ಸಿನಿಮೋತ್ಸವ ರದ್ದುಗೊಳಿಸಿ, ಮೀಸಲಿಟ್ಟ ಹಣ ಕಾರ್ಮಿಕರಿಗೆ ನೀಡಿ; ನಿರ್ದೇಶಕ ಮನ್ಸೋರೆ
ಕೊರೊನಾ ಲಾಕ್ ಡೌನ್ನಿಂದ ಸಾಕಷ್ಟು ಜನರ ಬದುಕು ಬೀದಿಗೆ ಬಂದಿದೆ. ಎಲ್ಲಾ ಉದ್ಯಮ ಕ್ಷೇತ್ರಗಳು ಕಂಗಾಲಾಗಿವೆ. ಸಿನಿಮಾ ಕ್ಷೇತ್ರ ಕೂಡ ಸಂಕಷ್ಟದಲ್ಲಿದೆ. ಕೆಲವು ಸ್ಟಾರ್ ಕಲಾವಿದರು ಸಿನಿಮಾ ಕಾರ್ಮಿಕರಿಗೆ ನೆರವಾಗುತ್ತಿದ್ದಾರೆ. ಆದರೂ ಕಾರ್ಮಿಕರ ಬದುಕು ತೀರ ಸಂಕಷ್ಟಕ್ಕೆ ಸಿಲುಕಿದೆ.
ಇದೀಗ ನಿರ್ದೇಶಕ ಮಂಸೋರೆ ಸರ್ಕಾರಕ್ಕೆ ಒಂದು ಮನವಿ ಮಾಡಿಕೊಂಡಿದ್ದಾರೆ. ಈ ಬಾರಿ ನಡೆಯಬೇಕಿದ್ದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಚಿತ್ರೋತ್ಸವಕ್ಕೆ ಕೋಟ್ಯಂತರ ಹಣ ಮೀಸಲಿಡಲಾಗಿದೆ. ಈ ಹಣವನ್ನು ಬಡಕಾರ್ಮಿಕರಿಗೆ ನೀಡಿದರೆ ಒಳಿತು ಎಂದು ನಿರ್ದೇಶಕ ಮಂಸೋರೆ ಅಭಿಪ್ರಾಯ ಪಟ್ಟಿದ್ದಾರೆ.
ಈ ಬಗ್ಗೆ ಮಂಸೋರೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಚಿತ್ರೋತ್ಸವಕ್ಕಿಂತ ಜೀವ ಉಳಿಸುವುದು ಮುಖ್ಯ ಎಂದು ಹೇಳಿದ್ದಾರೆ.

'ಕೋವಿಡ್ನಿಂದಾಗಿ ಇಡೀ ರಾಜ್ಯ ದೇಶ ತತ್ತರಿಸಿದೆ. ಪ್ರತಿಯೊಬ್ಬ ಪ್ರಜೆಯೂ ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಕೋವಿಡ್ ತಡೆಯಲು ಲಾಕ್ಡೌನ್ ಹೇರಿದೆ. ಇದೇ ಸಂದರ್ಭದಲ್ಲಿ ಚಿತ್ರರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೆ ಆರ್ಥಿಕ ಭದ್ರತೆ ಇಲ್ಲದೆ ನರಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷರು ಸರ್ಕಾರಕ್ಕೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಮನವಿ ಮಾಡಿದ್ದಾರೆ.
'ಈಗಾಗಲೇ ಸರ್ಕಾರ ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಈ ಸಂದರ್ಭದಲ್ಲಿ ಸರ್ಕಾರದ ವಿಶೇಷ ಪ್ಯಾಕೇಜ್ಗಾಗಿ ಕಾಯದೇ, ಈ ಬಾರಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಅದಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಕಾರ್ಮಿಕರಿಗೆ ವಿತರಿಸುವುದು ಹೆಚ್ಚು ಅರ್ಥಪೂರ್ಣ ಎನ್ನುವುದು ನನ್ನ ಭಾವನೆ.

Recommended Video
'ಕೋವಿಡ್ ಕಾರಣದಿಂದ ಈಗಾಗಲೇ ಸಾಕಷ್ಟು ಜನ ತೀರಿಕೊಂಡಿದ್ದಾರೆ. ಮುಂದೆ ಜೀವನ ಹೇಗೋ ಎಂದು ನೂರಾರು ಕುಟುಂಬಗಳು ಕಂಗಾಲಾಗಿವೆ. ಇಂತಹ ಸಂದರ್ಭಗದಲ್ಲಿ ಚಿತ್ರೋತ್ಸವಕ್ಕಿಂತ ಜೀವಗಳನ್ನು ಕಾಪಾಡಿಕೊಳ್ಳುವುದು ಆದ್ಯತೆಯಾಗಲಿ ಎಂಬುದು ನನ್ನ ಕೋರಿಕೆ. ಈ ಬಾರಿಯ ಅಂತರ್ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಮ್ಮ ಆಕ್ಟ್-1978 ಸಿನೆಮಾವನ್ನು ಕೂಡ ಸ್ಪರ್ಧೆಗೆ ಕಳುಹಿಸಲಾಗಿದೆ. ಹಾಗಿದ್ದರೂ ಕೂಡ ನನಗೆ ಚಿತ್ರೋತ್ಸವ ರದ್ದಾಗುವುದರ ಬಗ್ಗೆ ಯಾವ ಬೇಸರವೂ ಇಲ್ಲಾ. ಈಗ ಎಲ್ಲದಕ್ಕಿಂತ ಜೀವ-ಜೀವನ ಮುಖ್ಯ' ಎಂದಿದ್ದಾರೆ.


Click it and Unblock the Notifications











