ಹಿಂದಿ ರಾಷ್ಟ್ರ ಭಾಷೆ ಎಂದ ಸಾಹಿತಿ ದೊಡ್ಡರಂಗೇಗೌಡ: ಇದು ಅವರ ಅರಿವಿನ ಕೊರತೆಯಾಗಿರಬಹುದು ಎಂದ ನಿಖಿಲ್
'ಹಿಂದಿ ರಾಷ್ಟ್ರ ಭಾಷೆ ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು' ಎಂದು ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರ್, ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರಿಗೆ ತಿರುಗೇಟು ನೀಡಿದ್ದಾರೆ.
86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ದೊಡ್ಡರಂಗೇಗೌಡ ಅವರು ಇತ್ತೀಚಿಗೆ ಖಾಸಗಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ 'ಹಿಂದಿ ನಮ್ಮ ರಾಷ್ಟ್ರ ಭಾಷೆ, ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಸ್ಥಾನಮಾನವಿದೆ. ಹಿಂದಿಯನ್ನು ಯಾಕೆ ತಿರಸ್ಕಾರ ಮಾಡಬೇಕು. ಇಂಗ್ಲಿಷ್ ಒಪ್ಪುವ ನಾವು ಹಿಂದಿ ಭಾಷೆಯನ್ನು ಏಕೆ ಒಪ್ಪಿಕೊಳ್ಳಬಾರದು' ಎಂದು ಹೇಳಿದ್ದರು.
ದೊಡ್ಡರಂಗೇಗೌಡ ಅವರ ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿರುವ ನಿಖಿಲ್, 'ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು' ಎಂದು ಹೇಳಿದ್ದಾರೆ.

'ನಮ್ಮ ರಾಜ್ಯದ ಪ್ರತಿಯೊಂದು ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ' ಎಂದಿದ್ದಾರೆ.
ಹಿಂದಿ ಹೇರಿಕೆ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಆದರೂ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಆಗುತ್ತಲೆ ಇದೆ. ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿರುವ ಈ ಸಮಯದಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.


Click it and Unblock the Notifications











