದಾನದ ಸೆಲ್ಫಿ ಕ್ಲಿಕ್ಕಿಸಿಕೊಂಡಿ ಸಂಭ್ರಮಿಸಿದರು.
ಕಳೆದ ವಿಧಾನಸಭಾ ಚುನಾವಣಾಯಲ್ಲಿ ಶೇಕಡವಾರು ಮತದಾನದಲ್ಲಿ ಮಂಡ್ಯ ಜಿಲ್ಲೆ ಎರಡನೇ ಸ್ಥಾನದಲ್ಲಿತ್ತು. ಈ ಬಾರಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದ್ರು.
ಈಗಾಗಲೇ ಮತದಾರರಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ರಾಯಭಾರಿಗಳಾಗಿ ಚಲನಚಿತ್ರ ನಟ ನೀನಾಸಂ ಸತೀಶ್ ಹಾಗೂ ವಿಕಲಚೇತನ ರಾಯಭಾರಿಯಾಗಿ ಡಾ.ಚಲುವರಾಜ್ ಅವರನ್ನು ಆಯ್ಕೆ ಮಾಡಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಸುಶಿಕ್ಷಿತರೇ ಹಾಗೂ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿರುವ ನಗರ ಪ್ರದೇಶಗಳಲ್ಲಿ ಶೇ.೭೦ ರಷ್ಟು ಮತದಾನವಾಗುತ್ತಿದೆ. ಇಂತಹ ಕಡೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.


Click it and Unblock the Notifications











