ಖ್ಯಾತ ಸಂಗೀತ ನಿರ್ದೇಶಕ ಎಂ.ಎಸ್.ವಿಶ್ವನಾಥನ್ ವಿಧಿವಶ
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಎಂ.ಎಸ್.ವಿಶ್ವನಾಥನ್ ಅವರು ವಿಧಿವಶರಾಗಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಮಂಗಳವಾರ (ಜುಲೈ 14)ರಂದು ಮೃತಪಟ್ಟಿದ್ದು, ಬುಧವಾರ ಅಂತ್ಯಸಂಸ್ಕಾರ ನಡೆಯಲಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಎಂ.ಎಸ್.ವಿಶ್ವನಾಥನ್ (87) ಅವರನ್ನು ಎರಡು ವಾರಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಂಗಳವಾರ ಮುಂಜಾನೆ 4.15ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ವಿಶ್ವನಾಥನ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬ ವರ್ಗದವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. [ವಿಶ್ವನಾಥನ್ ಬಗ್ಗೆ ಓದಿ]
ಎಂಎಸ್ವಿ ಎಂದೇ ಖ್ಯಾತರಾಗಿದ್ದ ವಿಶ್ವನಾಥನ್ ಅವರು ಕನ್ನಡ, ತಮಿಳು, ತೆಲಗು, ಮಲೆಯಾಳಂ ಸೇರಿದಂತೆ ಸುಮಾರು 1,200 ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದರು. ಇತ್ತೀಚಿನ ದಿನಗಳಲ್ಲಿ ಕಿರುತೆರೆಯಲ್ಲಿನ ಅನೇಕ ಕಾರ್ಯಕ್ರಮಗಳಲ್ಲಿಯೂ ಅವರು ತೊಡಗಿಸಿಕೊಂಡಿದ್ದರು.
ಕನ್ನಡದಲ್ಲಿ ಬೆಂಕಿಯಲ್ಲಿ ಅರಳಿದ ಹೂವು, ಎರಡು ರೇಖೆಗಳು, ತೆನಾಲಿ ರಾಮಕೃಷ್ಣ ಸೇರಿದಂತೆ ಹಲವು ಚಿತ್ರಗಳಿಗೆ ಎಂ.ಎಸ್.ವಿಶ್ವನಾಥನ್ ಸಂಗೀತ ಸಂಯೋಜಿಸಿದ್ದರು.
ಬೆಂಕಿಯಲ್ಲಿ ಅರಳಿದ ಹೂವು ಚಿತ್ರದ ಒಂದು ಹಾಡು


Click it and Unblock the Notifications











