ತಮನ್ನಾಗೆ ₹6.2 ಕೋಟಿ ಕೊಟ್ಟು ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯನ್ನಾಗಿ ನೇಮಿಸಿದ್ಯಾಕೆ? ಸಚಿವರ ಸ್ಪಷ್ಟನೆ
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಆಯ್ಕೆ ಆಗಿದ್ದಾರೆ. ಆದರೆ ಇದಕ್ಕೆ ಸಾಕಷ್ಟು ಆಕ್ಷೇಪ ವ್ಯಕ್ತವಾಗುತ್ತಿದೆ. ಕನ್ನಡಪರ ಸಂಘಟನೆಗಳು ಕೂಡ ಇದನ್ನು ಖಂಡಿಸಿದೆ. ಕರ್ನಾಟಕದ ಉತ್ಪನ್ನಕ್ಕೆ ಕನ್ನಡ ನಟಿಯನ್ನೇ ರಾಯಭಾರಿಯನ್ನಾಗಿ ನೇಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ತನ್ನ ಬ್ರಾಂಡ್ ರಾಯಭಾರಿಯಾಗಿ ತಮನ್ನಾ ಅವರನ್ನು ನೇಮಿಸಿದೆ. ಈ ಸಂಬಂಧ ಒಪ್ಪಂದ ನಡೆದಿದ್ದು ಅದರ ಖಚಿತ ಮಾಹಿತಿ ಲಭ್ಯವಾಗಿದೆ. ಜಾಹೀರಾತು ಚಿತ್ರೀಕರಣಕ್ಕಾಗಿ ಹೆಚ್ಚು ಕಡಿಮೆ ಎರಡು ದಿನ ತಮನ್ನಾ ಕೆಲಸ ಮಾಡಬಹುದು. ಅದಕ್ಕಾಗಿ ಭಾರೀ ಮೊತ್ತದ ಸಂಭಾವನೆ ಕೊಡಬೇಕಿತ್ತೆ? ಒಂದು ವೇಳೆ ಪ್ರಚಾರಕ್ಕಾಗಿ ನಟಿ- ನಟಿಯರನ್ನು ಆಯ್ಕೆ ಮಾಡಿಕೊಳ್ಳಬೇಕಿದ್ದರೆ ಕನ್ನಡದವರೇ ಸಾಕಷ್ಟು ಜನ ಇದ್ದಾರಲ್ಲ ಎಂದು ಕೆಲವರು ಚಕಾರ ಎತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಕೂಡ ಈ ಬಗ್ಗೆ ಸಾಕಷ್ಟು ಚರ್ಚೆ ನಡೀತಿದೆ. ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಕರ್ನಾಟಕದ ಹಣ ಬೇರೆಯವರ ಪಾಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡ್ರು ಈ ಬಗ್ಗೆ ಸುದೀರ್ಘವಾಗಿ 'X' ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ. "ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ" ಎಂದು ಆಕ್ರೋಶ ಹೊರ ಹಾಕಿದ್ದಾರೆ.
"ತಮನ್ನಾ ಭಾಟಿಯಾ ಅವರು ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸೋಪ್ಸ್ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ. ಹಿಂದಿ ಚಿತ್ರರಂಗದ ನಟಿಯರನ್ನು ಆಯ್ಕೆ ಮಾಡುವ ಮೂಲಕ ಕರ್ನಾಟಕದ ಸ್ಥಳೀಯ ಸಂಸ್ಕೃತಿಯ ಮೇಲೆ ಹಿಂದಿ ಸಂಸ್ಕೃತಿಯನ್ನು ಹೇರಲು ಪ್ರಯತ್ನಿಸುವುದು ಕರ್ನಾಟಕ ರಕ್ಷಣಾ ವೇದಿಕೆಗೆ ಸ್ವೀಕಾರಾರ್ಹವಲ್ಲ. ಸರ್ಕಾರ ಕೂಡಲೇ ತಮನ್ನಾ ಭಾಟಿಯಾ ಅವರ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು." ಎಂದು ನಾರಾಯಣ ಗೌಡ್ರು ಆಗ್ರಹಿಸಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ ಆಯ್ಕೆ ಬಗ್ಗೆ ವಿವಾದ ಭುಗಿಲೇಳುತ್ತಿದ್ದಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಮೂಲಸೌಕರ್ಯ ಸಚಿವರಾದ ಎಂ. ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. 'X' ವೇದಿಕೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿ ಪೋಸ್ಟ್ ಮಾಡಿದ್ದಾರೆ. "ನಟಿ ತಮನ್ನಾ ಭಾಟಿಯಾ ಅವರನ್ನು ಬ್ರಾಂಡ್ ರಾಯಭಾರಿಯನ್ನಾಗಿ ನೇಮಿಸಿರುವುದರ ಹಿಂದೆ ಸಾಕಷ್ಟು ಅಂಶಗಳನ್ನು ಪರಿಗಣಿಸಿ, ಮಾನದಂಡಗಳನ್ನು ಅನುಸರಿಸಲಾಗಿದೆ. ಪ್ಯಾನ್ ಇಂಡಿಯಾ ಖ್ಯಾತಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯತೆ, ಯುವ ಸಮೂಹದ ಫಾಲೋವರ್ಸ್ ಒಳಗೊಂಡಂತೆ ನಾನಾ ಕೋನಗಳಲ್ಲಿ ಆಲೋಚಿಸಿ ನಿರ್ಧಾರ ಕೈಗೊಳ್ಳಲಾಗಿದೆ" ಎಂದು ಬರೆದುಕೊಂಡಿದ್ದಾರೆ.
ಬಳಿಕ ಮುಂದುವರೆದು "ನಮ್ಮ ಉತ್ಪನ್ನಗಳನ್ನು ವಿಶ್ವದೆಲ್ಲೆಡೆ ವಿಜೃಂಭಿಸುವಂತೆ ಮಾಡುವ ಕಾಯಕದಲ್ಲಿ ಇದು ಒಂದು ಭಾಗವಷ್ಟೆ. ಈ ಕಾರ್ಯವು ಕೇವಲ ಒಂದು ತಂತ್ರದ ಮೇಲೆ ಅವಲಂಬಿತವಾಗಿಲ್ಲ" ಎಂದು ಸಚಿವರು ತಿಳಿಸಿದ್ದಾರೆ. ತಮನ್ನಾ ಭಾಟಿಯಾ ಆಯ್ಕೆ ಪರ ಕೂಡ ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ. ಒಟ್ಟಾರೆ ಈ ವಿವಾದ ತಣ್ಣಗಾಗುತ್ತಾ ಕಾದು ನೋಡಬೇಕಿದೆ.
ನಟಿ ತಮನ್ನಾ ಕನ್ನಡದ ಯಾವುದೇ ಚಿತ್ರದಲ್ಲಿ ನಟಿಸಿಲ್ಲ. ಆದರೆ 'ಜಾಗ್ವಾರ್' ಹಾಗೂ 'ಕೆಜಿಎಫ್' ಚಿತ್ರಗಳ ಸ್ಪೆಷಲ್ ಸಾಂಗ್ಗಳಲ್ಲಿ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದರು.


Click it and Unblock the Notifications











